ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ಪ್ರಶ್ನಿಸಿ ದೇವರಾಜು ಹೈಕೋರ್ಟ್‌ಗೆ ಮೇಲ್ಮನವಿ

ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಮುಡಾ ಪ್ರಕರಣದ ತನಿಖೆಗೆ ಅನುಮತಿಸುವ ಮೂಲಕ ತಾವು ವಿನಾಕಾರಣ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣ ಎದುರಿಸುವಂತಾಗಿದೆ ಎಂದು ದೇವರಾಜು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.
ರಾಜ್ಯ ಹೈಕೋರ್ಟ್‌
ರಾಜ್ಯ ಹೈಕೋರ್ಟ್‌
Updated on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ರದ್ದುಪಡಿಸುವಂತೆ ಕೋರಿ ಸಿದ್ದರಾಮಯ್ಯ ಅವರ ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿಗೆ ವಿವಾದಿತ ಭೂಮಿ ಮಾರಾಟ ಮಾಡಿದ್ದ ಜೆ.ದೇವರಾಜು ಅವರು ಗುರುವಾರ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಮುಡಾ ಪ್ರಕರಣದ ತನಿಖೆಗೆ ಅನುಮತಿಸುವ ಮೂಲಕ ತಾವು ವಿನಾಕಾರಣ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣ ಎದುರಿಸುವಂತಾಗಿದೆ ಎಂದು ದೇವರಾಜು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ದೇವರಾಜು ಪರ ಹಿರಿಯ ವಕೀಲ ದುಷ್ಯಂತ್ ದವೆ ಅವರು, ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠದ ಮುಂದೆ ಹಾಜರಾಗಿ, ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ನವೆಂಬರ್ 23ರಂದು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.

ರಾಜ್ಯ ಹೈಕೋರ್ಟ್‌
ಮುಡಾ ಹಗರಣ: ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಕೆ

ದೇವರಾಜು ಪರ ವಾದ ಮಂಡಿಸಿದ ದವೆ ಅವರು, ಮೇಲ್ಮನವಿದಾರರು ಸಣ್ಣ ಭೂ ಮಾಲೀಕರಾಗಿದ್ದಾರೆ. ಶಕ್ತಿಯುತ ರಾಜಕಾರಣಿಗಳ ರಾಜಕೀಯ ಕೆಸರೆರಚಾಟದಲ್ಲಿ ಅವರನ್ನು ಸಿಲುಕಿಸಲಾಗಿದೆ. 25 ವರ್ಷಗಳ ಹಿಂದೆ ನಡೆದಿರುವ ಪ್ರಕರಣದಲ್ಲಿ ದೇವರಾಜು ವಿರುದ್ಧ ಏಕ ಸದಸ್ಯ ಪೀಠವು ಕಟು ಅಭಿಪ್ರಾಯ ವ್ಯಕ್ತಪಡಿಸಿ, ಪೊಲೀಸ್ ತನಿಖೆಗೆ ಅನುಮತಿಸಿದೆ. ಇದರಿಂದ ಮೇಲ್ಮನವಿದಾರರು ಕ್ರಿಮಿನಲ್ ಪ್ರಾಸಿಕ್ಯೂಷನ್ ಎದುರಿಸಬೇಕಿದೆ. ದೇವರಾಜು ಸಾಮಾನ್ಯ ಮನುಷ್ಯನಾಗಿದ್ದು, ಸಕಾರಣವಿಲ್ಲದೇ ಯಾತನೆ ಅನುಭವಿಸುತ್ತಿದ್ದಾರೆ. ನಮ್ಮ ಮೇಲ್ಮನವಿಗಳನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಕೋರಿದರು.

ಈ ಮಧ್ಯೆ, ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯನ್ನೂ ಸಹ ವಿಭಾಗೀಯ ಪೀಠ ನವೆಂಬರ್ 23ರಂದೇ ವಿಚಾರಣೆ ನಡೆಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com