ಕಲಬುರಗಿ: ರಷ್ಯಾದಲ್ಲಿ ಸಿಲುಕಿರುವ (ಕಲಬುರಗಿಯ ಮೂವರು ಮತ್ತು ತೆಲಂಗಾಣದ ಓರ್ವ) ನಾಲ್ವರು ಭಾರತೀಯರ ರಕ್ಷಿಸಲು ಭಾರತೀಯ ರಾಯಭಾರ ಕಚೇರಿ ಕ್ರಮ ಕೈಗೊಳ್ಳುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಮೂವರು ಯುವಕರು ಯುದ್ಧಪೀಡಿತ ರಷ್ಯಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕುರಿತು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಕಲಬುರಗಿ ಯುವಕರನ್ನು ಸುರಕ್ಷಿತವಾಗಿ ಮರಳಿ ಕರೆತರುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಈ ಮನವಿಗೆ ಜೈಶಂಕರ್ ಅವರು ಪ್ರತಿಕ್ರಿಯೆ ನೀಡಿದ್ದು, ರಷ್ಯಾದ ಅಧಿಕಾರಿಗಳೊಂದಿಗೆ ಭಾರತೀಯ ರಾಯಭಾರ ಕಚೇರಿ ಸಂಪರ್ಕದಲ್ಲಿದೆ ಎಂದು ಹೇಳಿದ್ದಾರೆ.
ಭಾರತ ಸರ್ಕಾರ ನಾಗರೀಕರಿಗೆ ಯಾವಾಗಲೂ ಸುರಕ್ಷತೆ, ಭದ್ರತೆಯನ್ನು ಖಚಿತಪಡಿಸುತ್ತದೆ. ಭಾರತೀಯರ ರಕ್ಷಣೆಗೆ ಧಾವಿಸುವಂತೆ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನವದೆಹಲಿಯಲ್ಲಿರುವ ರಷ್ಯಾದ ರಾಯಭಾರಿ ಕಚೇರಿಯ ಅಧಿಕಾರಿಗಳೊಂದಿಗೂ ವಿದೇಶಾಂಗ ಕಾರ್ಯದರ್ಶಿ ಮಾತುಕತೆ ನಡೆಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು, ಯುದ್ಧ ಪೀಡಿತ ಪ್ರದೇಶದಿಂದ ದೂರವಿರಲು ಭಾರತೀಯರಿಗೆ ಸಲಹೆ ನೀಡಲಾಗಿದೆ. ಸತತ ಪರಿಶ್ರಮದ ಫಲವಾಗಿ ಕೆಲವು ಭಾರತೀಯ ಪ್ರಜೆಗಳ ವಾಪಸಾತಿ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
Advertisement