
ಬೆಂಗಳೂರು: ತಮ್ಮ ನೆಚ್ಚಿನ ನಟನ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರ ನಿವಾಸಕ್ಕೆ ನಟ ಶಿವರಾಜ್ ಕುಮಾರ್ ಅವರ ಬೆಂಬಲಿಗರು ಶನಿವಾರ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಪಡಿಸಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರೀಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿಯಿಂದ ಸಂಸದ ಬಿವೈ ರಾಘವೇಂದ್ರ, ಕಾಂಗ್ರೆಸ್ನಿಂದ ನಟ ಶಿವರಾಜಕುಮಾರ್ ಪತ್ನಿ ಗೀತಾ ಶಿವರಾಜಕುಮಾರ್ ಮತ್ತು ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಸ್ಪರ್ಧಿಸಿದ್ದರು.
ಚುನಾವಣೆಯಲ್ಲಿ ಬಿವೈ ರಾಘವೇಂದ್ರ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಬಿವೈ ರಾಘವೇಂದ್ರ ಗೆಲುವಿನ ಬಳಿಕ, ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ನಟ ಶಿವರಾಜಕುಮಾರ್ ಅವರ ಬಗ್ಗೆ ಲಘುವಾಗಿ ಬರೆದು ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದರು. ಈ ಪೋಸ್ಟ್ ಶಿವಣ್ಣ ಅಭಿಮಾನಿಗಳು ಆಕ್ರೋಶಗೊಳ್ಳುವಂತೆ ಮಾಡಿದೆ.
ಇದರಂತೆ ಇಂದು ನಟ ಶಿವರಾಜಕುಮಾರ್ ಅವರ ಬೆಂಬಲಿಗರು ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಿಕೊಳ್ಳಬಹುದು: ಕುಮಾರ್ ಬಂಗಾರಪ್ಪ ವ್ಯಂಗ್ಯ
ಮನೆ ಗೇಟ್ ಒಳಗೆ ನುಗ್ಗಿ ಕುಮಾರ್ ಬಂಗಾರಪ್ಪ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಶಿವಣ್ಣ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.
ಮನೆ ಬಾಗಿಲಿನಿಂದ ಹೊರ ಹೋಗುವಂತೆ ಪೊಲೀಸರು ನಟನ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಬಳಿಕ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಕೆಎಸ್ ಆರ್ ಪಿ ತುಕಡಿ ಆಗಮಿಸಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಇನ್ನು ಕುಮಾರ್ ಬಂಗಾರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಓಡಿ ಹೋಗ್ತಿದ್ದ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಪಾರ್ಕ್ ಸುತ್ತಮುತ್ತ ನಿಂತಿದ್ದ ಪ್ರತಿಭಟನಾಕಾರರನ್ನ ಕೂಡ ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ಕುಮಾರ್ ಬಂಗಾರಪ್ಪ ಮಾಡಿದ್ದ ಪೋಸ್ಟ್ ನಲ್ಲಿ ಏನಿದೆ...?
ಕುಮಾರ್ ಬಂಗಾರಪ್ಪ ಅವರು, ಫೇಸ್ಬುಕ್ನಲ್ಲಿ ಪೋಸ್ಟ್, ತಮ್ಮ ಸಹೋದರ ಮಧು ಬಂಗಾರಪ್ಪ, ಸಹೋದರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಟೀಕಿಸಿರುವ ಜೊತೆಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಶಿವರಾಜ್ ಕುಮಾರ್ ಅವರ ಬಗ್ಗೆ ಲಘುವಾಗಿ ಬರೆದಿದ್ದರು. ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ಹೇಳಿದ್ದರು.
ನನ್ನ ತಂಗಿ (ಗೀತಾ ಶಿವರಾಜ್ ಕುಮಾರ್) ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ, ಬೇರೆಯವರಿಗೆ ಅವಕಾಶ ಸಿಗಲಾರದು. ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು. ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು ಎಂದು ಎಚ್ಚರಿಕೆಯನ್ನು ಕೂಡ ಕೊಟ್ಟಿದ್ದರು.
Advertisement