ಮಹಿಳೆ ಅಪಹರಣ ಪ್ರಕರಣ; ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಅವಧಿ ವಿಸ್ತರಿಸಿದ ಹೈಕೋರ್ಟ್

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಅವರಿಗೆ ನೀಡಲಾಗಿದ್ದ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಅವಧಿಯನ್ನು ವಿಸ್ತರಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಭವಾನಿ ರೇವಣ್ಣ
ಭವಾನಿ ರೇವಣ್ಣ
Updated on

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಅವರಿಗೆ ನೀಡಲಾಗಿದ್ದ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಅವಧಿಯನ್ನು ವಿಸ್ತರಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ. ಆದರೆ, ಈ ಹಿಂದೆ ನೀಡಿದ್ದ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 7 ರಂದು ಕರ್ನಾಟಕ ಹೈಕೋರ್ಟ್ ಭವಾನಿ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ನ್ಯಾಯಾಲಯದ ಆದೇಶದಂತೆ ಅರ್ಜಿದಾರರು ಮೂರು ದಿನಗಳ ಕಾಲ ವಿಚಾರಣೆಗೆ ಹಾಜರಾಗಿದ್ದಾರೆ.

ಭವಾನಿ ರೇವಣ್ಣ
SIT ವಿಚಾರಣೆ ಚಾಲ್ತಿಯಲ್ಲಿರುವಂತೆಯೇ ಭವಾನಿ ರೇವಣ್ಣ ತವರು ಮನೆಗೂ ಬೀಗ.. ಬೃಹತ್ ಬಂಗಲೆ ಖಾಲಿ ಖಾಲಿ..?

ಪ್ರಾಸಿಕ್ಯೂಷನ್ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ಸುದೀರ್ಘ ವಾದ ಮಂಡಿಸಿದರು.

‘ಭವಾನಿ ಅವರು ತನಿಖೆಗೆ ಸಹಕರಿಸುತ್ತಿಲ್ಲ. ಎಲ್ಲವೂ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಯಾವುದೇ ಪ್ರಶ್ನೆಗೆ ಸರಿಯಾದ ಉತ್ತರ ನೀಡುತ್ತಿಲ್ಲ. ಇಡೀ ಪ್ರಕರಣದಲ್ಲಿ ಭವಾನಿ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ ಅಪಹರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಒಂದು ವೇಳೆ ತನಿಖೆಗೆ ಸಹಕರಿಸದಿದ್ದಲ್ಲಿ ಆಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕು. ಆದ್ದರಿಂದ ಈಗಾಗಲೇ ನೀಡಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸಬೇಕು’ ಎಂದು ಎಸ್ಐಟಿ ಪರ ವಕೀಲರು ತಿಳಿಸಿದರು.

ಈ ಸಂದರ್ಭದಲ್ಲಿ, ಯಾವ ಕಾರಣಕ್ಕಾಗಿ ಭವಾನಿ ರೇವಣ್ಣ ಅವರನ್ನು ಬಂಧಿಸಬೇಕು ಎಂಬುದನ್ನು ವಿವರಿಸುವಂತೆ ಪೀಠವು ತನಿಖಾ ಪ್ರಾಧಿಕಾರವನ್ನು ಕೇಳಿತು. ಈ ರೀತಿಯಾಗಿ ಬಂಧಿಸಿ ವಿಚಾರಣೆ ನಡೆಸುವುದೇ ಆದರೆ ಪ್ರಕರಣದ ಎಲ್ಲ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಬೇಕಾಗುತ್ತದೆ ಎಂದು ಪೀಠ ಹೇಳಿದೆ.

'ಅರ್ಜಿದಾರರು ಈಗಾಗಲೇ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದಾರೆ ಮತ್ತು ಪೊಲೀಸರಿಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡುತ್ತಿದ್ದಾರೆ. ಹೀಗಾಗಿ ಅವರನ್ನು ಬಂಧಿಸುವ ಅಗತ್ಯವಿಲ್ಲ' ಎಂದು ಭವಾನಿ ಪರ ವಕೀಲರು ವಾದಿಸಿದರು.

ಭವಾನಿ ರೇವಣ್ಣ
ಮಹಿಳೆ ಅಪಹರಣ ಪ್ರಕರಣ: ವಿಚಾರಣೆಗೆ ಹಾಜರಾಗದೆ ಭವಾನಿ ರೇವಣ್ಣ ನಾಪತ್ತೆ; ವಿವಿಧೆಡೆ ಎಸ್‌ಐಟಿ ಶೋಧ

ಏನಿದು ಪ್ರಕರಣ?

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪ ಸಂಬಂಧ ಕೆಆರ್ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌ಡಿ ರೇವಣ್ಣ ಈಗಾಗಲೇ ಬಂಧನಕ್ಕೊಳಗಾಗಿದ್ದರು ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದಲ್ಲಿ ಭವಾನಿ ಅವರ ಹೆಸರು ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಭವಾನಿ ನಿರೀಕ್ಷಣಾ ಜಾಮೀನು ಕೋರಿದ್ದರು. ಅವರನ್ನು ಬಂಧಿಸದಂತೆ ಮಧ್ಯಂತರ ಜಾಮೀನು ನೀಡಿದ್ದ ಹೈಕೋರ್ಟ್‌, ತನಿಖಾಧಿಕಾರಿ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಜೂ.7ರಂದು ಅವರಿಗೆ ಸೂಚನೆ ನೀಡಿತ್ತು.

ರೇವಣ್ಣ ಮತ್ತು ಅವರ ಪುತ್ರ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com