ವೃಕ್ಷ ಸಂರಕ್ಷಣಾ ಕಾಯ್ದೆ ತಿದ್ದುಪಡಿಗೆ ಸರ್ಕಾರ ಚಿಂತನೆ: ಸಚಿವ ಈಶ್ವರ ಖಂಡ್ರೆ

ಹಾಸನ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ನೂರಾರು ಮರ ಕಡಿತಲೆ ಮಾಡಿದ ದೂರುಗಳು ಬಂದಿವೆ. ಪ್ರಾಣವಾಯು ನೀಡುವ, ತಾಪಮಾನ ಹೆಚ್ಚಾಗದಂತೆ ತಡೆಯುವ ಹಾಗೂ ಭೂಫಲವತ್ತತೆ ಕಾಪಾಡುವ ವೃಕ್ಷಗಳ ಸಂರಕ್ಷಣೆ ಅಗತ್ಯವಿದೆ.
ಸಚಿವ ಈಶ್ವರ ಖಂಡ್ರೆ
ಸಚಿವ ಈಶ್ವರ ಖಂಡ್ರೆ
Updated on

ಬೆಂಗಳೂರು: ರಾಜ್ಯದ ಅರಣ್ಯ, ಗೋಮಾಳ, ಸರ್ಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿರುವ ಕಾರಣ ಗಿಡ–ಮರಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯ್ದೆ–1976ಕ್ಕೆ ತಿದ್ದುಪಡಿ ತರಲು ಚಿಂತನೆ ನಡೆಯುತ್ತಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಬುಧವಾರ ಹೇಳಿದರು.

ವಿಶ್ವ ಪರಿಸರ ದಿನದ ಅಂಗವಾಗಿ ಪಟ್ಟಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನುಮತಿ ಇಲ್ಲದೆ ಯಾರೇ ನಿಯಮ ಬಾಹಿರವಾಗಿ, ಅಕ್ರಮವಾಗಿ ಮರ ಕಡಿದರೆ ಮರದ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡದೊಂದಿಗೆ ಜೈಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂಬ ಅಭಿಪ್ರಾಯವ್ಯಕ್ತವಾಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂದು ಹೇಳಿದರು.

ಹಾಸನ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ನೂರಾರು ಮರ ಕಡಿತಲೆ ಮಾಡಿದ ದೂರುಗಳು ಬಂದಿವೆ. ಪ್ರಾಣವಾಯು ನೀಡುವ, ತಾಪಮಾನ ಹೆಚ್ಚಾಗದಂತೆ ತಡೆಯುವ ಹಾಗೂ ಭೂಫಲವತ್ತತೆ ಕಾಪಾಡುವ ವೃಕ್ಷಗಳ ಸಂರಕ್ಷಣೆ ಅಗತ್ಯವಿದೆ. ಬೆಲೆ ಬಾಳುವ ಮರಗಳ ಸಂರಕ್ಷಣೆಗಾಗಿ ಪಟ್ಟಾ ಭೂಮಿ, ಗೋಮಾಳ ಮತ್ತು ಸರ್ಕಾರಿ ಭೂಮಿಯಲ್ಲಿರುವ ಬೀಟೆ, ಶ್ರೀಗಂಧ, ತೇಗ ಮೊದಲಾದ ಬೆಲೆಬಾಳುವ ಮರಗಳ ಜಿಯೋ ಟ್ಯಾಗ್ ಮಾಡಲು ಸೂಚಿಸಲಾಗಿದ್ದು, ಅಕ್ರಮವಾಗಿ ಮರ ಕಡಿಯುವುದಕ್ಕೆ ಕಡಿವಾಣ ಬೀಳಲಿದೆ ಎಂದು ತಿಳಿಸಿದರು.

ರಸ್ತೆ, ರೈಲು ಮಾರ್ಗ, ವಿದ್ಯುತ್ ಪ್ರಸರಣ ಮಾರ್ಗ, ಕೊಳವೆ ಮಾರ್ಗ ಸೇರಿದಂತೆ ಯಾವುದೇ ಮೂಲಸೌಕರ್ಯ ಯೋಜನೆ, ಗಣಿಗಾರಿಕೆ, ಜಲಾಶಯ, ಬಡಾವಣೆ ನಿರ್ಮಾಣ, ಕೈಗಾರಿಕೆ ಸ್ಥಾಪನೆಯಂತಹ ಯಾವುದೇ ಯೋಜನೆ ಇರಲಿ, ಇದರಿಂದ ಪರಿಸರದ ಮೇಲೆ ಆಗುವ ಪರಿಣಾಮದ ಸಮಗ್ರ ಅಧ್ಯಯನ ಮಾಡುವ ಅಗತ್ಯವಿದೆ ಎಂಬುದನ್ನು ಇಲಾಖೆ ಮನಗಂಡಿದೆ. ಯಾವುದೇ ಹೊಸ ಯೋಜನೆಗೆ ಬಿಡಿ ಬಿಡಿಯಾಗಿ (ಇಷ್ಟು ಕಿ.ಮೀ.ನಿಂದ ಇಂತಿಷ್ಟು ಕಿ.ಮೀ.ವರೆಗೆ) ಮರ ಕಡಿಯಲು ಅನುಮತಿ ನೀಡುವುದಕ್ಕೆ ಕಡಿವಾಣ ಹಾಕಿ, ಒಂದು ಯೋಜನೆಗೆ ಒಂದೇ ಬಾರಿ ಅನುಮತಿ ನೀಡಿ, ಪರ್ಯಾಯ ಅರಣ್ಯ ಬೆಳೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಚಿಂತಿಸಲಾಗುತ್ತಿದೆ ಎಂದರು.

ಇದೇ ವೇಳೆ ಪರಿಸರ ದಿನ ಹಿನನೆಲಯಲ್ಲಿ ರಾಜ್ಯಾದ್ಯಂತ ಸಸಿ ನೆಡುವ ಕಾರ್ಯಕ್ರಮಗಳು ನಡೆದವು. ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅವರ ಕುಟುಂಬದೊಂದಿಗೆ ರಾಜಭವನದ ಅಂಗಳದಲ್ಲಿ ಕ್ಯಾಸಿಯಾ ಫಿಸ್ಟುಲಾ ಸಸಿಯನ್ನು ನೆಟ್ಟರು. ಪರಿಸರವನ್ನು ಸಂರಕ್ಷಿಸಲು ಜನರು ಸಸಿಗಳನ್ನು ನೆಟ್ಟು ಪ್ರಕೃತಿಯನ್ನು ಪೋಷಿಸಬೇಕು ಎಂದು ರಾಜ್ಯಪಾಲರು ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com