ಸಿರಾದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಸಾಧ್ಯವಲ್ಲ; ಜಿಲ್ಲಾ ವಿಮಾನ ನಿಲ್ದಾಣ ಮಾಡಬಹುದು

ಸಿರಾದಲ್ಲಿ ವಿಮಾನ ನಿಲ್ದಾಣ ಮಾಡಿದ್ರೆ, ಅದು ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗುವುದಿಲ್ಲ. ಬದಲಿಗೆ ಜಿಲ್ಲಾ ಅಥವಾ ಪ್ರಾದೇಶಿಕ ವಿಮಾನ ನಿಲ್ದಾಣವಾಗುತ್ತದೆ ಎಂದು ಪಾಟೀಲ್ ಹೇಳಿದ್ದಾರೆ.
ಎಂಬಿ ಪಾಟೀಲ್
ಎಂಬಿ ಪಾಟೀಲ್
Updated on

ಬೆಂಗಳೂರು: ತುಮಕೂರು ಜಿಲ್ಲೆಯ ಸಿರಾದಲ್ಲಿ ರಾಜ್ಯದ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂಬ ಬೇಡಿಕೆ ಬಲಗೊಳ್ಳುತ್ತಿದ್ದು, ಇದಕ್ಕೆ ಗೃಹ ಸಚಿವ ಜಿ. ಪರಮೇಶ್ವರ ಅವರು ಬೆಂಬಲಿಸುತ್ತಿದ್ದರೂ, ಮೂಲಸೌಕರ್ಯ ಸಚಿವ ಎಂ.ಬಿ. ಪಾಟೀಲ್ ಮಾತ್ರ ಇದು ಕಾರ್ಯಸಾಧ್ಯವಲ್ಲ ಎಂದು ಗುರುವಾರ ಹೇಳಿದ್ದಾರೆ.

ಸಿರಾದಲ್ಲಿ ವಿಮಾನ ನಿಲ್ದಾಣ ಮಾಡಿದ್ರೆ, ಅದು ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗುವುದಿಲ್ಲ. ಬದಲಿಗೆ ಜಿಲ್ಲಾ ಅಥವಾ ಪ್ರಾದೇಶಿಕ ವಿಮಾನ ನಿಲ್ದಾಣವಾಗುತ್ತದೆ ಎಂದು ಪಾಟೀಲ್ ಹೇಳಿದ್ದಾರೆ.

ಟಿ.ಬಿ.ಜಯಚಂದ್ರ ಸೇರಿದಂತೆ 35 ಕಾಂಗ್ರೆಸ್ ಶಾಸಕರು ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವರಿಗೆ, ಸಿರಾದಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದಾರೆ. ಕೇಂದ್ರ ಸಚಿವ ಮತ್ತು ತುಮಕೂರು ಸಂಸದ ವಿ. ಸೋಮಣ್ಣ ಕೂಡ ಇದಕ್ಕೆ ಧ್ವನಿಗೂಡಿಸಿದ್ದಾರೆ.

ನಗರದ ಎರಡನೇ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ ಮೂರು ಸ್ಥಳಗಳನ್ನು ಆಯ್ಕೆ ಮಾಡಿದೆ - ಹಾರೋಹಳ್ಳಿ ಬಳಿಯ ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲದ ಕುಣಿಗಲ್ ರಸ್ತೆಯಲ್ಲಿ ಒಂದು ಸ್ಥಳ ಆಯ್ಕೆ ಮಾಡಿದ್ದು, ಕಳೆದ ಎರಡು ದಿನಗಳಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ) ಅಧಿಕಾರಿಗಳು ಈ ಸ್ಥಳಗಳಿಗೆ ತೆರಳಿ ಪರಿಶೀಲಿಸಿದೆ.

ಎಂಬಿ ಪಾಟೀಲ್
ಬೆಂಗಳೂರಿನ 2ನೇ ವಿಮಾನ ನಿಲ್ದಾಣ: ಸಂಭಾವ್ಯ ಸ್ಥಳವಾಗಿ 'ಶಿರಾ'; ಶಾಸಕ ಅಭಿಯಾನ!

"ಜಯಚಂದ್ರ ಹಿರಿಯರು, ನಾನು ಅವರನ್ನು ಗೌರವಿಸುತ್ತೇನೆ. ಆದರೆ ಸಿರಾದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಿದರೆ ಅದು ಬೆಂಗಳೂರಿಗೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗುವುದಿಲ್ಲ. ಅದು ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಿಗೆ ವಿಮಾನ ನಿಲ್ದಾಣವಾಗುತ್ತದೆ" ಎಂದು ಪಾಟೀಲ್ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ತುಮಕೂರು, ಸಿರಾ ಮತ್ತು ಚಿತ್ರದುರ್ಗ ಪ್ರದೇಶಕ್ಕೆ ಜಿಲ್ಲಾ ವಿಮಾನ ನಿಲ್ದಾಣವನ್ನು ಪರಿಗಣಿಸುತ್ತಿದ್ದೇವೆ" ಎಂದು ಹೇಳಿದರು.

ಅಂತಿಮಗೊಳಿಸಿದ ಸ್ಥಳದಲ್ಲಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲು ವಿಮಾನ ನಿಲ್ದಾಣ ಪ್ರಾಧಿಕಾರ ಮುಂದೆ ಬರುವುದು ಒಂದು ಪ್ರಮುಖ ಅಂಶವಾಗಿದೆ ಮತ್ತು ಅವರು ಕಾರ್ಯಸಾಧ್ಯತೆಯ ಆಧಾರದ ಮೇಲೆ ಅಧನ್ನು ನಿರ್ಧರಿಸುತ್ತಾರೆ ಎಂದು ಸಚಿವರು ತಿಳಿಸಿದರು.

"ವಿಜಯಪುರದಲ್ಲಿ (ಅವರ ಸ್ವಂತ ಊರು ವಿಜಯಪುರ) ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗಬೇಕೆಂಬ ಆಸೆ ನನಗೂ ಇದೆ, ಅದು ಸಾಧ್ಯವೇ?" ಎಂದು ಪ್ರಶ್ನಿಸಿದರು.

ಎಂಬಿ ಪಾಟೀಲ್
Watch | ಬೆಂಗಳೂರಿನ 2ನೇ ವಿಮಾನ ನಿಲ್ದಾಣ: ತುಮಕೂರು ಬಳಿ? ಸಚಿವ ಸೋಮಣ್ಣ ಹೇಳಿದ್ದು...

ಏತನ್ಮಧ್ಯೆ, ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ ಅವರು, ಸಿರಾ ಅಥವಾ ಕೊರಟಗೆರೆ ಅಥವಾ ಈ ಪ್ರದೇಶದ ಯಾವುದೇ ಸ್ಥಳದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದರೆ ಸಂತೋಷವಾಗುತ್ತದೆ. ಏಕೆಂದರೆ ಅದು ಅಲ್ಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂದರು.

ನೆಲಮಂಗಲ ಮತ್ತು ಕನಕಪುರದ ಭಾಗದಲ್ಲಿ ಈಗಾಗಲೇ ಸರ್ವೇಯನ್ನು ಮಾಡಲಾಗಿದೆ. ಪ್ರಾಧಿಕಾರಕ್ಕೆ ಅದರದ್ದೇ ಆದ ಪ್ಯಾರಾಮೀಟರ್ಸ್ ಇರುತ್ತದೆ " ಎಂದು ಪರಮೇಶ್ವರ ಹೇಳಿದ್ದಾರೆ.

ಶಿರಾಗೆ ಇನ್ನೂ ಪ್ರಾಧಿಕಾರದ ಅಧಿಕಾರಿಗಳು ಸಮೀಕ್ಷೆಗೆ ಬಂದಿಲ್ಲ. ಈ ಭಾಗದಲ್ಲಿ ವಿಮಾನ ನಿಲ್ದಾಣ ಆರಂಭಗೊಂಡರೆ ಸುಮಾರು 20 ಜಿಲ್ಲೆಗಳಿಗೆ ಅನುಕೂಲವಾಗಲಿದೆ. ಏರ್‌ಪೋರ್ಟ್ ವಿಚಾರ ಹೈಜಾಕ್ ಆಗಿಲ್ಲ. ಅಧಿಕಾರಿಗಳು ಪ್ಯಾರಮೀಟರ್ಸ್ ಅಡಿಯಲ್ಲೇ ರೆಕಮೆಂಡೇಷನ್ ಮಾಡುತ್ತಾರೆ. ಆ ಮೇಲೆ, ಕೇಂದ್ರ ಸರ್ಕಾರ ಈ ಬಗ್ಗೆ ನಿರ್ಧಾರ ಮಾಡುತ್ತದೆ ಎಂದು ಪರಮೇಶ್ವರ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com