ಹಳೇ ಹುಬ್ಬಳ್ಳಿ ಕೇಸ್‌ ವಾಪಸ್‌ಗೆ ಸರ್ಕಾರ ನಿರ್ಧಾರ: 16 ಏಪ್ರಿಲ್ 2022 ರ ರಾತ್ರಿ ನಡೆದದ್ದೇನು?

ಮುಸ್ಲಿಮರ ವಿರುದ್ಧ ಯುವಕನೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು.
ಹೈಕೋರ್ಟ್
ಹೈಕೋರ್ಟ್
Updated on

ಹುಬ್ಬಳ್ಳಿ: ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ನಡೆದ ಹಳೇ ಹುಬ್ಬಳ್ಳಿ ಗಲಭೆಯ ವಿಷಯದಲ್ಲಿ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂಬ ಕಾರಣಕ್ಕೆ ಈ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ.

2022ರಲ್ಲಿ ಹಳೇ ಹುಬ್ಬಳ್ಳಿ ಭಾಗದಲ್ಲಿ ನಡೆದ ಹಿಂಸಾಚಾರ ಘಟನೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಕಾಂಗ್ರೆಸ್ ಸರಕಾರ ಹಿಂಪಡೆಯುವ ಮೂಲಕ ಮತ್ತೆ ಸುದ್ದಿಯಾಗಿದೆ. ಸರ್ಕಾರದ ಕ್ರಮವನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ, ಆದರೆ ಸಚಿವರು ಮತ್ತು ಕಾಂಗ್ರೆಸ್ ನಾಯಕರು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಏಪ್ರಿಲ್ 16, 2022 ರ ಸಂಜೆ ಹಳೇ ಹುಬ್ಬಳ್ಳಿಯಲ್ಲಿ ಮುಸ್ಲಿಮರ ವಿರುದ್ಧ ಯುವಕನೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು. ಮುಸಲ್ಮಾನರ ಪ್ರಾಬಲ್ಯವಿರುವ ಈ ಭಾಗದ ಸಮುದಾಯದ ಜನರು ಆಕ್ರೋಶಗೊಂಡು ಹಳೇ ಹುಬ್ಬಳ್ಳಿ ಠಾಣೆಗೆ ತೆರಳಿ ದೂರು ನೀಡಿ ಯುವಕನನ್ನು ಬಂಧಿಸುವಂತೆ ಕೋರಿದ್ದರು.

ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಯುವಕನನ್ನು ಬಂಧಿಸಿದ್ದರು. ಆದರೆ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿದ ಆಕ್ರೋಶಗೊಂಡ ಜನರು ಆತನನ್ನು ತಮಗೆ ಒಪ್ಪಿಸುವಂತೆ ಒತ್ತಾಯಿಸಿದರು. ಪೊಲೀಸ್ ಅಧಿಕಾರಿಗಳು ಸಮುದಾಯದ ಮುಖಂಡರೊಂದಿಗೆ ಮಾತನಾಡುತ್ತಿರುವಾಗ, ಗುಂಪಿನಿಂದ ಕೆಲವು ಕಿಡಿಗೇಡಿಗಳು ಪೊಲೀಸರ ವಾಹನಗಳು ಮತ್ತು ಠಾಣೆಯ ಮೇಲೆ ಕಲ್ಲು ತೂರಿದರು. ಈ ವೇಳೆ ಕಿಡಿಗೇಡಿಗಳ ಆರ್ಭಟ ನಿಯಂತ್ರಣ ತಪ್ಪಿದಾಗ, ಪೊಲೀಸರು ಲಾಠಿ ಚಾರ್ಜ್ ಮಾಡಿದರು ಮತ್ತು ಗುಂಪನ್ನು ನಿಯಂತ್ರಿಸಲು ರಬ್ಬರ್ ಗುಂಡುಗಳನ್ನು ಹಾರಿಸಿದರು. ಈ ವೇಳೆ ಸಮುದಾಯವು ಸಾರ್ವಜನಿಕರು ಮತ್ತು ಹತ್ತಿರದ ದೇವಾಲಯಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿದಾಗ, ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿ 13 ಸುತ್ತು ಗುಂಡು ಹಾರಿಸಿದರು, ಇದರಿಂದ ಪರಿಸ್ಥಿತಿ ಹತೋಟಿಗೆ ಬಂತು. ಆ ರಾತ್ರಿ ನಡೆದ ಹಿಂಸಾಚಾರದಲ್ಲಿ ಇನ್‌ಸ್ಪೆಕ್ಟರ್ ಸೇರಿದಂತೆ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ನಂತರ ಪೊಲೀಸರು ಘಟನೆಯ ವೀಡಿಯೊ ರೆಕಾರ್ಡಿಂಗ್‌ಗಳನ್ನು ಪರಿಶೀಲಿಸಿ ಮುಂದಿನ ಕೆಲವು ದಿನಗಳಲ್ಲಿ 150 ಕ್ಕೂ ಹೆಚ್ಚು ಜನರನ್ನು ಬಂಧಿಸಿದರು.

ಬೆಂಕಿ ಹಚ್ಚುವ ಮತ್ತು ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಪಡಿಸುವ ಆರೋಪದ ಜೊತೆಗೆ, ಕೆಲವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA) ಅಡಿಯಲ್ಲಿ ಆರೋಪ ಮಾಡಲಾಯಿತು. ಇದನ್ನು ವ್ಯಾಪಕವಾಗಿ ಭಯೋತ್ಪಾದಕ ಆರೋಪಗಳು ಎಂದು ಕರೆಯಲಾಗುತ್ತದೆ. ಘಟನೆಯು ಅಂತಹ ಕಠಿಣ ಆರೋಪವನ್ನು ಹೇರುವಷ್ಟು ತೀವ್ರವಾಗಿಲ್ಲದಿದ್ದರೂ, ಅಂದಿನ ಸರ್ಕಾರವು ಬೆಂಗಳೂರಿನ ಡಿಜಿ ಹಳ್ಳಿ ಮತ್ತು ಕೆಜಿಹಳ್ಳಿಯಲ್ಲಿ ವರದಿಯಾದ ಹಿಂಸಾತ್ಮಕ ಘಟನೆಯ ರೀತಿ ಈ ಪ್ರಕರಣವಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿತು.

ಬಿಜೆಪಿ ಅಧಿಕಾರದಲ್ಲಿರುವವರೆಗೂ ಆರೋಪಿಗಳು ಜೈಲಿನಲ್ಲಿದ್ದರು. ಜಾಮೀನು ಪಡೆಯುವ ಪ್ರಯತ್ನ ವಿಫಲವಾಯಿತು. 2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ, ಸಿದ್ದರಾಮಯ್ಯ ಸರ್ಕಾರವು ತಮ್ಮ ಮೇಲಿನ ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಆರೋಪಿಗಳಲ್ಲಿ ಭರವಸೆ ಮೂಡಿತು.

ಸುಪ್ರೀಂ ಕೋರ್ಟ್ ಡಿಸೆಂಬರ್‌ನಲ್ಲಿ 35 ಆರೋಪಿಗಳಿಗೆ ಜಾಮೀನು ನೀಡಿದ್ದರೆ, ಈ ವರ್ಷದ ಫೆಬ್ರವರಿಯಲ್ಲಿ 111 ಮಂದಿ ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ. ಕೊನೆಗೂ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com