
ಬೆಂಗಳೂರು: ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ ಎರಡು ದಿನಗಳ ನಂತರ ಮೃತರ ಕುಟುಂಬಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, ಕೆಂಗೇರಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಇಬ್ಬರು ಮಕ್ಕಳ ಕುಟುಂಬಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಐದು ಲಕ್ಷ ರೂಪಾಯಿ ಪರಿಹಾರ ನೀಡಲಿದ್ದು, ಮಳೆ ನೀರಿನ ಪರಿಣಾಮವಾಗಿ ಮನೆಗೆ ಹಾನಿ ಎದುರಿಸಿರುವ ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ವಸತಿ ರಹಿತರಿಗೆ ತಾತ್ಕಾಲಿಕ ವಸತಿ ಮತ್ತು ಆಹಾರದ ವ್ಯವಸ್ಥೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಸೋಮವಾರ (ಅ.21) ರಂದು ಸಂಜೆ ಮಹಾಲಕ್ಷ್ಮಿ (11 ವರ್ಷ) ಮತ್ತು ಆಕೆಯ ಸಹೋದರ ಜಾನ್ ಶ್ರೀನಿವಾಸ್ (13) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಪೋಲೀಸರ ಪ್ರಕಾರ, ಮಹಾಲಕ್ಷ್ಮಿ ಪಾಟ್ ತರಲು ಹೋಗಿ ಕೆರೆಯಲ್ಲಿ ಬಿದ್ದು ಮುಳುಗಿದ್ದರು. ರಕ್ಷಿಸಲು ಹೋದ ಆಕೆಯ ಸಹೋದರ ಕೂಡ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ.
ನಗರದಾದ್ಯಂತ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿದ್ದು, ಈಗಾಗಲೇ ವಿಶ್ವಬ್ಯಾಂಕ್ನಿಂದ 1000 ಕೋಟಿ ರೂಪಾಯಿ ಸಾಲ ಪಡೆದು ಮಳೆನೀರು ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಡಿಸಿಎಂ ತಿಳಿಸಿದ್ದಾರೆ.
ಶಿವಕುಮಾರ್ ನಗರಸಭೆ ಅಧಿಕಾರಿಗಳ ತಂಡದೊಂದಿಗೆ ಬುಧವಾರ ಯಲಹಂಕದ ಕೇಂದ್ರೀಯ ವಿಹಾರ ವಸತಿ ಸಂಕೀರ್ಣ, ಬೈತರಾಯನಪುರದ ಮರಿಯಣ್ಣಪಾಳ್ಯ, ಹೊರಮಾವು ವಾರ್ಡ್ನ ಕೆಆರ್ ಪುರಂನ ಶ್ರೀ ಸಾಯಿ ಲೇಔಟ್ಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ್ದರು.
ಪರಿಹಾರ ಕಾರ್ಯವನ್ನು ಪರಿಶೀಲಿಸಿದ ಅವರು, ಅಪಾರ್ಟ್ಮೆಂಟ್ ನಿವಾಸಿಗಳ ಸಂಘದ ಸದಸ್ಯರೊಂದಿಗೆ ಪರಿಸ್ಥಿತಿ ಕುರಿತು ಚರ್ಚಿಸಿದರು. ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ಸಿಬ್ಬಂದಿಯೊಂದಿಗೆ ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಸ್ಥಳಾಂತರಗೊಂಡ ನಿವಾಸಿಗಳಿಗೆ ಸೂಕ್ತ ಮೂಲಸೌಕರ್ಯ ಕಲ್ಪಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಾಜಕಾಲುವೆ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ಡಿಸಿಎಂ ಮಾಹಿತಿ ನೀಡಿದರು. ಎನ್ಡಿಆರ್ಎಫ್ ಅನುದಾನ ಸೇರಿದಂತೆ ವಿವಿಧ ಯೋಜನೆಗಳಡಿ ಕೆರೆಗಳ ಸ್ವಚ್ಛತೆ ಮತ್ತು ಹೂಳು ತೆಗೆಯಲಾಗುವುದು. ಸದ್ಯದಲ್ಲೇ ಕೆರೆ ನಿರ್ವಹಣಾ ಸಮಿತಿ ಸಭೆ ಕರೆಯಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.
Advertisement