ಸರ್ಕಾರಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು: 7 ದಿನಗಳಲ್ಲಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ BWSSB ಸೂಚನೆ
ಬೆಂಗಳೂರು: ಸಾರ್ವಜನಿಕರಲ್ಲಿ ನೀರಿನ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಶಾಲೆಗಳು, ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಸರ್ಕಾರಿ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವ್ಯವಸ್ಥೆ (ಆರ್ಡಬ್ಲ್ಯೂಎಚ್) ಮತ್ತು ಇಂಗುಗುಂಡಿಗಳ ನಿರ್ಮಾಣಕ್ಕೆ ಮುಂದಾಗಿರುವ ಬೆಂಗಳೂರು ಜಲಮಂಡಳಿಯು, ಈ ಕುರಿತು ಒಂದು ವಾರದೊಳಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಸಮರ್ಪಕ ನೀರಿನನಿರ್ವಹಣೆ ಕುರಿತು ಸಭೆ ಮಾಡಿದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ಬಿ) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ, ಸರಕಾರಿ ಶಾಲೆಗಳು, ಕಾಲೇಜುಗಳು, ಬಿಬಿಎಂಪಿ ಅಧೀನದ ಶೈಕ್ಷಣಿಕ ಸಂಸ್ಥೆಗಳು ಆಸ್ಪತ್ರೆಗಳು, ಪಾರ್ಕ್ಗಳು, ಸರಕಾರಿ ಕಟ್ಟಡಗಳಲ್ಲಿರುವ ಅಂಗನವಾಡಿಗಳು ಸೇರಿದಂತೆ ಸರಕಾರಿ ಕಟ್ಟಡಗಳಲ್ಲಿ ಜಲಮಂಡಳಿಯ ವತಿಯಿಂದ ಮಳೆ ನೀರು ಕೊಯ್ಲು ವ್ಯವಸ್ಥೆ ಹಾಗೂ ಇಂಗುಗುಂಡಿಗಳನ್ನು ಅಳವಡಿಸಲಾಗುವುದು. ಒಂದು ವಾರದಲ್ಲಿ ಕ್ರಿಯಾ ಯೋಜನೆ ಸಲ್ಲಿಸುವಂತೆ ಅಧೀನ ಅಧಿಕಾರಿಗಳಿಗೆ ತಿಳಿಸಿದರು.
ಸಾರ್ವಜನಿಕರಿಗೆ ಮಾದರಿಯಾಗುವ ನಿಟ್ಟಿನಲ್ಲಿ ಈಗಾಗಲೇ ಜಲಮಂಡಳಿಯ ವತಿಯಿಂದ ತಮ್ಮ ವ್ಯಾಪ್ತಿಯಲ್ಲಿ 1,000 ಕ್ಕೂ ಅಧಿಕ ಮಳೆ ನೀರು ಇಂಗುಗುಂಡಿಗಳನ್ನು ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 1000 ಇಂಗು ಗುಂಡಿಗಳನ್ನು ಜಲಮಂಡಳಿ ನಿರ್ಮಿಸಲಿದೆ. ಆದರ ಜೊತೆಗೆ, ಮಳೆ ನೀರು ಕೊಯ್ಲು ಅಳವಡಿಕೆಗೆ ಮಾದರಿ ಆಗುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿರುವ ಎಲ್ಲ ಸರಕಾರಿ ಶಾಲೆಗಳು, ಕಾಲೇಜುಗಳು, ಬಿಬಿಎಂಪಿ ಅಧೀನದ ಶೈಕ್ಷಣಿಕ ಸಂಸ್ಥೆಗಳು ಆಸ್ಪತ್ರೆಗಳು, ಪಾರ್ಕ್ಗಳು, ಸರಕಾರಿ ಕಟ್ಟಡಗಳಲ್ಲಿರುವ ಅಂಗನವಾಡಿಗಳು ಸೇರಿದಂತೆ ಸರಕಾರಿ ಕಟ್ಟಡಗಳಲ್ಲಿ ಮಳೆ ನೀರು ಪದ್ದತಿಯನ್ನು ಅಳವಡಿಸಬೇಕು ಎಂದು ಸೂಚಿಸಿದರು.
ಮಳೆ ನೀರು ಕೊಯ್ಲು ಅಳವಡಿಕೆ ಮೂಲಕ ನೀರನ್ನು ಮರುಬಳಕೆ ಮಾಡುವ ಹಾಗೂ ಹೆಚ್ಚುವರಿ ನೀರನ್ನು ಇಂಗು ಗುಂಡಿಗಳ ಮೂಲಕ ಅಂತರ್ಜಲ ಮರುಪೂರಣ ಮಾಡಿಸುವ ವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಜೊತೆಗೆ, ಮಳೆ ನೀರು ಕೊಯ್ಲು ವ್ಯವಸ್ಥೆ ಹಾಗೂ ಇಂಗುಗುಂಡಿಗಳ ಅಳವಡಿಕೆಯ ಮಾಹಿತಿ, ಅದರಿಂದಾಗುವ ಪ್ರಯೋಜನಗಳ ಬಗ್ಗೆಯೂ ಫಲಕ ಅಳವಡಿಸಿ ಮಾಹಿತಿ ನೀಡಬೇಕು. ಇದರಿಂದ ಜನರು ಕೂಡ ನೀರಿನ ಮಹತ್ವ ಅರಿತು ಮಳೆ ನೀರು ಕೊಯ್ಲು ಅಳವಡಿಕೆ ಮೊರೆ ಹೋಗಬಹುದು ಎಂದು ತಿಳಿಸಿದರು.
ನಗರದಲ್ಲಿರುವ ಸರಕಾರಿ ಶಾಲೆ, ಕಾಲೇಜುಗಳು, ಬಿಬಿಎಂಪಿ ಯ ಶೈಕ್ಷಣಿಕ ಸಂಸ್ಥೆಗಳು ಹಾಗೂ ಸರಕಾರಿ ಕಟ್ಟಡಗಳಲ್ಲಿರುವ ಅಂಗನವಾಡಿಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲು ಹೆಚ್ಚಿನ ಆದ್ಯತೆ ನೀಡಬೇಕು. ಶಾಲಾ ವಿದ್ಯಾರ್ಥಿಗಳು ಈ ವ್ಯವಸ್ಥೆಯನ್ನು ಹಾಗೂ ಅದರಿಂದ ಅವರಿಗೆ ಆಗುತ್ತಿರುವ ಉಪಯೋಗವನ್ನು ಪ್ರಾಯೋಗಿಕವಾಗಿ ವೀಕ್ಷಿಸಬೇಕು. ಇದರಿಂದ ತಮ್ಮ ಅಕ್ಕ ಪಕ್ಕದ ಪ್ರದೇಶದಲ್ಲಿ ಹೆಚ್ಚಿನ ಜನರಿಗೆ ತಿಳುವಳಿಕೆಯನ್ನು ಹಂಚುವ ಕಾರ್ಯ ಆಗಬೇಕು ಎನ್ನುವುದು ಉದ್ದೇಶವಾಗಿದೆ. ಖಾಸಗಿ ಶೈಕ್ಷಣಿಕ ಸಂಸ್ಥೆಗಳಲ್ಲೂ ಈ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅಳವಡಿಸಿ ವಿದ್ಯಾರ್ಥಿಗಳಿಗೆ ಈ ಬಗ್ಗೆ ಪ್ರಾತ್ಯಕ್ಷಿಕೆ ನೀಡಬೇಕು ಎಂದು ಸೂಚನೆ ನೀಡಿದರು.
ಬಿಬಿಎಂಪಿಯ ವಲಯವಾರು ಪ್ರದೇಶಗಳಲ್ಲಿ ಎಲ್ಲ ಧಾರ್ಮಿಕ ಸಂಸ್ಥೆಗಳ ಆವರಣದಲ್ಲೂ ಜಲಮಂಡಳಿ ವತಿಯಿಂದ ಮಳೇ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಲಾಗುವುದು. ಈ ಮೂಲಕ ಆಯಾ ಸ್ಥಳಗಳಿಗೆ ಭೇಟಿ ನೀಡುವಂತಹ ಜನರಿಗೆ ಈ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ನೀರಿನ ಸದ್ಬಳಕೆಗೆ ಉತ್ತೇಜನ ನೀಡಿದಂತಾಗುತ್ತದೆ. ಜೊತೆಗೆ, ಸರಕಾರಿ ನಿಲ್ದಾಣಗಳು, ಬಿಎಂಟಿಸಿ ಬಸ್ ನಿಲ್ದಾಣಗಳಲ್ಲೂ ಆಯಾ ಸಂಸ್ಥೆಗಳ ಸಹಕಾರದೊಂದಿಗೆ ಮಳೆ ನೀರು ಕೋಯ್ಲು ವ್ಯವಸ್ಥೆ ಹಾಗೂ ಇಂಗುಗುಂಡಿಗಳನ್ನು ಅಳವಡಿಸಲಾಗುತ್ತದೆ. ಇದರಿಂದ ಹೆಚ್ಚಿನ ಜನರನ್ನು ತಲುಪಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ