ಮುಡಾ ಪ್ರಕರಣ ಸಂಬಂಧ ಹೊಸದಾಗಿ ಶೋಧ ಕಾರ್ಯ: ಬೆಂಗಳೂರಿನಲ್ಲೂ ಬಿಲ್ಡರ್ ಮನೆ ಮೇಲೆ ಇಡಿ ದಾಳಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸೋಮವಾರ ಹೊಸದಾಗಿ ಶೋಧ ಆರಂಭಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಹಗರಣ ಸಂಬಂಧ ಇಡಿ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನ 7-8 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಡಿ ಅಧಿಕಾರಿಗಳು ಅಕ್ಟೋಬರ್ 18 ಮುಡಾ ಕಚೇರಿ ಸೇರಿದಂತೆ ಮೈಸೂರಿನ ಇತರ ಕೆಲವು ಸ್ಥಳಗಳ ಮೇಲೆ ದಾಳಿ ಮಾಡಿದ್ದರು. ದಾಳಿ ಬಳಿಕ, ಇಡಿ ಅಧಿಕಾರಿಗಳು ಮುಡಾದ ಆರು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಸಂಗ್ರಹಿಸಿದ್ದರು. ಅಧಿಕಾರಿಗಳು ಕಳೆದ ವಾರ ಬೆಂಗಳೂರಿನ ಇಡಿ ಕಚೇರಿಯಲ್ಲಿ ಮುಡಾದ ಕೆಲವು ಕೆಳಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದರು.
ಬೆಂಗಳೂರಿನ ಜೆ.ಪಿ.ನಗರದ ಬಿಲ್ಡರ್ ಎನ್. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಡಿ ಅಧಿಕಾರಿಗಳು ಬಿಲ್ಡರ್ಸ್ ನಿವಾಸದಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತದಲ್ಲಿ ದಾಖಲಾದ ಎಫ್ಐಆರ್ ಮಾಹಿತಿಯಂತೆ ಸಿಎಂ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಇಸಿಐಆರ್ ದಾಖಲಿಸಿದೆ. ಸಿದ್ದರಾಮಯ್ಯ ಅವರು ತಮ್ಮ ಪತ್ನಿಗೆ ಮುಡಾದಿಂದ 14 ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಲೋಕಾಯುಕ್ತ ಹಾಗೂ ಇಡಿ ತನಿಖೆ ಎದುರಿಸುತ್ತಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ಇತ್ತೀಚೆಗೆ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ