ವಾಲ್ಮೀಕಿ ನಿಗಮ ಹಗರಣ: ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆಗೆ BJP ಮುಂದು
ಬೆಂಗಳೂರು: ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಬುಧವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಕ್ಲೀನ್ ಚಿಟ್ ನೀಡಲು ಎಸ್ಐಟಿ ರಚಿಸಲಾಗಿದೆ ಎನ್ನಲಾಗಿದ್ದು, ಇದರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಹೈಕಮಾಂಡ್ ನಮಗೆ ಸಲಹೆ ನೀಡಿದ್ದು, ವಾಲ್ಮೀಕಿ ಹಗರಣದಲ್ಲಿ ನಮ್ಮ ಎರಡನೇ ಹಂತದ ಹೋರಾಟ ಶುರುವಾಗಲಿದೆ ಎಂದು ಹೇಳಿದ್ದಾರೆ.
ಪಕ್ಷದ ಬೆಂಗಳೂರು-ಮೈಸೂರು ಪಾದಯಾತ್ರೆಯಲ್ಲಿ ಮುಡಾ ಹಗರಣ ಗಮನ ಸೆಳೆದಿತ್ತು. ಹೀಗಾಗಿ ವಾಲ್ಮೀಕಿ ನಿಗಮ ಹಗರಣ ಹಲವರ ಗಮನಕ್ಕೆ ಬರಲಿಲ್ಲ. ಎಸ್ಟಿ ಅಭಿವೃದ್ಧಿ ನಿಗಮದ ಹಗರಣವನ್ನು ಎತ್ತಿ ಹಿಡಿದು ಪಾದಯಾತ್ರೆ ಕೈಗೊಳ್ಳುವ ರಾಜ್ಯ ನಾಯಕರ ಸಲಹೆಗಳಿಗೆ ಕೇಂದ್ರ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ಪಾದಯಾತ್ರೆಯ ವಿವರವನ್ನು ಬಿಜೆಪಿ ರಾಜ್ಯಾಧ್ಯಕ್ಷರು ನಿರ್ಧರಿಸುತ್ತಾರೆ ಎಂದು ತಿಳಿಸಿದರು.
ಬಳ್ಳಾರಿಗೆ ಪಾದಯಾತ್ರೆ ಆಯೋಜಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಹುಶಃ ಆ ಪ್ರದೇಶದಲ್ಲಿ ನಡೆಯಬಹುದು, ಆದರೆ, ಎಲ್ಲವನ್ನೂ ಪಕ್ಷದ ನಾಯಕರು ನಿರ್ಧರಿಸುತ್ತಾರೆ ಎಂದರು.
ಸರ್ಕಾರದ ಹಣವನ್ನು ನೇರವಾಗಿ ಖಾಸಗಿ ಖಾತೆಗಳಿಗೆ ವರ್ಗಾಯಿಸಲಾಗಿರುವುದರಿಂದ ಇದು ಬಹುದೊಡ್ಡ ಹಗರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದು, ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಅಕ್ರಮ ಎಸಗಿದ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಸ್ಟಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದಡ್ಡಲ್ಗೆ ಸರ್ಕಾರ ರಕ್ಷಣೆ ನೀಡುತ್ತಿರುವುದೇಕೆ? ಎಸ್ಐಟಿ ತನಿಖೆಯ ಮೇಲೆ ನಂಬಿಕೆಯಿಲ್ಲದಂತಾಗಿದೆ. ಇಡಿ ವರದಿ ನೀಡಿದ್ದರೂ, ಎಸ್ಐಟಿ ವರದಿಯಲ್ಲಿ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಆರೋಪಿಸಿದರು.
ಇದೇ ವೇಳೆ ಮೀಸಲಾತಿ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ವಿದೇಶದಲ್ಲಿ ನೀಡಿರುವ ಹೇಳಿಕೆಯ ವಿರುದ್ಧವೂ ತೀವ್ರವಾಗಿ ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ದಲಿತ ವಿರೋಧಿ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಹಿರಿಯ ನಾಯಕ ಎನ್.ರವಿಕುಮಾರ್ ಅವರು ಮಾತನಾಡಿ, ಮೀಸಲಾತಿ ಎಸ್ಸಿ/ಎಸ್ಟಿ ಸಮುದಾಯದ ಜನರ ಹಕ್ಕೇ ಹೊರತು ಕಾಂಗ್ರೆಸ್ ನೀಡಿರುವ ದಾನವಲ್ಲ. ರಾಹುಲ್ ಹೇಳಿಕೆ ಖಂಡಿಸಿ ಗುರುವಾರ ಹಾಗೂ ಶುಕ್ರವಾರ ರಾಜ್ಯದಾದ್ಯಂತ ರಾಹುಲ್ ಗಾಂಧಿಯವರ ಪ್ರತಿಕೃತಿ ದಹಿಸಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ