
ಬೆಂಗಳೂರು: ಇಂದು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತಿದೆ. ಪರಿಸರವನ್ನು ಉಳಿಸಿ, ಬೆಳೆಸುವ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಭೂಮಿ ಪುನಃಸ್ಥಾಪನೆ, ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ ಈ ವರ್ಷದ ಧ್ಯೇಯವಾಕ್ಯವಾಗಿದೆ.
1972ರಲ್ಲಿ ಜೂನ್ 5 ರಂದು ಸ್ವೀಡನ್ನ ಸ್ಟಾಕ್ಹೋಮ್ನಲ್ಲಿ ಮಾನವ ಪರಿಸರ ಸಂಬಂಧದ ಕುರಿತು ವಿಶ್ವಸಂಸ್ಥೆಯು ಸಮ್ಮೇಳನವೊಂದನ್ನು ನಡೆಸಿತ್ತು. ಈ ದಿನವನ್ನು ಗೌರವಿಸಿ 1973ರಲ್ಲಿ ಪ್ರಪಂಚದಾದ್ಯಂತದ ಮೊದಲ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಆ ದಿನವನ್ನು ವಿಶ್ವ ಪರಿಸರ ದಿನ ಎಂದು ಆಚರಿಸುತ್ತಾ ಬರಲಾಗಿದೆ.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ರಾಜಭವನದ ಆವರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅವರ ಕುಟುಂಬದೊಂದಿಗೆ ಕ್ಯಾಸಿಯಾ ಫಿಸ್ಟುಲಾ ಸಸಿಯನ್ನು ನೆಟ್ಟರು. ಈ ಸಂದರ್ಭದಲ್ಲಿ ರಾಜ್ಯಪಾಲರು ಸಸಿಗಳನ್ನು ನೆಟ್ಟು ಪ್ರಕೃತಿಯನ್ನು ಪೋಷಿಸಿ, ಪರಿಸರ ಸಂರಕ್ಷಣೆಗೆ ತಮ್ಮ ಕೊಡುಗೆಯನ್ನು ನೀಡುವಂತೆ ಮನವಿ ಮಾಡಿದರು.
Advertisement