ಹಿರಿಯ ಸಾಹಿತಿ ಡಾ. ಕಮಲಾ ಹಂಪನ ನಿಧನ
ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಲೇಖಕಿ ಡಾ ಕಮಲಾ ಹಂಪನಾ(88ವ) ಅವರು ಹೃದಯಾಘಾತದಿಂದ ಶನಿವಾರ ನಸುಕಿನ ವೇಳೆ ನಿಧನ ಹೊಂದಿದ್ದಾರೆ.
ಅವರು ಪತಿ ಹಿರಿಯ ಸಾಹಿತಿ ಡಾ ಹಂ.ಪ.ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಹಾಗೂ ಅಪಾರ ಬಂಧುಮಿತ್ರರು, ಹಿತೈಷಿಗಳನ್ನು ಅಗಲಿದ್ದಾರೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಪುತ್ರಿ ಡಾ. ಆರತಿ ಮನೆಯಲ್ಲಿ ವಾಸವಿದ್ದರು. ನಿನ್ನೆ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತ ಆಗಿತ್ತು. ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಅಸುನೀಗಿದ್ದಾರೆ.
ದೇಹದಾನ: ಸಂಜೆಯ ತನಕ ರಾಜಾಜಿನಗರದ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರ ಇಚ್ಛೆಯಂತೆ ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ.
ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವ ಪ್ರೊ. ಕಮಲಾ ಹಂಪನಾ ಅವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ.
ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಅವರಿಗೆ ಕರ್ನಾಟಕ ಸರ್ಕಾರ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಲಭಿಸಿದೆ.
ಸುಮಾರು 60ಕ್ಕೂ ಹೆಚ್ಚು ಕೃತಿಗಳು ಇದುವರೆಗೆ ಪ್ರಕಟವಾಗಿದ್ದು, ಇದರಲ್ಲಿ ಸೃಜನಕೃತಿಗಳೂ ಇವೆ. ʼಬಿಂದಲಿʼ, ʼಬುಗುಡಿʼ ಹಾಗೂ ʼಬಯಲುʼ ಇವು ಕಮಲಾ ಹಂಪನಾ ಅವರ ಆಧುನಿಕ ವಚನಗಳಿರುವ ಸಂಕಲನಗಳು. ಇವಲ್ಲದೆ Attimabbe and Chalukyas ಹಾಗೂ Jainism and Other Essays- ಎಂಬ ಎರಡು ಇಂಗ್ಲಿಷ್ ಪುಸ್ತಕಗಳನ್ನು ಬರೆದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ