ಮಡಿಕೇರಿ: ದಕ್ಷಿಣ ಕೊಡಗಿನ ಕಾಫಿ ಎಸ್ಟೇಟ್ ನಲ್ಲಿ ಬುಧವಾರ ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಪೊಳಲಿಬೆಟ್ಟ ಸಮೀಪದ ಅಬ್ಬೂರಿನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಅಸ್ಸಾಂ ಮೂಲದ ಎಸ್ಟೇಟ್ ಕಾರ್ಮಿಕರಾಗಿದ್ದ ಅಜಬಾನು(37) ಎಂದು ಗುರುತಿಸಲಾಗಿದೆ. ಅಜಬಾನು ಖಾಸಗಿ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ.
ಸ್ಥಳದಲ್ಲಿದ್ದ ಇತರ ಎಸ್ಟೇಟ್ ಕಾರ್ಮಿಕರು ಕೂಡಲೇ ಅಜಬಾನುನನ್ನು ಪೊಲಿಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ ಮಹಿಲೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಾಡಾನೆ ಹಾವಳಿ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ನಂತರ ವಿರಾಜಪೇಟೆ ವಿಭಾಗದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಇದೇ ವೇಳೆ ವಿರಾಜಪೇಟೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಪೊಳಲಿಬೆಟ್ಟ ವ್ಯಾಪ್ತಿಯಲ್ಲಿನ ಐದು ಕಾಡಾನೆಗಳನ್ನು ಸೆರೆ ಹಿಡಿಯಲು ಕ್ರಮಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
Advertisement