ಬೆಂಗಳೂರು: ನಗರದ ಉಪಾಹಾರ ಗೃಹ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಶುಕ್ರವಾರ ಮಧ್ಯಾಹ್ನ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟಿಸಿ 10 ಮಂದಿ ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ಇಂದು ಶನಿವಾರ ತಿಳಿಸಿವೆ.
ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ವಿಭಾಗದ ಪೊಲೀಸರು ನಾಲ್ವರನ್ನು ಧಾರವಾಡ, ಹುಬ್ಬಳ್ಳಿ ಮತ್ತು ಬೆಂಗಳೂರಿನಿಂದ ವಶಕ್ಕೆ ಪಡೆದು ದೀರ್ಘ ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ಪೊಲೀಸರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ನಿನ್ನೆ ಶುಕ್ರವಾರ ಮಧ್ಯಾಹ್ನ ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕದಿಂದ (IED) ಹತ್ತು ಮಂದಿ ಗಾಯಗೊಂಡಿರುವ ಘಟನೆಯ ತನಿಖೆಯು ಭರದಿಂದ ಸಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ತಿಳಿಸಿದ್ದಾರೆ.
ಇದುವರೆಗೆ ಪಡೆದ ಹಲವು ಮಾಹಿತಿಗಳನ್ನು ಆಧರಿಸಿ ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ಪ್ರಕರಣದ ಸೂಕ್ಷ್ಮತೆ ಮತ್ತು ಭದ್ರತಾ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು, ಮಾಧ್ಯಮಗಳು ಊಹಾಪೋಹಗಳಿಗೆ ಒಳಗಾಗದಂತೆ ಮತ್ತು ಸಹಕರಿಸುವಂತೆ ಮನವಿ ಮಾಡುತ್ತೇವೆ ಎಂದರು.
ಕೆಂಪೇಗೌಡ ಏರ್ ಪೋರ್ಟ್ ಗೆ ಭದ್ರತೆ: ಬ್ರೂಕ್ಫೀಲ್ಡ್ ಪ್ರದೇಶದಲ್ಲಿ ನಡೆದ ಘಟನೆಯ ನಂತರ ರಾಜ್ಯಾದ್ಯಂತ ವಿಶೇಷವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
Advertisement