ಕರ್ನಾಟಕದಲ್ಲಿ ಮಳೆ ಆರ್ಭಟ; 2 ವರ್ಷಗಳ ನಂತರ ಹೇಮಾವತಿ ಜಲಾಶಯ ಭರ್ತಿ
ಮೈಸೂರು: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ ಬರೊಬ್ಬರಿ 2 ವರ್ಷಗಳ ಬಳಿಕ ಭರ್ತಿಯಾಗಿದೆ.
ಹೌದು.. ಕರ್ನಾಟಕಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿಕೊಳ್ಳದಲ್ಲಿ ವ್ಯಾಪಕ ನೀರು ಹರಿಯುತ್ತಿದ್ದು ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹೇಮಾವತಿ ಜಲಾಶಯ ಭರ್ತಿಯಾಗಿದೆ.
ಪ್ರಸ್ತುತ ಜಲಾಶಯಕ್ಕೆ 23363 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 22532 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರಗೆ ಬಿಡಲಾಗುತ್ತಿದೆ. ಅಂತೆಯೇ ಪ್ರಸ್ತುತ ಜಲಾಶಯದಲ್ಲಿನ ಇಂದಿನ ನೀರಿನ ಮಟ್ಟ 2921.02 ಅಡಿಗಳಿಗೆ ಏರಿಕೆಯಾಗಿದ್ದು, ಹೇಮಾವತಿ ಜಲಾಶಯದ ಗರಿಷ್ಟ ನೀರಿನ ಮಟ್ಟ 2922.00 ಅಡಿಗಳಷ್ಟಿದ್ದು, 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ ಎಂದು ಮೂಲಗಳು ತಿಳಿಸಿವೆ.
ಸದ್ಯ ಜಲಾಶಯದಲ್ಲಿ 36.156 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ವ್ಯಾಪ್ತಿಯ ಎಲ್ಲಾ ಕಾಲುವೆಗಳಿಗೂ ನೀರು ಹರಿಸಲಾಗುತ್ತಿದೆ. ನೀರಾವರಿ ಇಲಾಖೆ, ಕೃಷಿ ಚಟುವಟಿಕೆಗಳು ಹಾಗೂ ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಂಡಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ