ನವೆಂಬರ್ 15ರೊಳಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ಅಧಿಕಾರಿಗಳಿಗೆ BBMP ಸೂಚನೆ

ಬೃಹತ್ ಮಳೆನೀರು ಕಾಲುವೆ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ತಹಶೀಲ್ದಾರ್‌ಗಳು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿ, ಈ ಗಡುವು ನೀಡಿದರು.
Tushar girinath
ತುಷಾರ್ ಗಿರಿನಾಥ್
Updated on

ಬೆಂಗಳೂರು: ನವೆಂಬರ್‌ 15ರೊಳಗೆ ನಗರದಲ್ಲಿನ ರಾಜಕಾಲುವೆಗಳ ಒತ್ತುವರಿಯನ್ನು ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ ನೀಡಿದೆ.

ಬೃಹತ್ ಮಳೆನೀರು ಕಾಲುವೆ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ತಹಶೀಲ್ದಾರ್‌ಗಳು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿ, ಈ ಗಡುವು ನೀಡಿದರು.

ತಹಶೀಲ್ದಾರ್ ಅವರು ಎಲ್ಲಾ ಪ್ರಸ್ತಾವನೆಯನ್ನು ಪರಾಮರ್ಶಿಸಿ, ಆದೇಶ ಹೊರಡಿಸಬೇಕು. ಎಲ್ಲಾ ವಲಯ ಆಯುಕ್ತರು ಕೂಡಲೇ ಕ್ರಮ ಕೈಗೊಳ್ಳಬೇಕು. ರಾಜಕಾಲುವೆ ಒತ್ತುವರಿ ತೆರವು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಬಿಬಿಎಂಪಿ ವ್ಯಾಪ್ತಿಯ ಎಲ್ಲ ಕೆರೆಗಳ ಸಮೀಕ್ಷೆ ನಡೆಸಬೇಕು. ಸಮೀಕ್ಷೆ ದಾಖಲೆ ಬಂದ ಕೂಡಲೇ ಒತ್ತುವರಿ ತೆರವುಗೊಳಿಸಬೇಕು ಎಂದು ಸೂಚಿಸಿದರು.

ಇದೇ ವೇಳೆ ಬಿಬಿಎಂಪಿ ವ್ಯಾಪ್ತಿಯ ಟೆಂಡರ್ ಶ್ಯೂರ್ ರಸ್ತೆಗಳ ಮೇಲೆ ಮತ್ತು ಬೆಸ್ಕಾಂ ಕಂಬಗಳಲ್ಲಿ ಹಾಕಿರುವ ಅನಧಿಕೃತ ಓವರ್ ಹೆಡ್ ಕೇಬಲ್‌ಗಳನ್ನು ಕೂಡಲೇ ತೆರವುಗೊಳಿಸುವಂತೆಯೂ ತುಷಾರ್‌ ಗಿರಿನಾಥ್‌ ಸೂಚಿಸಿದರು.

Tushar girinath
ಕಸದಿಂದ ವಿದ್ಯುತ್‌ ಉತ್ಪಾದನೆ ಘಟಕ: ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ಇನ್ನು ಮುಂದೆ ಹೊಸ ಕೇಬಲ್ ಅಳವಡಿಸಬೇಕಾದರೆ ಡಕ್ಟ್ ಮೂಲಕವೇ ಅಳವಡಿಸಬೇಕು. ಪಾಲಿಕೆಯ ಅನುಮತಿ ಇಲ್ಲದೇ ಯಾವುದೇ ಕೇಬಲ್ ಅಳವಡಿಸಿದರೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಬೆಸ್ಕಾಂ ಕೂಡ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಕಂಬದ ಮೇಲಿನ ಕೇಬಲ್ ಅಳವಡಿಸಬಾರದು ಹಾಗೆಯೇ ನಿಗದಿತ ಅವಧಿಯಲ್ಲಿ ತೆರವುಗೊಳಿಸಬೇಕು. ನಿಗದಿತ ಹಣವನ್ನು ಪಾವತಿ ಮಾಡಿ ಡಕ್ಟ್‌ನಲ್ಲಿ ಅಳವಡಿಸಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್, ಬಿಬಿಎಂಪಿ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ಡಾ.ಹರೀಶ್ ಕುಮಾರ್, ವಿಶೇಷ ಜಿಲ್ಲಾಧಿಕಾರಿ ಎಸ್.ಎಲ್.ಬಾಲಚಂದ್ರನ್, ವಲಯ ಆಯುಕ್ತರಾದ ಕರಿಗೌಡ, ರಮ್ಯಾ, ವಿನೋಥ್ ಪ್ರಿಯಾ, ಸತೀಶ್, ಅರ್ಚನಾ, ಗಿರೀಶ್ ಹಾಗೂ ತಹಶೀಲ್ದಾರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com