'ಹನುಮಾನ್ ಚಾಲೀಸಾ' ಕೇಸ್: ನಗರತ್ ಪೇಟೆಯಲ್ಲಿ ಪರಿಸ್ಥಿತಿ ಉದ್ವಿಗ್ನ, ತೇಜಸ್ವಿ ಸೂರ್ಯ ಸೇರಿ ಹಲವು ಹಿಂದೂ ಪರ ಕಾರ್ಯಕರ್ತರು ವಶಕ್ಕೆ

ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಇದರಿಂದಾಗಿ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಹಿಂದೂಪರ ಸಂಘಟನೆಗಳ ಪ್ರತಿಭಟನೆ.
ಹಿಂದೂಪರ ಸಂಘಟನೆಗಳ ಪ್ರತಿಭಟನೆ.
Updated on

ಬೆಂಗಳೂರು: ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಇದರಿಂದಾಗಿ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ಇಂದು ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯಲ್ಲಿ ಹಮ್ಮಿಕೊಂಡಿದ್ದರು.

ಇದರಂತೆ ನೂರಾರು ಸಂಖ್ಯೆಯ ಹಿಂದೂಪರ ಕಾರ್ಯಕರ್ತರು ನಗರತ್ ಪೇಟೆಗೆ ಸೇರಿದ್ದರು. ಈ ಮೆರವಣಿಗೆಗೆ ಬಿಜೆಪಿ ನಾಯಕರಾದ ಸುರೇಶ್ ಕುಮಾರ್ ಹಾಗೂ ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಕೂಡ ಭಾಗಿಯಾಗಿದ್ದರು. ಆದರೆ, ಇದಕ್ಕೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯಿತು.

ಇದೇ ವೇಳೆ ಪೊಲೀಸರು ಸುರೇಶ್ ಕುಮಾರ್ ಅವರನ್ನು ಎಳೆದಾಡಿದ ಬೆಳವಣಿಗೆ ಕೂಡ ಕಂಡು ಬಂದಿತು.

ಹಲ್ಲೆಗೊಳಗಾದ ಮುಖೇಶ್​ನನ್ನು ಪೊಲೀಸರು ಜೀಪ್​ನಲ್ಲಿ ಕರೆದೊಯ್ಯಲು ಮುಂದಾಗಿದ್ದರು. ಈ ವೇಳೆ ಪೊಲೀಸ್ ವಾಹನದ ಮುಂದೆ ನಿಂತು ಶಾಸಕ ಸುರೇಶ್​ಕುಮಾರ್ ಪ್ರತಿಭಟನೆ ನಡೆಸಿದರು. ಈ ವೇಳೆ ತಳ್ಳಾಟ, ನೂಕಾಟ ನಡೆದಿದ್ದು, ಶಾಸಕ ಸುರೇಶ್​ಕುಮಾರ್ ಮತ್ತು​ ಪೊಲೀಸರ ನಡುವೆ ವಾಗ್ವಾದ ನಡೆಯಿತು.

ನೀತಿ ಸಂಹಿತೆ ಜಾರಿಯಾಗಿದೆ ಪ್ರತಿಭಟನೆ ಮಾಡಲು ಅವಕಾಶ ಇಲ್ಲ ಎಂದು ಪೊಲೀಸರು ಹೇಳಿದರು. ಇದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ಹಿಂದೂ ಕಾರ್ಯಕರ್ತರು ಮುಖೇಶ್​​ನನ್ನು ಪೊಲೀಸ್ ವಾಹನದಿಂದ ಕೆಳಗೆ ಇಳಿಸಿಕೊಂಡರು.

ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆಯೇ ಪೊಲೀಸರು, ತೇಜಸ್ವಿ ಸೂರ್ಯ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಘಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಅವರು, ಅಸಹನೆ ಅನ್ನೋದು ಈ ಮಟ್ಟಕ್ಕೆ ಹೋಗಬಾರದು. ಇದು ಉದ್ದೇಶ ಪೂರ್ವಕವಾಗಿ ಮಾಡಿರುವ ಹಲ್ಲೆಯಾಗಿದೆ. ತನ್ನ ಪಾಡಿಗೆ ಇದ್ದ ಯುವಕನ ಮೇಲೆ ಹೀಗೆ ಹಲ್ಲೆ ಮಾಡಿದ್ದಾರೆ. ಒಟ್ಟಾರೆಯಾಗಿ ಸಮಾಜದ ಶಾಂತಿ ಕದಡಿದಂತಾಗಿದೆ. ಇದೊಂದು ನೆಪ, ಉದ್ದೇಶಪೂರ್ವಕವಾಕವಾಗಿ ಮಾಡಿದಂತಿದೆ. ಹಲ್ಲೆ ಮಾಡಿದವರಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.

ಹಲ್ಲೆ ನಡೆದ ಸಮಯದಲ್ಲಿ ಆತನ ರಕ್ಷಣೆಗೂ ಯಾರು ಇರಲಿಲ್ಲ ಎನ್ನಲಾಗಿದೆ. ಎಲ್ಲ ಸಮುದಾಯದವರು ಈ ವಿಷಯವಾಗಿ ಮುಂದೆ ಬರಬೇಕು. ಈ ರೀತಿಯಾಗಿ ನಡೆಯುತ್ತಿರುವ ಸರಣಿ ಪ್ರಕರಣಗಳ ಬಗ್ಗೆ ಪೊಲೀಸ್ ಇಲಾಖೆಯವರು ಹೆಚ್ಚು ಕಾರ್ಯ ಪ್ರವೃತ್ತರಾಗಬೇಕು. ಇವರೆಲ್ಲ ಬೇಕು ಎಂದೇ ಈ ರೀತಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com