
ವಿಜಯಪುರ: ಪ್ರವಾದಿ ಮಹಮ್ಮದ್ ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮುಸ್ಲಿಂ ನಾಯಕರು ಗುರುವಾರ ಎಚ್ಚರಿಕೆ ನೀಡಿದ್ದಾರೆ.
ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್ನ ವಿವಿಧ ಮುಸ್ಲಿಂ ನಾಯಕರು ಹೇಳಿದ್ದಾರೆ.
“ಯತ್ನಾಳ್ ಅವರು ಬಹಳ ಸಮಯದಿಂದ ಮುಸ್ಲಿಮರ ವಿರುದ್ಧ ವಿಷ ಕಾರುತ್ತಿದ್ದಾರೆ. ನಾವು ಅದನ್ನು ಸಾಂವಿಧಾನಿಕ ಮಿತಿಯೊಳಗೆ ಟೀಕಿಸುತ್ತಿದ್ದೇವೆ. ಆದರೆ ಯತ್ನಾಳ್ ನಮ್ಮ ಪ್ರವಾದಿಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದರೆ ನಾವು ಇನ್ನು ಮುಂದೆ ಸಹಿಸುವುದಿಲ್ಲ” ಎಂದು ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಶ್ರಿಫ್ ಅವರು ತಿಳಿಸಿದ್ದಾರೆ.
ಇಂದು ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಸ್ಲಿಂ ಸಮುದಾಯದ ವಿವಿಧ ಕಾಂಗ್ರೆಸ್ ನಾಯಕರು, ಜಗತ್ತಿನ ಯಾವುದೇ ಮುಸ್ಲಿಂ, ಪ್ರವಾದಿಯ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.
“ಪ್ರವಾದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ, ಯತ್ನಾಳ್ ನಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದಾರೆ, ಅದು ಅವರಿಗೆ ಒಳ್ಳೆಯದಲ್ಲ” ಎಂದರು.
ಎಸ್.ಎಂ. ಪಾಟೀಲ್ ಗಣಿಹಾರ್, ಮೊಹಮ್ಮದ್ ರಫೀಕ್ ಟಪಾಲ್, ಅಬ್ದುಲ್ ರಜಾಕ್ ಹೊರ್ಟಿ ಮತ್ತು ಎಂ.ಸಿ. ಮುಲ್ಲಾ ಸೇರಿದಂತೆ ಇತರ ನಾಯಕರು ಯತ್ನಾಳ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರು.
ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರವಾದಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಯತ್ಮಾಳ್ ಅವರ ವಿರುದ್ಧ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎಫ್ಐಆರ್ ದಾಖಲಿಸಲಾಗಿದೆ.
ವಕ್ಫ್ ತಿದ್ದುಪಡಿ ವಿರುದ್ಧ ಪ್ರತಿಭಟನೆ
ಇದೇ ವೇಳೆ ಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ಮುಸ್ಲಿಂ ನಾಯಕರು ಘೋಷಿಸಿದರು.
ತಿದ್ದುಪಡಿಗಳನ್ನು ಮುಸ್ಲಿಮರ ಕಲ್ಯಾಣಕ್ಕಾಗಿ ತರಲಾಗಿದೆ ಎಂದು ಹೇಳುವ ಕೇಂದ್ರ ಸರ್ಕಾರದ ಉದ್ದೇಶವನ್ನು ಪ್ರಶ್ನಿಸಿದ ಗಣಿಹಾರ್, ಭಾರತದಲ್ಲಿ ಮುಸ್ಲಿಮರನ್ನು ಹಿಂಸಿಸಲು ಬಿಜೆಪಿ ಸರ್ಕಾರ ತನ್ನಿಂದ ಸಾಧ್ಯವಾದ ಎಲ್ಲವನ್ನೂ ಮಾಡುತ್ತಿದೆ. ಈಗ, ಕಾಯ್ದೆಯಲ್ಲಿ ತಿದ್ದುಪಡಿ ತರುವ ಮೂಲಕ ಮುಸ್ಲಿಮರಿಗಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿಯನ್ನು ಯಾರಾದರೂ ನಂಬಲು ಸಾಧ್ಯವೇ? ಎಂದರು.
Advertisement