
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅನ್ನು ಪೊಲೀಸರು ಬಂಧಿಸಿದ್ದಾರೆ.
ದರ್ಶನ್ ಆಪ್ತ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಫೋಟೋ ಕಳಿಸಿದ್ದಕ್ಕೆ, ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಲಾಗಿತ್ತು ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.
ಈ ಮಧ್ಯೆ ನಟಿ ರಮ್ಯಾ ಹಳೆಯ ಟ್ವೀಟ್ ಒಂದನ್ನು ರೀಟ್ವೀಟ್ ಮಾಡಿದ್ದಾರೆ. ಕರ್ನಾಟಕ ಬಾಕ್ಸ್ ಆಫೀಸ್ ಹೆಸರಿನ ಟ್ವಿಟ್ಟರ್ ಖಾತೆಯಿಂದ 'ದರ್ಶನ್ಗೆ ಸೆಕ್ಷನ್ 302ರ ಅಡಿಯಲ್ಲಿ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಒಂದೊಮ್ಮೆ ಈ ಪ್ರಕರಣದಲ್ಲಿ ದರ್ಶನ್ಗೆ ಶಿಕ್ಷೆ ಆಗದಿದ್ದಲ್ಲಿ ಹಣದ ಪ್ರಭಾವ ಕೆಲಸ ಮಾಡಿದೆ ಎಂದರ್ಥ ಹಾಗೂ ಭಾರತೀಯ ಕಾನೂನು ವ್ಯವಸ್ಥೆ ಎಷ್ಟು ದುರ್ಬಲವಾಗಿದೆ ಎಂದು ತೋರಿದಂತಾಗುತ್ತದೆ. ಸಂತ್ರಸ್ತರಿಗೆ ಸಿಗಬೇಕಾದ ನ್ಯಾಯ ಸಿಗುತ್ತದೆ ಎಂದು ಆಶಿಸುತ್ತೇವೆ ಎಂದು ಟ್ವೀಟ್ ಮಾಡಲಾಗಿದೆ. ಈ ಟ್ವೀಟ್ ಅನ್ನು ನಟಿ ರಮ್ಯಾ ರೀಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸತ್ವ ಅಪಾರ್ಟ್ ಮೆಂಟ್ ಬಳಿಯ ಮೋರಿಯಲ್ಲಿ ಸುಮಾರು 35 ವರ್ಷದ ಯುವಕನ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣದ ಜಾಡು ಹಿಡಿದು ತನಿಖೆ ಮಾಡುತ್ತಾ ಹೋದ ಪೊಲೀಸರಿಗೆ ಇದರಲ್ಲಿ ನಟ ದರ್ಶನ್ ಮತ್ತು ಅವರ ಸಹಚರರ ಕೊಲೆಯ ಕೈವಾಡವಿರುವುದು ಪತ್ತೆಯಾಯಿತು.
ಅದರಂತೆ ಇಂದು ಬೆಳಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಹೋದ ಪೊಲೀಸರು ಅಲ್ಲಿ ಬ್ಲೂ ರ್ಯಾಡಿಸನ್ ಹೊಟೇಲ್ ನಲ್ಲಿ ಬೆಳಗಿನ ಜಾವ ಜಿಮ್ ಮಾಡುತ್ತಿದ್ದ ನಟ ದರ್ಶನ್ ಅವರನ್ನು ಅಲ್ಲಿಂದಲೇ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.
Advertisement