ಚಿಕ್ಕಮಗಳೂರು: ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಸೋಂಕಿಗೆ ಆರು ವರ್ಷದ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ. ಸಾನಿಯಾ (6) ಸಾವನ್ನಪ್ಪಿದ ಬಾಲಕಿ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಸಾನಿಯಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯ ತಂದೆ ಆಸಿಫ್ ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷಕ್ಕೆ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಮೃತ ಬಾಲಕಿ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ.
ಡೆಂಗ್ಯೂ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ಸಿಗದ ಕಾರಣದಿಂದ ತನ್ನ ಮಗಳು ಸಾವಿಗೀಡಾಗಿದ್ದಾಳೆಂದು ಬಾಲಕಿ ಪೋಷಕರು ಆರೋಪಿಸಿದ್ದಾರೆ. ಮಗಳ ಚಿಕಿತ್ಸೆಗಾಗಿ ಬಾಲಕಿ ಪೋಷಕರು 4 ಲಕ್ಷ ರೂ. ಖರ್ಚು ಮಾಡಿದ್ದರು. ಆದರೂ ಬಾಲಕಿಯನ್ನು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಂದೆ ಕಣ್ಣೀರಿಟ್ಟಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಸೋಂಕಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಇದರಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದೆ. ಸಕಾಲದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಕ್ಕಿದ್ದರೆ ಮಗಳು ಬದುಕುತ್ತಿದ್ದಳು ಎಂದು ಬಾಲಕಿ ತಂದೆ ಅಳಲು ತೋಡಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿದ್ದರೂ ಆರೋಗ್ಯ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಂಡಿಲ್ಲ. ಸೋಂಕು ನಿಯಂತ್ರಣಕ್ಕೆ ಸರಕಾರ, ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಳ್ಳಬೇಕು. ಸೋಂಕಿಗೆ ಬಡವರು ಹೆಚ್ಚಾಗಿ ತುತ್ತಾಗುತ್ತಿದ್ದಾರೆ. ಸೋಂಕಿತರು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ.
ಆದರೆ ಆಸ್ಪತ್ರೆಗಳಲ್ಲಿ ಡೆಂಗ್ಯೂ ಸೋಂಕಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗಬಾರದು. ಸರ್ಕಾರ ಇನ್ನಾದರೂ ಡೆಂಗ್ಯೂ ಸೋಂಕಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಸಿಗುವಂತಾಗಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಬಾಲಕಿ ಪೋಷಕರು ಮನವಿ ಮಾಡಿದ್ದಾರೆ.
Advertisement