Tushar Giri Nath IAS
ಸಭೆಯಲ್ಲಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ಯಲಹಂಕದಲ್ಲಿ ಮೇಘಸ್ಫೋಟ: ರಕ್ಷಣಾ ಕಾರ್ಯಾಚರಣೆ ನಿರ್ವಹಣೆಗೆ ಹೆಚ್ಚುವರಿ IAS, KAS ಅಧಿಕಾರಿಗಳ ನಿಯೋಜನೆ!

ಪ್ರತಿಯೊಬ್ಬ ಅಧಿಕಾರಿಗೂ ನಿರ್ದಿಷ್ಟ ಜವಾಬ್ದಾರಿ ವಹಿಸಿ ಸ್ಥಳೀಯ ನಿವಾಸಿಗಳಿಗೆ ಕೂಡಲೇ ಸ್ಪಂದಿಸಬೇಕು, ತುರ್ತಾಗಿ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Published on

ಬೆಂಗಳೂರು: ಯಲಹಂಕ ವಲಯದಲ್ಲಿ ಮೇಘಸ್ಫೋಟ ಸಂಭವಿಸಿ ಭಾರೀ ಮಳೆಯಾಗುತ್ತಿರುವುದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರ ಆದೇಶದ ಮೇರೆಗೆ ಮಹಾನಗರ ಪಾಲಿಕೆಯ ಇತರ ವಲಯಗಳಿಂದ ಹೆಚ್ಚುವರಿ ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳನ್ನು ಮೇಲ್ವಿಚಾರಣೆಗೆ ನಿಯೋಜಿಸಲಾಗಿದೆ.

ಪ್ರತಿಯೊಬ್ಬ ಅಧಿಕಾರಿಗೂ ನಿರ್ದಿಷ್ಟ ಜವಾಬ್ದಾರಿ ವಹಿಸಿ ಸ್ಥಳೀಯ ನಿವಾಸಿಗಳಿಗೆ ಕೂಡಲೇ ಸ್ಪಂದಿಸಬೇಕು, ತುರ್ತಾಗಿ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಯಲಹಂಕ ವಲಯದಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, 'ಅತಿವೃಷ್ಟಿಯಿಂದ ಜಲಾವೃತವಾಗಿರುವ ಪ್ರದೇಶಗಳಲ್ಲಿ ತಕ್ಷಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅತ್ಯಂತ ಸಮಸ್ಯಾತ್ಮಕ ಪ್ರದೇಶಗಳಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕೂಡಲೇ ಸ್ಪಂದಿಸಿ ಸಂತ್ರಸ್ತ ಪ್ರದೇಶಗಳ ನಿವಾಸಿಗಳಿಗೆ ಕುಡಿಯುವ ನೀರು, ಹಾಲು, ಬಿಸ್ಕೆಟ್, ಆಹಾರ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Tushar Giri Nath IAS
Cloud burst hits Bengaluru: ಯಲಹಂಕ ವಲಯದಲ್ಲಿ ದಾಖಲೆಯ ಮಳೆ, 10 ಬಡಾವಣೆ ಜಲಾವೃತ; 4000 ನಿವಾಸಿಗಳು ಬಾಧಿತ!

ಅಲ್ಲದೆ ಭದ್ರಪ್ಪ ಲೇಔಟ್, ಟಾಟಾನಗರ ಸೇರಿದಂತೆ ಹೆಚ್ಚು ನೀರು ಇರುವ ಪ್ರದೇಶಗಳಲ್ಲಿ ಹೆಚ್ಚುವರಿಯಾಗಿ 10-15 ಎಚ್ ಪಿ ಪಂಪ್, ಅಗ್ನಿಶಾಮಕ ವಾಹನಗಳ ವ್ಯವಸ್ಥೆ ಮಾಡಿ ನೀರನ್ನು ಹೊರಗೆ ಹರಿಸಬೇಕು. ರಾಜಕಾಲುವೆ ಸಮೀಪ ಪ್ರಮುಖ ಸ್ಥಳಗಳಲ್ಲಿ ಜೆಸಿಬಿಗಳನ್ನು ಹಾಕಿ ರಾಜಕಾಲುವೆಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಿ, ನೀರು ಹೆಚ್ಚು ಇರುವ ಪ್ರದೇಶಗಳಲ್ಲಿ ನಗರಸಭೆ ಅಧಿಕಾರಿಗಳು, ಬೆಸ್ಕಾಂ, ಪೊಲೀಸ್, ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಅಧಿಕಾರಿಗಳು/ಸಿಬ್ಬಂದಿ ಸ್ಥಳದಲ್ಲೇ ಇದ್ದು ಶೀಘ್ರ ಸಮಸ್ಯೆ ಬಗೆಹರಿಸಬೇಕು. ಎಸ್ ಡಿಆರ್ ಎಫ್/ಎನ್ ಡಿಆರ್ ಎಫ್ ಮೂಲಕ ಫ್ಲಡ್ ಲೈಟ್ ವ್ಯವಸ್ಥೆ ಮಾಡಿ ನೀರು ಹರಿಸಲು ಹಗಲು ರಾತ್ರಿ ಕಾರ್ಯಾಚರಣೆ ನಡೆಸಬೇಕು ಎಂದು ಆಯುಕ್ತರು ಸೂಚಿಸಿದರು.

ನಗರದ ಕೆಲವೆಡೆ ಮಳೆಯಾಗುವ ಸಂಭವವಿದ್ದು, ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷಿತವಾಗಿರಲು ಮೊದಲೇ ಮಾಹಿತಿ ನೀಡಬೇಕು. ತುಂಬಿದ ಕೆರೆಗಳಿಗೆ ಹಾಗೂ ಕೆಳಮಟ್ಟದ ಕೆರೆಗಳಿಗೆ ನೀರು ಹರಿಸಿ ಪ್ರವಾಹ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ವಿಶೇಷ ಆಯುಕ್ತ ಸುರಲ್ಕರ್ ವಿಕಾಸ್ ಕಿಶೋರ್, ವಲಯ ಆಯುಕ್ತ ಕರೀಗೌಡ, ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೋಮಿನ್, ಜಿಲ್ಲಾಧಿಕಾರಿ ಪಲ್ಲವಿ, ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com