
ಬೆಂಗಳೂರು: ನಗರದಲ್ಲಿ ಮಳೆಯಿಂದಾಗುವ ಹಾನಿಯನ್ನು ತಪ್ಪಿಸಲು ಎಲ್ಲಾ 8 ವಲಯಗಳಲ್ಲಿ ವಿಪತ್ತು ನಿರ್ವಹಣಾ ತಂಡಗಳ ನಿಯೋಜನೆಗೊಳಿಸಲು ಬಿಬಿಎಂಪಿ ಮುಂದಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದಾಗಿ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಹೀಗಾಗಿ ಮಳೆಗಾಲದ ಸಿದ್ಧತೆಗಳ ಬಗ್ಗೆ 8 ವಲಯಗಳ ಅಧಿಕಾರಿಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಭೆ ನಡೆಸಿ, ಮಳೆಗಾಲದ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಗಾಲ ಆರಂಭವಾಗಿದ್ದು, ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗುವುದು, ಚರಂಡಿಗಳಿಂದ ನೀರು ಉಕ್ಕಿ ಹರಿಯುವುದು, ಮರಗಳು, ವಿದ್ಯುತ್ ಕಂಬಗಳು ಬೀಳುವುದನ್ನು ತಡೆಯಲು ಮತ್ತು ಮಳೆಯಿಂದಾಗುವ ಇತರೆ ಅನಾಹುತಗಳನ್ನು ತಡೆಯಲು ವಿಪತ್ತು ನಿರ್ವಹಣಾ ತಂಡವನ್ನು ಸ್ಥಾಪಿಸಬೇಕಾಗಿದೆ. ಈ ತಂಡದಲ್ಲಿ ಬಿಬಿಎಂಪಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB), ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM), ಮತ್ತು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಇರಲಿದ್ದಾರೆಂದು ಮಾಹಿತಿ ನೀಡಿದರು.
ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಮಳೆಯಾಗುತ್ತಿದ್ದು, ನಗರದ ವಿವಿಧ ಭಾಗಗಳಲ್ಲಿ ಮಳೆಯ ಪ್ರಮಾಣ ವಿಭಿನ್ನವಾಗಿದೆ. ಕೆಲವೆಡೆ ಸಾಮಾನ್ಯ ಮಳೆಯಾಗಿದ್ದರೆ, ಇನ್ನು ಕೆಲವೆಡೆ ಸಾಧಾರಣದಿಂದ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ನಗರದಾದ್ಯಂತ 150 ಕಡೆಗಳಲ್ಲಿ ನೀರು ತುಂಬಿಕೊಂಡಿದೆ, ಈ ಸಮಸ್ಯೆಯನ್ನು ಬಗೆಹರಿಸಲಾಗಿದೆ.
ಮಳೆ ಆರಂಭವಾದಾಗಿನಿಂದ ಇಲ್ಲಿಯವರೆಗೆ 325 ಮರಗಳು ಬಿದ್ದಿವೆ. ಈ ಪೈಕಿ 320 ಮರಗಳನ್ನು ತೆರವುಗೊಳಿಸಲಾಗಿದೆ. 171 ದೊಡ್ಡ ಮರಗಳು, 690 ಕೊಂಬೆಗಳು ಬಿದ್ದಿವೆ. ಉಳಿದವುಗಳನ್ನು ಶೀಘ್ರದಲ್ಲಿ ತೆರವುಗೊಳಿಸಲಾಗುವುದು. ಬಿದ್ದಿರುವ ಮರ, ಕೊಂಬೆಗಳನ್ನು ತೆರವುಗೊಳಿಸಲು 39 ತಂಡಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.
ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 225 ವಾರ್ಡ್ಗಳಲ್ಲಿನ ಚರಂಡಿಗಳಲ್ಲಿ ಹೂಳು ತೆಗೆಯುವುದು ಸೇರಿ ಮಳೆಗಾಲದಲ್ಲಿ ಸಮಸ್ಯೆ ಎದುರಾಗದಂತೆ ನಿರ್ವಹಣಾ ಕಾರ್ಯ ಕೈಗೊಳ್ಳಲು ತಲಾ 30 ಲಕ್ಷ ರೂ.ನಂತೆ 67.50 ಕೋಟಿ ರೂ ನೀಡಲಾಗಿದೆ. ಜೊತೆಗೆ ಈ ಬಾರಿ ನಗರದಲ್ಲಿ ವಿಪತ್ತು ನಿರ್ವಹಣೆಗಾಗಿ ಬ್ರ್ಯಾಂಡ್ ಬೆಂಗಳೂರು ಯೋಜನೆ ಅಡಿಯಲ್ಲಿ ಹೆಚ್ಚುವರಿಯಾಗಿ 10 ಕೋಟಿ ರೂ.ಮೀಸಲಿಡಲಾಗಿದೆ. ಒಟ್ಟಾರೆ ಮಳೆಗಾಲದಲ್ಲಿ ಉಂಟಾಗಲಿರುವ ಸಮಸ್ಯೆಗೆ ಮುನ್ನೆಚ್ಚರಿಕಾ ಕ್ರಮ ಹಾಗೂ ಪರಿಹಾರ ಕಾರ್ಯಕ್ಕೆ 77.50 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದರು.
Advertisement