ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಬಾರ್, ಐಟಿ ಕಂಪನಿಗಳಿಂದ ರೂ. 11.7 ಕೋಟಿ ವಸೂಲಿ ಮಾಡಿದ ಎಸ್ ಐಟಿ ಅಧಿಕಾರಿಗಳು
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಕಲ್ಯಾಣ ನಿಗಮದ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಹೈದರಾಬಾದ್ ಮತ್ತು ಬೆಂಗಳೂರಿನ ಬಾರ್, ಹೋಟೆಲ್ ಮಾಲೀಕರು ಮತ್ತು ಐಟಿ ಕಂಪನಿಗಳಿಂದ ರೂ.11.7 ಕೋಟಿಯನ್ನು ವಸೂಲಿ ಮಾಡಿದೆ. ಅವರಿಗೆ ಅಕ್ರಮವಾಗಿ ಹಣ ವರ್ಗಾವಣೆಯಾಗಿರುವ ಆರೋಪ ಕೇಳಿಬಂದಿತ್ತು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ ಅವರಿಗೆ ಸೇರಿದ ನಿವಾಸದಿಂದ 3.5 ಕೋಟಿ ರೂ. ಹಣವನ್ನು ಗುರುವಾರ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಹಣ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾದ ಹೈದರಾಬಾದ್ನ ಸಹಕಾರಿ ಬ್ಯಾಂಕ್ನಲ್ಲಿ ನಕಲಿ ಖಾತೆ ತೆರೆದಿದ್ದ ಇಬ್ಬರು ಆರೋಪಿಗಳನ್ನು ಎಸ್ ಐಟಿ ಅಧಿಕಾರಿಗಳು ಬುಧವಾರ ಬಂಧಿಸಿದ್ದರು. ಆರೋಪಿಗಳನ್ನು ಚಂದ್ರಮೋಹನ್ ಮತ್ತು ಸತ್ಯನಾರಾಯಣ ವರ್ಮಾ ಎಂದು ಗುರುತಿಸಲಾಗಿದೆ. ಹೈದರಾಬಾದ್ನಲ್ಲಿರುವ ವರ್ಮಾ ಅವರ ಸಂಬಂಧಿಕರ ಮನೆಗಳಿಗೆ ತೆರಳಿದ ಎಸ್ಐಟಿ ಅಧಿಕಾರಿಗಳು, ನಾಲ್ಕು ಸೂಟ್ ಕೇಸ್ ಗಳ್ಲಲಿ ಪತ್ತೆಯಾದ ರೂ.8. 21 ಕೋಟಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ವರ್ಮಾ ಅವರಿಗೆ ಸೇರಿದ ಐಷಾರಾಮಿ (ಲಂಬೋರ್ಗಿನಿ) ಕಾರನ್ನು ಸಹ ಪೊಲೀಸರು ಸೀಜ್ ಮಾಡಿದ್ದಾರೆ.
ಇಬ್ಬರು ಆರೋಪಿಗಳು ತೆರೆದಿರುವ 18 ನಕಲಿ ಖಾತೆಗಳಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಹಣ ವರ್ಗಾವಣೆಯಾಗಿದ್ದು, ಹೈದರಾಬಾದ್ ಮತ್ತು ಬೆಂಗಳೂರಿನ ವೈನ್ ಶಾಪ್ ಬಾರ್ಗಳು, ಆಭರಣ ಮಳಿಗೆಗಳು ಮತ್ತು ಸಣ್ಣ ಐಟಿ ಕಂಪನಿಗಳು ಸೇರಿದಂತೆ ವಿವಿಧ ಸಂಸ್ಥೆಗಳಿಗೆ ಸೇರಿದ 60ಕ್ಕೂ ಹೆಚ್ಚು ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಟಿಎನ್ಐಇಗೆ ತಿಳಿಸಿದ್ದಾರೆ. ಬಳಿಕ ಈ ಬ್ಯಾಂಕ್ ಖಾತೆಗಳಿಂದ ವಿತ್ ಡ್ರಾ ಮಾಡಲಾಗಿದ್ದ ಒಟ್ಟು 8.21 ಕೋಟಿ ರೂ ಹಣವನ್ನು ಈಗ ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ವಂಚನೆಗೆ ಸಂಬಂಧಿಸಿದಂತೆ ಇದುವರೆಗೆ ಎಂಟು ಜನರನ್ನು ಬಂಧಿಸಲಾಗಿದೆ. ಎಂಡಿ ಜೆಜಿ ಪದ್ಮನಾಭ, ಅಕೌಂಟ್ಸ್ ಅಧಿಕಾರಿ ಪರಶುರಾಮ್ ಜಿ, ಸಹಕಾರಿ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ, ನಾಗರಾಜ್, ನಾಗೇಶ್, ಜಗದೀಶ್, ಚಂದ್ರಮೋಹನ್ ಮತ್ತು ಸತ್ಯನಾರಾಯಣ ವರ್ಮಾ ಬಂಧಿತ ಆರೋಪಿಗಳಾಗಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ