ಅತ್ತಿಗುಪ್ಪೆ: ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ಅಪರಿಚಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆತಂಕಕಾರಿ ಘಟನೆ ಗುರುವಾರ ನಡೆದಿದೆ.
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣ

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆತಂಕಕಾರಿ ಘಟನೆ ಗುರುವಾರ ನಡೆದಿದೆ. ಮಧ್ಯಾಹ್ನ 2-10 ನಿಮಿಷದಲ್ಲಿ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಮೆಟ್ರೋ ರೈಲಿನ ಅಡಿಯಲ್ಲಿ ಸಿಲುಕಿದ್ದ ಶವವನ್ನು ಕೆಲಕಾಲ ಹರಸಾಹಸದ ಬಳಿಕ ಹೊರಗೆ ತರಲಾಯಿತು.

ಮೃತ ವಿದ್ಯಾರ್ಥಿಯನ್ನು ನ್ಯಾಷನಲ್ ಲಾ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಧ್ರುವ್ ಎಂದು ಗುರುತಿಸಲಾಗಿದೆ. ಆತನ ರುಂಡ, ಮುಂಡ ಬೇರ್ಪಟ್ಟಿದ್ದು, ದೇಹ ಛಿದ್ರಗೊಂಡಿತ್ತು. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಮೆಟ್ರೋ ಪಿಆರ್ ಒ ಯಶವಂತ್ ಚೌಹಾಣ್ ಮಾಹಿತಿ ನೀಡಿದ್ದಾರೆ. ಮೊಬೈಲ್ ನಲ್ಲಿ ಮಾತನಾಡಿಕೊಂಡೆ ಹಳಿ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯಿಂದಾಗಿ ವೈಟ್ ಫೀಲ್ಡ್ ನಿಂದ ಚಲ್ಲಘಟ್ಟ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಕೆಲಕಾಲ ಮಾಗಡಿ ರಸ್ತೆ ಮತ್ತು ವೈಟ್ ಫೀಲ್ಡ್ ನಡುವಣ ಮಾತ್ರ ರೈಲು ಸಂಚಾರವಿತ್ತು. ಮಾಗಡಿ ರಸ್ತೆ ಮತ್ತು ಚಲ್ಲಘಟ್ಟ ನಡುವೆ ತಾತ್ಕಾಲಿಕವಾಗಿ ರೈಲು ಸಂಚಾರ ಸ್ಥಗಿತವಾಗಿತ್ತು. ಬಳಿಕ ಈ ಮಾರ್ಗದಲ್ಲಿ ರೈಲು ಸಂಚಾರ ಪುನರ್ ಆರಂಭವಾಗಿದೆ.

ಚಂದ್ರಲೇಔಟ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಬಿಎಂಆರ್ ಸಿಎಲ್ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದು ಮಹಜರು ನಡೆಸುತ್ತಿರುವುದರಿಂದ ಮಾಗಡಿ ರಸ್ತೆಯಿಂದ ಚಲ್ಲಘಟ್ಟ ನಡುವಿನ ಮಾರ್ಗದಲ್ಲಿ ತಾತ್ಕಾಲಿಕವಾಗಿ ರೈಲ್ವೆ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com