HDD, JDS ಕ್ಷಮೆ ಕೋರುತ್ತೇನೆ, ಮೇ 31ಕ್ಕೆ SIT ತನಿಖೆ ಎದುರಿಸುತ್ತೇನೆ: Prajwal Revanna; ಭ್ರಷ್ಟಾಚಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ- ಈ ದಿನದ ಪ್ರಮುಖ ಸುದ್ದಿಗಳು 27-05-2024

File pic
(ಸಂಗ್ರಹ ಚಿತ್ರ)online desk

1. ಮೇ.31ರಂದು SIT ಎದುರು ಹಾಜರಾಗುತ್ತೇನೆ: Prajwal Revanna

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿರುವ, ಸದ್ಯಕ್ಕೆ ವಿದೇಶದಲ್ಲಿ ಅಜ್ಞಾತರಾಗಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ. ತಾವಿರುವ ಸ್ಥಳದಿಂದಲೇ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ, "ನಾನು ವಿದೇಶಕ್ಕೆ ತೆರಳುವುದು ಏ.26 ರಂದೇ ಪೂರ್ವನಿಗದಿಯಾಗಿತ್ತು, ಮೇ.31 ರಂದು SIT ತನಿಖೆಗೆ ಹಾಜರಾಗುತ್ತೇನೆ ತಂದೆ-ತಾಯಿ, ತಾತನಿಗೆ ಕ್ಷಮೆಕೋರುತ್ತೇನೆ, ಜನತೆ, ಜೆಡಿಎಸ್ ಕಾರ್ಯಕರ್ತರಿಗೂ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ. ನ್ಯಾಯಾಂಗದ ಮೂಲಕ ನನ್ನ ವಿರುದ್ಧದ ಸುಳ್ಳು ಆರೋಪಗಳಿಂದ ಮುಕ್ತನಾಗುತ್ತೇನೆ ಎಂದು ಪ್ರಜ್ವಲ್ ರೇವಣ್ಣ ವಿಡಿಯೋ ಸಂದೇಶದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2. ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಕಾರ್ಯಪಡೆ ಸಮಿತಿ 

ಬಿಬಿಎಂಪಿ ವ್ಯಾಪ್ತಿಯಲ್ಲಿ ಗುಂಡಿಗಳನ್ನು ಮುಚ್ಚುವುದಕ್ಕೆ ಸಮಗ್ರ ಕಾರ್ಯಾಚರಣೆ, ಮೇಲ್ವಿಚಾರಣೆ ಮತ್ತು ಅನುಷ್ಠಾನಕ್ಕಾಗಿ ಹೊಸ ಕಾರ್ಯಪಡೆ ಸಮಿತಿಯನ್ನು ರಚಿಸಲಾಗಿದೆ. ಕೆಲವು ದಿನಗಳ ಹಿಂದೆ ಮುಂಗಾರು ಪೂರ್ವದಲ್ಲಿ ಪಾಲಿಕೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದ್ದ ಸಿಎಂ ಸಿದ್ದರಾಮಯ್ಯ ಕಾರ್ಯಪಡೆ ಸಮಿತಿ ರಚಿಸುವುದಕ್ಕೆ ಸೂಚನೆ ನೀಡಿದ್ದರು. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ವಲಯ ಮಟ್ಟದಲ್ಲಿ ಸಮಿತಿ ರಚಿಸಲಾಗಿದ್ದು, ಪ್ರತಿ ವಲಯದ ಸಂಚಾರಿ ಎಸಿಪಿ ಈ ಸಮಿತಿಯಲ್ಲಿರಲಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಆಯುಕ್ತರು, ಪಾಲಿಕೆ ವಾರದೊಳಗೆ ಈಗಾಗಲೇ 1,500 ಗುಂಡಿಗಳನ್ನು ಮುಚ್ಚಿದ್ದು, ಶೀಘ್ರದಲ್ಲೇ ನಗರದಾದ್ಯಂತ 4,500 ಗುಂಡಿಗಳನ್ನು ಮುಚ್ಚಲಿದೆ ಎಂದು ತಿಳಿಸಿದ್ದಾರೆ.

ಈಮಧ್ಯೆ, ಗುಜರಾತ್ ನ ರಾಜ್ ಕೋಟ್ ನಲ್ಲಿ ಗೇಮಿಂಗ್ ಝೊನ್ ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಬೆನ್ನಲ್ಲೆ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ‌ಸೂಚನೆ ನೀಡಿದೆ. ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಗ್ನಿ ಅವಘಡಗಳನ್ನು ತಪ್ಪಿಸುವುದಕ್ಕಾಗಿ ನಿಯಮಿತ ತಪಾಸಣೆಗಳನ್ನು ಕಡ್ಡಾಯವಾಗಿ ಮಾಡುವುದರೊಂದಿಗೆ, ನಗರದಾದ್ಯಂತ ಮನರಂಜನಾ ಸ್ಥಳಗಳಲ್ಲಿ ಸುರಕ್ಷಿತ ಕ್ರಮಗಳನ್ನು ತ್ವರಿತವಾಗಿ ಅಳವಡಿಸುವಂತೆ ಸೂಚನೆ ನೀಡಿದ್ದಾರೆ.

3. ಭ್ರಷ್ಟಾಚಾರ:ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಚಂದ್ರಶೇಖರನ್ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ 3 ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿ, ಬಹುಕೋಟಿ ಭ್ರಷ್ಟಾಚಾರ ರಹಸ್ಯವನ್ನೂ ಬಹಿರಂಗಪಡಿಸಿದ್ದಾರೆ. ವಾಲ್ಮೀಕಿ ನಿಗಮದ ಅನುದಾನದಲ್ಲಿ 80 ರಿಂದ 85 ಕೋಟಿ ರೂ.ಗಳನ್ನು ನಿಯಮ ಬಾಹಿರವಾಗಿ ಲೂಟಿ ಮಾಡಿದ್ದಾರೆ ಈ ಅವ್ಯವಹಾರದಲ್ಲಿ ನನ್ನ ಪಾತ್ರವಿಲ್ಲ. ಆದರೆ ಕೆಲಸದ ಒತ್ತಡದಲ್ಲಿ ಸದರಿ ಖಾತೆಯ ಚೆಕ್ ಪುಸ್ತಕ ಪಡೆಯದಿರುವುದು ಮತ್ತು ಕ್ಯಾಶ್ ಪುಸ್ತಕ ಮುಕ್ತಾಯಗೊಳಿಸದಿರುವುದು ನನ್ನ ತಪ್ಪಾಗಿದೆ. ಈ ಹಗರಣಕ್ಕೆ ನಾನು ಕಾರಣನಲ್ಲ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

4. ಜೂನ್ 5 ರ ಸುಮಾರಿಗೆ ಎಲ್ಲೆಡೆ ಮಳೆ ಆರಂಭ: IMD

ಮೇ 31 ರಿಂದ ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಲಿದ್ದು, ಜೂನ್ 5 ರ ಸುಮಾರಿಗೆ ಎಲ್ಲೆಡೆ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ವರ್ಷ, ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಆದಾಗ್ಯೂ, ಚಂಡಮಾರುತಗಳಿಂದ ಬದಲಾವಣೆಗಳಾದರೆ ಮುಂಗಾರು ಇನ್ನೂ 4-5 ದಿನ ವಿಳಂಬವಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಮಧ್ಯೆ, ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಬಳಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಸಂತ್ರಸ್ತರು ವಾಡಿ ಪಟ್ಟಣದ ರೈಲ್ವೆ ಕಾಲೋನಿಯ ನಿವಾಸಿಗಳಾಗಿದ್ದು, ಮಳೆ ಬಂದ ಹಿನ್ನೆಲೆ ಮರದಡಿ ನಿಂತಿದ್ದಾಗ ಈ ದುರ್ಘಟನೆ ನಡೆದಿದೆ.

5. ಕಲಬುರಗಿಯಲ್ಲಿ ರಸ್ತೆ ಅಪಘಾತ: 3 ಸಾವು

ಕೆಕೆ‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ, ಅಪ್ರಾಪ್ತ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಕ್ರಾಸ್ ಬಳಿಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಲ್ಲದೆ, ಮೇ 26 ರಂದು ಒಂದೇ ದಿನ ರಾಜ್ಯದಲ್ಲಿ ರಸ್ತೆ ಅಪಘಾತದಲ್ಲಿ ಒಟ್ಟು 51 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಹಲವು ಪ್ರಕರಣಗಳು ಅತಿ ವೇಗ ಹಾಗೂ ಅಜಾಗರೂಕ ಚಾಲನೆಯಿಂದ ಸಂಭವಿಸಿದೆ ಎಂದು ಟ್ರಾಫಿಕ್ ಹಾಗೂ ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com