ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ರೈತರಿಂದ 'ಬೆಂಗಳೂರು ಚಲೋ' ಪ್ರತಿಭಟನೆ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಮಂಗಳವಾರ ಬೆಂಗಳೂರು ಚಲೋ ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಪ್ರಾಂತೀಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘ ಜಂಟಿಯಾಗಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಿದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ ಸಾವಿರಾರು ರೈತರು ಪಾಲ್ಗೊಂಡರು.
ಕೃಷಿಕರನ್ನು ಮದುವೆಯಾಗುವ ಮಹಿಳೆಯರಿಗೆ ಮೀಸಲಾತಿ, ಕೈಗಾರಿಕೆಗಳ ಅಭಿವೃದ್ಧಿಗಾಗಿ ಕೃಷಿ ಭೂಮಿ ಸ್ವಾಧೀನ ನಿಲ್ಲಿಸುವುದು, ಭೂಮಿಯನ್ನು ಬಿಟ್ಟುಕೊಡುವ ರೈತರನ್ನು ಪಾಲುದಾರರಲ್ಲಿ ಒಬ್ಬರನ್ನಾಗಿ ಮಾಡುವುದು, ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ತಲಾ 25,000 ರೂ. ಪರಿಹಾರ ನೀಡಬೇಕು ಎಂದು ಪ್ರತಿಭಟನಾನಿರತ ರೈತರು ಆಗ್ರಹಿಸಿದರು.
ಪ್ರತಿಭಟನೆ ಕುರಿತು ಎಎಎನ್ ಎಸ್ ಜೊತೆಗೆ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರಾಜ್ಯ ಸರ್ಕಾರ ಕೃಷಿಗೆ 13,000 ಕೋಟಿ ರೂ.ಗಳಷ್ಟು ಹಂಚಿಕೆಯನ್ನು ಕಡಿಮೆ ಮಾಡಿದೆ. ಬಜೆಟ್ನಲ್ಲಿ ಈ ಕ್ಷೇತ್ರಕ್ಕೆ ಹಣ ಹಂಚಿಕೆಯನ್ನು ಹೆಚ್ಚಿಸಬೇಕು ಮತ್ತು ಹೆಚ್ಚುವರಿ ಹಣವನ್ನು ಸಹ ನೀಡಬೇಕು ಎಂದು ಒತ್ತಾಯಿಸಿದರು.
ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ರೈತರ ಸಾಲ ಮನ್ನಾ ಘೋಷಣೆ ಮಾಡಿ ಅನುಷ್ಠಾನಗೊಳಿಸುತ್ತಿದೆ.ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಿದ್ದರೂ ಅಂತಹ ಯಾವುದೇ ಕ್ರಮ ಕೈಗೊಂಡಿಲ್ಲ.ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸುತ್ತೇವೆ ಎಂದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಸದ್ಯದಲ್ಲೇ ಮಂಡಿಸಲಿರುವ ರಾಜ್ಯ ಬಜೆಟ್ನಲ್ಲಿ ರೈತರ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು. ರೈತರು ಬರಗಾಲ ಎದುರಿಸುತ್ತಿದ್ದು, ಜೀವನೋಪಾಯ ಅರಸಿ ವಲಸೆ ಹೋಗುತ್ತಿದ್ದಾರೆ. ಅನೇಕರು ಆತ್ಮಹತ್ಯೆಯ ಹಾದಿ ತುಳಿದಿದ್ದಾರೆ’ ಎಂದು ಶಾಂತಕುಮಾರ್ ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ