
ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಬೇಕಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡುವ ಕುರಿತು ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.
ಡಿಸೆಂಬರ್ 20 ರಿಂದ ಮಂಡ್ಯದಲ್ಲಿ 3 ದಿನಗಳ ಕಾಲ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಡಿಸೆಂಬರ್ ಕೊನೆಯ ವಾರದಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂಭ್ರಮಾಚರಣೆ ಬೆಳಗಾವಿಯಲ್ಲಿ ನಡೆಯಲಿದೆ.
ಸಾಹಿತ್ಯ ಸಮ್ಮೇಳನವು 2024 ಫೆಬ್ರವರಿ ತಿಂಗಳಿನಲ್ಲೇ ನಡೆಯಬೇಕಿತ್ತು. ಆದರೆ, ಬರಗಾಲ ಹಾಗೂ ಮತ್ತಿತರ ಕಾರಣಗಳಿಂದ ಒಂದೆರಡು ಬಾರಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್ 20-23ರವರೆಗೆ ನಡೆಸಲು ನಿರ್ಧರಿಸಲಾಗಿದೆ.
ಇದೇ ವೇಳೆ, 1924 ರ ಡಿ.26 ಮತ್ತು 27 ರಂದು ಬೆಳಗಾವಿಯಲ್ಲಿ ನಡೆದಿದ್ದ 39ನೇ ಕಾಂಗ್ರೆಸ್ ಅಧಿವೇಶನ ಉದ್ದೇಶಿಸಿ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದರು. ಈ ಕಾರ್ಯಕ್ರಮ ನಡೆದು 100 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಡಿ.26 ಮತ್ತು 27 ರಂದು ಬೆಳಗಾವಿಯಲ್ಲೇ ಕಾಂಗ್ರೆಸ್ ಅಧಿವೇಶನ ನಡೆಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಚಳಿಗಾಲ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡುವಲ್ಲಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ದಿನಾಂಕಗಳನ್ನು ಅಂತಿಮಗೊಳಿಸುವಲ್ಲಿ ಗೊಂದಲವಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ನಿಗದಿತ ದಿನಾಂಕದಂದು ಸಾಹಿತ್ಯ ಸಮ್ಮೇಳನ ನಡೆಸುವಂತೆ ಕನ್ನಡ ಪರ ಸಂಘಟನೆಗಳಿಂದ ಒತ್ತಡವಿದ್ದರೂ, ವಾರದ ಮಧ್ಯದಲ್ಲಿ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭವೂ ಬರುವುದರಿಂದ ಚಳಿಗಾಲದ ಅಧಿವೇಶನವನ್ನು ಮೂರು ಮತ್ತು ನಾಲ್ಕನೇ ವಾರದಲ್ಲಿ ನಡೆಸುವುದು ಕಷ್ಟಕರವಾಗಿದೆ. ಹೀಗಾಗಿ ಡಿಸೆಂಬರ್ ಮೊದಲ ಎರಡು ವಾರಗಳಲ್ಲಿ ಅಧಿವೇಶನದ ದಿನಾಂಕಗಳ ಕುರಿತು ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಜುಲೈನಲ್ಲಿ ಮುಂಗಾರು ಅಧಿವೇಶನ ನಡೆದಿದ್ದು, ಹಲವು ಮಸೂದೆಗಳು ಅಂಗೀಕಾರವಾಗಬೇಕಿದೆ. ಪರಿಷತ್ತು ಮತ್ತು ವಿಧಾನಸಭೆಯ ಸಿಬ್ಬಂದಿ ಈಗಾಗಲೇ ತಮ್ಮ ಕೆಲಸವನ್ನು ಪ್ರಾರಂಭಿಸಿದ್ದಾರೆ.
ಆದಷ್ಟು ಬೇಗ ಅಧಿವೇಶನ ದಿನಾಂಕ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಸಿಎಂ ಮತ್ತು ಡಿಸಿಎಂ ಅವರ ಅನುಮೋದನೆಗೆ ಕಾಯುತ್ತಿದ್ದೇವೆ. ಅನುಮತಿ ಸಿಕ್ಕ ಕೂಡಲೇ ಸಂಪುಟದ ಮುಂದೆ ಇರಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ನಲ್ಲಿ ಉಪಚುನಾವಣೆ ನಡೆಯಲಿದ್ದು, ನವೆಂಬರ್ 23ಕ್ಕೆ ಫಲಿತಾಂಶ ಹೊರಬೀಳಲಿದ್ದು, ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.
Advertisement