ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಅರಬಿಳಚಿ ಕ್ಯಾಂಪ್ನಲ್ಲಿ ನಡೆದಿದೆ. ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಗಲಾಟೆ ವೇಳೆ ಅರ್ಜುನ್ ಎಂಬ ಯುವಕನ ಮೇಲೆ ಹಲ್ಲೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಡಿಸಲು ಹೋದ ಪೋಲಿಸ್ ಪೇದೆಗಳಾದ ನಾಗರಾಜ್ ಮತ್ತು ವಿಶ್ವ ಎಂಬುವರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಘಟನೆ ಸಂಬಂಧ ಪೊಲೀಸ್ ಅಧಿಕಾರಿಗಳು 15 ರಿಂದ 20 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಘಟನೆ ಬೆನ್ನಲ್ಲೇ ಸ್ಥಳದಲ್ಲಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಂದ ವಿಶೇಷ ಆಹ್ವಾನದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅಮೇರಿಕಾಗೆ ತೆರಳಲಿದ್ದಾರೆ. ಅಮೆರಿಕದ ನಾರ್ಥ್ ಕ್ಯಾರೋಲಿನಾದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಸೆಪ್ಟೆಂಬರ್ 14 ರಂದು ಸ್ವದೇಶಕ್ಕೆ ವಾಪಸ್ ಆಗಲಿದ್ದಾರೆ. ಕಮಲಾ ಹ್ಯಾರಿಸ್ ಅವರ ತಾಯಿ ಶ್ಯಾಮಲಾ ಗೋಪಾಲನ್ ಅವರ ಟ್ರಸ್ಟ್ವೊಂದರ ಜೊತೆ ಡಿ.ಕೆ.ಶಿವಕುಮಾರ್ ನಂಟು ಹೊಂದಿದ್ದಾರೆ. ಈ ಟ್ರಸ್ಟ್ಗೆ ಡಿ.ಕೆ.ಶಿವಕುಮಾರ್ ನೆರವು ನೀಡಿದ್ದರು. ಕಮಲಾ ಹ್ಯಾರಿಸ್ ಅಮೆರಿಕದಲ್ಲಿ ಪ್ರಜಾಪ್ರಭುತ್ವ ಮತ್ತು ಚುನಾವಣೆ ಕುರಿತ ಸಂವಾದ ಕಾರ್ಯಕ್ರಮ ಆಯೋಜಿಸಿದ್ದು, ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಅವರೂ ಈ ಕಾರ್ಯಕ್ರಮಕ್ಕೆ ಆಹ್ವಾನಿತರಾಗಿದ್ದಾರೆ.
ಅಳಿವಿನ ಅಂಚಿನಲ್ಲಿರುವ ಬೆಂಗಳೂರಿನ ವಿಶ್ವಪ್ರಸಿದ್ಧ ವಾಚ್ ಕಂಪನಿ ಹೆಚ್ಎಂಟಿಗೆ ಕಾಯಕಲ್ಪ ನೀಡಲು ಕೇಂದ್ರ ಬೃಹತ್ ಕೈಗಾರಿಕಾ ಸಚಿವಾಲಯ ಮುಂದಾಗಿದೆ. ಭಾರತದ ಹೆಮ್ಮೆಯ ಕಾರ್ಖಾನೆಗಳಲ್ಲಿ ಒಂದಾಗಿದ್ದ ಹೆಚ್ಎಂಟಿ ಕಾರ್ಖಾನೆಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಪ್ರಧಾನಿಗಳ ಮಾರ್ಗದರ್ಶನದಲ್ಲಿ ಎಲ್ಲಾ ರೀತಿಯ ಮಾರ್ಗೋಪಾಯಗಳನ್ನು ಹುಡುಕಲಾಗುತ್ತಿದೆ. ಈಗಾಗಲೇ ನಾನು ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿರುವ ಹೆಚ್ಎಂಟಿ ಘಟಕಗಳಿಗೆ ಭೇಟಿ ನೀಡಿದ್ದೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪ್ರಧಾನಿ ಮೋದಿಗೆ ಹೆಚ್ಎಂಟಿ ವಾಚ್ಗಳನ್ನು ಉಡುಗೊರೆಯಾಗಿ ನೀಡಲು ಕುಮಾರಸ್ವಾಮಿ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ದೇವೇಂದ್ರ ಬಡಿಗೇರ್ ಮೃತ ವ್ಯಕ್ತಿಯಾಗಿದ್ದು, ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಈ ಅವಘಡ ಸಂಭವಿಸಿದೆ. ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಕೂಡಲೇ ಗ್ರಾಮಸ್ಥರು ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ದಾರಿ ಮಧ್ಯೆ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ.
ಎರಡು ದಿನಗಳ ಹಿಂದಷ್ಟೇ ವಿವಾಹವಾಗಿದ್ದ ನವ ದಂಪತಿ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಬಳಿ ವರದಿಯಾಗಿದೆ.
ಪೆರ್ನೆ ಸಮೀಪದ ಒಡ್ಯ ನಿವಾಸಿ ತರುಣ ಅನಿಶ್ ಕೃಷ್ಣ ತಮ್ಮ ಪತ್ನಿ ಮಾನಸ ಜೊತೆ ಬಿ.ಸಿ.ರೋಡ್ ನಿಂದ ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಗುದ್ದಿ ಹಾರಿ ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಸಾವನ್ನಪ್ಪಿದ್ದರೆ, ಅನಿಶ್ ಕೃಷ್ಣ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೊನ್ನೆ 5ರಂದು ಇವರಿಬ್ಬರ ವಿವಾಹ ದೇಂತಡ್ಕ ದೇವಸ್ಥಾನದಲ್ಲಿ ನೆರವೇರಿತ್ತು.
ಮತ್ತೊಂದು ಪ್ರಕರಣದಲ್ಲಿ ಗಣಪತಿ ತರಲು ಹೋಗುತ್ತಿದ್ದಾಗ ಟಾಟಾ ಏಸ್ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
Advertisement