ಬೆಂಗಳೂರು: ವಿಧಾನಸೌಧದ ಕಾರಿಡಾರ್ ನಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಪರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ವಿವಾದ ಕುರಿತ ಎಫ್ ಎಸ್ಎಲ್ ವರದಿಯನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು, ಇದರಲ್ಲಿ ಮುಚ್ಚಿಡುವಂತಹದ್ದು ಏನು ಇಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್ ಎಸ್ ಎಲ್ ವರದಿಯಲ್ಲಿ ಘೋಷಣೆ ಕೂಗಿರುವುದು ದೃಢಪಟ್ಟರೆ ತಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.ಎಫ್ ಎಸ್ ಎಲ್ ವರದಿ ಬಿಡುಗಡೆ ಕುರಿತ ಬಿಜೆಪಿ ಆರೋಪವನ್ನು ತಳ್ಳಿಹಾಕಿದ ಗೃಹ ಸಚಿವರು, ಇದರಲ್ಲಿ ಮುಚ್ಚಿಡುವಂತಹದ್ದು ಏನು ಇಲ್ಲ. ವರದಿ ಬಂದ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ನಿನ್ನೆ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ವಿವಾದ, ಎಫ್ ಎಸ್ ಎಲ್ ವರದಿ ಹಾಗೂ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕುರಿತು ಸಮಗ್ರವಾಗಿ ಚರ್ಚಿಸಲಾಗಿದೆ. ಎಲ್ಲಾ ಆಯಾಮಾಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಪರಮೇಶ್ವರ್ ಹೇಳಿದರು.
Advertisement