ಅಕ್ಟೋಬರ್ 16 ರಂದು ಕಾವೇರಿ 5ನೇ ಹಂತ ಲೋಕಾರ್ಪಣೆ: CM-DCMಗೆ ಆಹ್ವಾನ

ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ಸಹಭಾಗಿತ್ವದಲ್ಲಿ 4336 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಯೋಜನೆಯಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ 775 ಎಂಎಲ್'ಡಿ ನೀರು ಲಭ್ಯವಾಗಲಿದೆ. 50 ಲಕ್ಷ ಜನರಿಗೆ ಸದುಪಯೋಗವಾಗಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಯೋಜನೆಯ ಐದನೇ ಹಂತಕ್ಕೆ ಅ.16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ.

ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ಸಹಭಾಗಿತ್ವದಲ್ಲಿ 4336 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಯೋಜನೆಯಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ 775 ಎಂಎಲ್'ಡಿ ನೀರು ಲಭ್ಯವಾಗಲಿದೆ. 50 ಲಕ್ಷ ಜನರಿಗೆ ಸದುಪಯೋಗವಾಗಲಿದೆ.

ಬೆಂಗಳೂರಿನ ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಅವರುೋ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರಿಗೆ ಸಮಾರಂಭದ ಆಹ್ವಾನ ಪತ್ರಿಕೆ ನೀಡಿದರು.

ಯೋಜನೆಯು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ(ಟಿ.ಕೆ.ಹಳ್ಳಿ)ಯ ಬೆಂಗಳೂರು ಜಲಮಂಡಳಿ ಆವರಣದಲ್ಲಿ ಅ.16ರಂದು ಬೆಳಗ್ಗೆ 10.30ಕ್ಕೆ ಲೋಕಾರ್ಪಣೆಯಾಗಲಿದೆ. ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ/ರಾಜ್ಯ ಸಚಿವರುಗಳು ಹಾಗೂ ಸಂಸದರು ಮತ್ತು ಶಾಸಕರು ಹಾಗೂ ಇನ್ನೀತರ ಎಲ್ಲ ಚುನಾಯಿತ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಮನೆಮನೆಗೂ ಕಾವೇರಿ ನೀರು ತಲುಪಿಸಿ ಸಮೃದ್ಧ ಬೆಂಗಳೂರಿಗೆ ಕೈ ಜೋಡಿಸಿರುವ ಜೈಕಾ ಇಂಡಿಯಾ ಕಚೇರಿಯ ಮುಖ್ಯ ಪ್ರತಿನಿಧಿ ಟೇಕುಚಿ ಟಕುರೋ, ಕೌನ್ಸಲ್ ಜನರಲ್ ಆಫ್ ಜಪಾನ್ ಇನ್ ಇಂಡಿಯಾದ ಟ್ಸುಟೋಮು, ಭಾರತದಲ್ಲಿ ಜಪಾನ್ ರಾಯಭಾರ ಕಚೇರಿಯ ಆರ್ಥಿಕ ಸಚಿವ (ಆರ್ಥಿಕ ಮತ್ತು ಅಭಿವೃದ್ಧಿ)ರಾದ ಹೊಕುಗೋ ಕ್ಯೋಕು ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆಂದು ತಿಳಿದುಬಂದಿದೆ.

ಸಂಗ್ರಹ ಚಿತ್ರ
ಕಾವೇರಿ 5ನೇ ಹಂತ ಕಾಮಗಾರಿ ಬಹುತೇಕ ಪೂರ್ಣ, ವಿಜಯದಶಮಿಗೆ ಉದ್ಘಾಟನೆ: ರಾಜ್ಯ ಸರ್ಕಾರ

ಯೋಜನೆ ಕುರಿತು ಈ ಹಿಂದೆ ಮಾತನಾಡಿದ್ದ ಡಿಸಿಎಂ ಡಿಕೆ.ಶಿವಕುಮಾರ್ ಅವರು, ವೇಗವಾಗಿ ಬೆಳೆಯುತ್ತಿರುವ ಮಹಾನಗರಿ ಬೆಂಗಳೂರಿನ ಭವಿಷ್ಯದ ದೂರದೃಷ್ಟಿಯನ್ನಿಟ್ಟುಕೊಂಡು ಅನುಷ್ಠಾನಗೊಳಿಸಿದ ಮಹತ್ವದ ಯೋಜನೆ ಇದಾಗಿದೆ. ಇದರಿಂದ 110ಹಳ್ಳಿಗಳ ನಿವಾಸಿಗಳಿಗೆ ಹಾಗೂ ಬೆಂಗಳೂರು ನಗರದ ಎಲ್ಲ ನಿವಾಸಿಗಳಿಗೆ ಸಮರ್ಪಕ ನೀರು ಸರಬರಾಜಾಗಲಿದೆ. ಅವಕಾಶಗಳ ನಗರವೆಂದೇ ಖ್ಯಾತಿಯಾಗಿರುವ ಬೆಂಗಳೂರು ನಗರದಲ್ಲಿ ಇನ್ನಷ್ಟು ಮೂಲಸೌಕರ್ಯಗಳನ್ನು ಕಲ್ಪಿಸುವಲ್ಲಿ ಅಗತ್ಯ ಯೋಜನೆಗಳನ್ನು ನಮ್ಮ ಸರಕಾರ ರೂಪಿಸಿದ್ದು, ಅದನ್ನು ಸಾಕಾರಗೊಳಿಸಲಿದ್ದೇವೆಂದು ಹೇಳಿದ್ದರು.

ಕಾವೇರಿ 5ನೇ ಹಂತದ ಯೋಜನೆ ಮೂಲಕ ಯಶವಂತಪುರ, ದಾಸರಹಳ್ಳಿ, ಬ್ಯಾಟರಾಯನಪುರ, ಬೆಂಗಳೂರು ದಕ್ಷಿಣ, ಮಹದೇವಪುರ, ರಾಜರಾಜೇಶ್ವರಿನಗರ, ಕೆಆರ್ಪುರ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧ ಹಳ್ಳಿಗಳ ಮನೆ ಮನೆಗೂ ಹಾಗೂ ಬೆಂಗಳೂರು ನಗರದ ಎಲ್ಲೆಡೆ ಕಾವೇರಿ ನೀರು ಸಮರ್ಪಕ ಸರಬರಾಜು ಆಗಲಿದೆ. ಯೋಜನೆಯನ್ನು ವೇಗವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಇತ್ತೀಚೆಗೆ ಖುದ್ದಾಗಿ ಟಿ.ಕೆ.ಹಳ್ಳಿಗೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಸಲಹೆ-ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ತಿಳಿಸಿದ್ದರು.

ಬೆಂಗಳೂರಿನ ಪ್ರತಿಯೊಂದು ಮನೆಗೂ ಸಮರ್ಪಕ ನೀರು ಹರಿಸುವುದು ಜಲಮಂಡಳಿಯ ಗುರಿಯಾಗಿದ್ದು, ಮನೆ ಮನೆಗೆ ಕಾವೇರಿ ತಲುಪಿಸುವ ಬೆಂಗಳೂರು ಜಲಮಂಡಳಿಯ ಈ ಯೋಜನೆಯು ಶೀಘ್ರದಲ್ಲೇ ಬೆಂಗಳೂರನ್ನು ನೀರಿನ ಸಮಸ್ಯೆಯಿಂದ ಮುಕ್ತಿಗೊಳಿಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com