ಬೆಂಗಳೂರು: ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕಾಗಿದ್ದು, ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಸ್ಪಷ್ಟನೆ ನೀಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು-ಮಿಂಚು ಬಿರುಗಾಳಿ ಸಹಿತ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಈ ಮಳೆ ಮುಂದಿನ 5 ದಿನಗಳ ಕಾಲ ಮುಂದುವೆರೆಯಲಿದೆ ಎಂದು ಎಚ್ಚರಿಕೆ ನೀಡಿದೆ.
ಮುಂದಿನ 3 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ
ಬಾಗಲಕೋಟೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ಬಿಜಾಪುರ, ದಕ್ಷಿಣ ಕನ್ನಡ, ಗುಲ್ಬರ್ಗ, ರಾಯಚೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜೂನ್ 6 ರಿಂದ 8 ರವರೆಗೆ ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮತ್ತು ಜೂನ್ 8 ರಿಂದ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತೆ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
2 ದಿನ ಭಾರಿ ಮಳೆ
ಇಂದು ಮತ್ತು ನಾಳೆ ಅಂದರೆ ಜೂನ್ 8 ಮತ್ತು 9ರಂದು ಭಾರೀ ಮಳೆ ಹಿನ್ನೆಲೆ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತುಬ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮತ್ತೊಂದೆಡೆ ಮೇ 9ರಂದು ಉತ್ತರ ಕರ್ನಾಟಕದ ಧಾರವಾಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಗೋಕರ್ಣ, ಸವದತ್ತಿ ದೇವಾಲಯಗಳಿಗೆ ನುಗ್ಗಿದ ಮಳೆ ನೀರು
ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳವಾಗಿರುವ ಗೋಕರ್ಣದಲ್ಲಿ ಧಾರಾಕಾರ ಮಳೆ ಸುರಿದ ಕಾರಣ ಸಂಗಮ ನಾಲಾದ ಮೂಲಕ ಸಮುದ್ರ ಸೇರುವ ಮಳೆ ನೀರು ಮಹಾಬಲೇಶ್ವರ ಮಂದಿರದ ಸೋಮಸೂತ್ರದಿಂದ ಗರ್ಭ ಗುಡಿಗೆ ನುಗ್ಗಿತ್ತು. ಇದರಿಂದಾಗಿ ನಿನ್ನೆ ರಾತ್ರಿ ಭಕ್ತರಿಗೆ ಕೊಂಚ ತೊಂದರೆಯಾಗಿತ್ತು.
ಗೋಕರ್ಣ ಮಂದಿರದ ಸಿಬ್ಬಂದಿ ಸತತ ಎರಡು ಗಂಟೆ ಸಂಗಮ ನಾಲಾ ಸಮುದ್ರ ಸೇರುವಲ್ಲಿನ ಕೋಡಿಯನ್ನು (ಮರಳ ದಿನ್ನೆ) ಕಡಿದು ನೀರು ಸರಾಗವಾಗಿ ಹೋಗುವಂತೆ ಮಾಡಿದ ಬಳಿಕ ದೇವಸ್ಥಾನದಲ್ಲಿ ನೀರಿನ ಪ್ರಮಾಣ ಇಳಿಕೆಯಾಯಿತು. ಇನ್ನೊಂದೆಡೆ, ಬೆಳಗಾವಿ ಜಿಲ್ಲೆಯಲ್ಲಿ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು ಸವದತ್ತಿ ತಾಲೂಕಿನ ಯಲ್ಲಮ್ಮ ಗುಡ್ಡದಲ್ಲಿ ದೇವಸ್ಥಾನಕ್ಕೂ ಮಳೆ ನೀರು ನುಗ್ಗಿದೆ. ಇದರಿಂದಾಗಿ ಭಕ್ತರು ಪರದಾಡಬೇಕಾಯಿತು.
Advertisement