
ಬೆಂಗಳೂರು: ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ) ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ 1,351 ಸ್ಥಳಗಳು ಭೂಕುಸಿತಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂಬುದು ತಿಳಿದುಬಂದಿದೆ. ಈ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ವಿಧಾನ ಪರಿಷತ್ನಲ್ಲಿ ಮಂಗಳವಾರ ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ನಲ್ಲಿ ಬಿಜೆಪಿಯ ಸಿ.ಟಿ. ರವಿ, ಎನ್. ರವಿಕುಮಾರ್, ಛಲವಾದಿ ಟಿ. ನಾರಾಯಣಸ್ವಾಮಿ, ಪ್ರತಾಪ್ಸಿಂಹ ನಾಯಕ್, ಭಾರತಿ ಶೆಟ್ಟಿ, ಕೇಶವಪ್ರಸಾದ್, ಪಿ.ಎಚ್. ಪೂಜಾರ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, 250 ಗ್ರಾಮ ಪಂಚಾಯಿತಿಗಳಲ್ಲಿ ಭೂಕುಸಿತ ಉಂಟಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ ಎಂದರು.
ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭೂಕುಸಿತವಾಗುವ ಗ್ರಾಮಗಳನ್ನು ಗುರುತಿಸಲಾಗಿದೆ. ಭಾರತ ಸರ್ಕಾರದ ಭೂವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ (ಎನ್ಐಆರ್ಎಂ) ಸಹಯೋಗದಲ್ಲಿ ಅವರ ಮಾರ್ಗಸೂಚಿಯಂತೆ ಕ್ರಮ ಕೈಗೊಳ್ಳಲಾಗುತ್ತದೆ. ಈ ವರ್ಷ 100 ಕೋಟಿ ರು. ವೆಚ್ಚ ಮಾಡಲು ನಿರ್ಧರಿಸಲಾಗಿದ್ದು, ಅಗತ್ಯಬಿದ್ದರೆ ಇನ್ನಷ್ಟು ಅನುದಾನ ಒದಗಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಭೂಕುಸಿತಕ್ಕೆ ಅನೇಕ ಕಾರಣಗಳಿದ್ದು, ಅದರಲ್ಲಿ ಎರಡು ದಿನದಲ್ಲೇ 50 ಸೆಂ.ಮೀ. ಮಳೆಯಾಗಿರುವುದು ಒಂದಾಗಿದೆ. ರಸ್ತೆ ಹಾಗೂ ಮೂಲಸೌಕರ್ಯಕ್ಕೆ ನೈಸರ್ಗಿಕ ಇಳಿಜಾರುಗಳ ಮಾರ್ಪಾಡು, ನೈಸರ್ಗಿಕ ನದಿಗಳ ತಡೆ, ಕಾಫಿ ಎಸ್ಟೇಟ್ಗಳಲ್ಲಿ ನಿರ್ಮಿಸಿರುವ ನೀರಿನ ಕೊಳಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಇತರೆ ಸಂಸ್ಥೆಗಳು ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿಗಳನ್ನು ನಡೆಸಿರುವುದು ಭೂಕುಸಿತಕ್ಕೆ ಕಾರಣವಾಗಿದೆ. ಭೂವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆ ಮತ್ತು ರಾಜ್ಯ ಸರ್ಕಾರದ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಡೆಸಿದ ಅಧ್ಯಯನದಲ್ಲಿ ಈ ಅಂಶಗಳು ಭೂ ಕುಸಿತಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿವೆ ಎಂದರು.
ತೀವ್ರವಾದ ಅಲ್ಪ ಮಳೆ, ಮೇಘ ಸ್ಫೋಟಗಳು, ನೈಸರ್ಗಿಕ ಇಳಿಜಾರುಗಳೊಂದಿಗೆ ಮಧ್ಯಪ್ರವೇಶಿಸುವುದು ಮತ್ತು ರಸ್ತೆ ನಿರ್ಮಾಣಗಳಂತಹ ಅಭಿವೃದ್ಧಿ ಕಾರ್ಯಗಳಿಗಾಗಿ ನದಿಗಳು ಮತ್ತು ತೊರೆಗಳ ನೈಸರ್ಗಿಕ ಹರಿವನ್ನು ತಿರುಗಿಸುವುದು ಭೂಕುಸಿತಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಅವರು ವರದಿಯನ್ನು ಉಲ್ಲೇಖಿಸಿ ಸಚಿವರು ತಿಳಿಸಿದ್ದಾರೆ.
Advertisement