ಕಲಬುರಗಿ: ರಾಮ ಮಂದಿರ ವಿಚಾರವಾಗಿ ಯಾರೂ ರಾಜಕೀಯ ಮಾಡಬಾರದು ಎಂದು ಹೇಳಿರುವ ಕಾಂಗ್ರೆಸ್ MLC ಜಗದೀಶ್ ಶೆಟ್ಟರ್ ಅವರು, ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುವಾಗ 2 ಕೋಟಿ ರೂಪಾಯಿ ಸಂಗ್ರಹ ಕೊಟ್ಟಿದ್ದೆ. ಆದರೆ ನನಗೆ ಆಹ್ವಾನ ಬಂದಿಲ್ಲ. ಹೀಗಾಗಿ ನಾನು ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗಿರುವುದು ಬಹಳ ಖುಷಿ ತಂದಿದೆ. ಆದರೆ ಜನವರಿ 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಬಂದಿಲ್ಲ. ಹೀಗಾಗಿ ನಾನು ಅಂದು ಅಯೋಧ್ಯೆಗೆ ಹೋಗುವುದಿಲ್ಲ ಎಂದು ಹೇಳಿದರು.
ನಾನು ರಾಮ ಭಕ್ತ. ರಾಮಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸಲು ಹೇಳಿದಾಗ 2 ಕೋಟಿ ರೂಪಾಯಿ ಸಂಗ್ರಹಿಸಿ ಕೊಟ್ಟಿದ್ದೆ. ಆದರೆ ನನಗೆ ಆಹ್ವಾನ ಕೊಟ್ಟಿಲ್ಲ. ಹೀಗಾಗಿ ಜನವರಿ 22ರ ನಂತರ ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಪಡೆಯುತ್ತೇನೆ ಎಂದು ಹೇಳಿದರು.
ರಾಮ ಮಂದಿರ ಅನ್ನುವುದು ಧಾರ್ಮಿಕತೆ, ಧರ್ಮದ ಸಂಕೇತ, ಧರ್ಮ ಜಾಗೃತಿ ಮಾಡಲು, ದೇಶವನ್ನು ಒಂದು ಮಾಡಲು ಇರುವಂಥದ್ದು, ಹೀಗಾಗಿ ರಾಮ ಮಂದಿರದ ವಿಚಾರದಲ್ಲಿ ರಾಜಕಾರಣ ಮಾಡಬಾರದು. ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಬರಬಾರದು. ಆಹ್ವಾನ ಬಂದಿರುವವರು ಅಯೋಧ್ಯೆಗೆ ಹೋಗುವುದು ಬಿಡುವುದು ಅವರವರ ಇಷ್ಟ. ಆದರೆ ನನಗೆ ವೈಯಕ್ತಿಕವಾಗಿ ಆಹ್ವಾನ ಬಂದಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಹಿಂದೂ ವಿರೋಧಿ ಅಲ್ಲ, ಹಿಂದೂ ವಿರೋಧಿ ಇದ್ದರೆ ರಾಜ್ಯದಲ್ಲಿ 135 ಸ್ಥಾನ ಹೇಗೆ ಬರುತ್ತಿತ್ತು? ಬಿಜೆಪಿಯಿಂದ ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ, ನಾನು ವಾಪಸ್ ಬಿಜೆಪಿಗೆ ಹೋಗುವ ಪ್ರಶ್ನೆಯೆ ಇಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದರು.
Advertisement