ಬೆಂಗಳೂರು: ನಗರದ ಉಪಾಹಾರ ಗೃಹದಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟ ಪ್ರಕರಣದ ತನಿಖೆಯಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಮತ್ತು ಘಟನೆಯ "ಸಂಪೂರ್ಣ ಸತ್ಯ" ಹೊರಬರುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಶನಿವಾರ ಸೂಚನೆ ನೀಡಿದ್ದಾರೆ.
ಸಚಿವ ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಗೃಹ ಇಲಾಖೆ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಮಾಜಘಾತುಕ ಶಕ್ತಿಗಳ ವಿರುದ್ಧ ಯಾವುದೇ ಅನುಕಂಪವಿಲ್ಲದೆ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಜನನಿಬಿಡ ಸ್ಥಳಗಳನ್ನು ಗುರುತಿಸಿ, ಅಂತಹ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಿ, ಜನರಿಗೆ ಭದ್ರತೆ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಚೇರಿಯಿಂದ ಹೊರಡಿಸಿದ ಪ್ರಕಟಣೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪೂರ್ವ ಬೆಂಗಳೂರಿನ ಐಟಿ ಕಾರಿಡಾರ್ನಲ್ಲಿರುವ ಬ್ರೂಕ್ಫೀಲ್ಡ್ ಪ್ರದೇಶದ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸ್ಫೋಟ ಸಂಭವಿಸಿ ಹತ್ತು ಮಂದಿ ಗಾಯಗೊಂಡ ನಂತರ ಈ ಉನ್ನತ ಮಟ್ಟದ ಸಭೆ ನಡೆದಿದೆ.
ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಜನರನ್ನು ದಾರಿ ತಪ್ಪಿಸುವ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ಧ ಮತ್ತು ಸಮಾಜಘಾತುಕ ಶಕ್ತಿಗಳ ವಿರುದ್ಧ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಆದೇಶಿಸಿದ್ದಾರೆ.
ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ರಾಮೇಶ್ವರಂ ಕೆಫೆಗೆ ಭೇಟಿ ನೀಡಿ, ನಂತರ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
Advertisement