ಲೋಕಸಭಾ ಚುನಾವಣೆ: ಫೆಬ್ರವರಿ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಸಲೀಂ ಅಹಮ್ಮದ್

ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಮುಂದುವರೆದಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಭಾನುವಾರ ಹೇಳಿದರು.
ಸಲೀಂ ಅಹಮ್ಮದ್
ಸಲೀಂ ಅಹಮ್ಮದ್
Updated on

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಮುಂದುವರೆದಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಭಾನುವಾರ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ. ಈಗಾಗಲೇ ಪಕ್ಷದ ಆಂತರಿಕ ಸರ್ವೇ ವರದಿಯಲ್ಲಿ ಬಹಿರಂಗಗೊಂಡಿದೆ ಎಂದು ಹೇಳಿದರು.

ಅಭ್ಯರ್ಥಿಗಳ ಪಟ್ಟಿ ಕುರಿತು ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿಂತೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಫೆಬ್ರವರಿ ಅಂತ್ಯದ ವೇಳೆ ಬಿಡುಗಡೆಯಾಗಲಿದೆ. ಈಗಾಗಲೇ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅರ್ಹರ ಪಟ್ಟಿಯನ್ನು ಕೆಪಿಸಿಸಿಯಿಂದ ಎಐಸಿಸಿಗೆ ಕಳುಹಿಸಲಾಗಿದೆ. ಇದರ ಪರಿಶೀಲನೆ, ಸರ್ವೆ ಕಾರ್ಯ ನಡೆಯುತ್ತಿದ್ದು, ಶೀಘ್ರ ಅಂತಿಮವಾಗಲಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಕಾಂಗ್ರೆಸ್‌ನ 5 ಮಂದಿಯ ಹೆಸರಿನ ಪಟ್ಟಿಯನ್ನು ಕಳುಹಿಸಿಕೊಡಲಾಗಿದೆ. ಪಕ್ಷದ ಹೈಕಮಾಂಡ್ ಸಮರ್ಥ ಅಭ್ಯರ್ಥಿಯನ್ನು ದ.ಕ ಲೋಕಸಭಾ ಕ್ಷೇತ್ರಕ್ಕೆ ಆಯ್ಕೆ ಮಾಡಲಿದೆ. ಫೆಬ್ರವರಿ ಅಂತ್ಯಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಐದು ಗ್ಯಾರಂಟಿ ಮತ್ತು ಕೇಂದ್ರದ ಬಿಜೆಪಿಯ 10 ವರ್ಷಗಳ ದುರಾಡಳಿತ ಕಾಂಗ್ರೆಸ್‌ಗೆ ಗೆಲುವು ತಂದುಕೊಡಲಿದೆ. ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಸಿಗುವುದಿಲ್ಲ ಎಂದು ಬಿಜೆಪಿಗೆ ಅರಿವಾಗಿದ್ದು, ಅದಕ್ಕಾಗಿಯೇ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಪಕ್ಷದ ಸಭೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಬೃಹತ್ ಸಮಾವೇಶ ಫೆ.17ರಂದು ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನನೇಜ್‌ಮೆಂಟ್ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ.

ಸಮಾವೇಶದ ಉದ್ಘಾಟನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೆರವೇರಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪಕ್ಷದ ಸಂಸದರು, ಶಾಸಕರು, ಭಾಗವಹಿಸಲಿದ್ದಾರೆ. ಇದೊಂದು ಐತಿಹಾಸಿಕ ಸಮಾವೇಶವಾಗಲಿದೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರ ಕಳೆದ 5 ವರ್ಷಗಳಿಂದ ರಾಜ್ಯಕ್ಕೆ ಅನ್ಯಾಯ ಮಾಡಿದೆ. ನಮಗೆ ಬೇಕಾದ ಹಣದ ಪಾಲನ್ನು ನೀಡುತ್ತಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಅವರು ರಾಜ್ಯದ ಪರ ಧ್ವನಿ ಎತ್ತುತ್ತಿಲ್ಲ. 4 ಮಂದಿ ಕೇಂದ್ರ ಸಚಿವರು ಇದ್ದರೂ ಪ್ರಯೋಜನ ಇಲ್ಲ. ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ. ಅವರಲ್ಲಿ ಕೇಳಿದರೆ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ನಿರ್ಮಲಾ ಸೀತಾರಾಮನ್‌ಗೆ ರಾಜ್ಯದ ಪರ ಧ್ವನಿ ಎತ್ತಲು ಸಾಧ್ಯವಾಗದಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಇದೇ ವೇಳೆ ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com