ಬೆಂಗಳೂರು: ಪೇಯಿಂಟ್ ಅಂಗಡಿಯಲ್ಲಿ ಅಗ್ನಿ ಅವಘಡ, 30 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು!
ಬೆಂಗಳೂರು: ಪೇಯಿಂಟ್ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಬರೋಬ್ಬರಿ 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಗರದ ಬಳೆಪೇಟೆಯಲ್ಲಿ ನಡೆದಿದೆ.
ಎರಡು ಅಂತಸ್ತಿನ ಕಟ್ಟಡ ಇದಾಗಿದ್ದು, ಕೆಳ ಮಹಡಿಯಲ್ಲಿ ಪೇಯಿಂಟ್ ಅಂಗಡಿ ಇದ್ದು, ಎರಡನೇ ಮಹಡಿಯಲ್ಲಿ ಬ್ಯಾಂಗ್ ಅಂಗಡಿ ಇತ್ತು ಎಂದು ತಿಳಿದುಬಂದಿದೆ. ಮೊದಲಿಗೆ ಪೇಯಿಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ಬಳಿಕ ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡವನ್ನು ಆವರಿಸಿದೆ.
ಈ ವೇಳೆ ಕಟ್ಟಡದ ಒಳಗೆ ಪ್ರವೇಶಿಸಿದ್ದ ಯುವಕ ಹೊರಬರಲಾರದೆ ಸಿಲುಕಿಕೊಂಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಅವರನ್ನು ರಕ್ಷಣೆ ಮಾಡಿದ್ದಾರೆ.
ಬಳಿಕ ಜೆಸಿಬಿ ಬಳಸಿ ಕಟ್ಟಡದ ಶೆಟರ್ಸ್ ಮುರಿದು ಸತತ ನಾಲ್ಕು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೈಂಟ್ ಅಂಗಡಿ ಮಾಲೀಕ ಕೃಷ್ಣಮೂರ್ತಿ ಕುಟುಂಬಸ್ಥರು, '20 ವರ್ಷಕ್ಕೂ ಹಿಂದಿನಿಂದ ಇದೇ ಕಟ್ಟಡದಲ್ಲಿ ಪೇಯಿಂಟ್ ವ್ಯಾಪಾರ ಮಾಡುತ್ತಿದ್ದೆವು. ಇದೇ ಮೊದಲ ಬಾರಿಗೆ ಈ ಅನಾಹುತವಾಗಿದೆ' ಎಂದು ಕಣ್ಣೀರು ಹಾಕಿದ್ದಾರೆ.
ಘಟನೆಗೆ ನಿಖರ ಕಾರಣ ಏನು ಎಂಬುದನ್ನು ತಿಳಿಯಲು ಉಪ್ಪಾರಪೇಟೆ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ