ST/SC ದೌರ್ಜನ್ಯ ತಡೆ: ಇಂದಿನಿಂದ 33 DCRE ಪೊಲೀಸ್ ಠಾಣೆಗಳು ಕಾರ್ಯಾರಂಭ

SCs ಮತ್ತು ST ಗಳ ನಾಗರಿಕ ಹಕ್ಕುಗಳನ್ನು ರಕ್ಷಿಸಲು 1974 ರಲ್ಲಿ ರಾಜ್ಯದಲ್ಲಿ ಡಿಸಿಆರ್‌ಇನ್ನು ಸ್ಥಾಪಿಸಲಾಗಿತ್ತು.
Directorate of Civil Rights Enforcement)
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ
Updated on

ಬೆಂಗಳೂರು: ರಾಜ್ಯದಲ್ಲಿ ವರದಿಯಾದ ಪರಿಶಿಷ್ಟ ಜಾತಿಗಳು (SCs) ಮತ್ತು ಪರಿಶಿಷ್ಟ ಪಂಗಡಗಳ (STs) ಮೇಲಿನ ಎಲ್ಲಾ ದೌರ್ಜನ್ಯ ಪ್ರಕರಣಗಳನ್ನು ತನಿಖೆ ಮಾಡಲು ಕರ್ನಾಟಕದಲ್ಲಿ ಮೀಸಲಾದ ಡಿಸಿಆರ್‌ಇ (ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ) ಪೊಲೀಸ್ ಠಾಣೆ ಸೋಮವಾರದಿಂದ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ.

SCs ಮತ್ತು ST ಗಳ ನಾಗರಿಕ ಹಕ್ಕುಗಳನ್ನು ರಕ್ಷಿಸಲು 1974 ರಲ್ಲಿ ರಾಜ್ಯದಲ್ಲಿ ಡಿಸಿಆರ್‌ಇನ್ನು ಸ್ಥಾಪಿಸಲಾಗಿತ್ತು. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಕೆಲವು ವಿಷಯಗಳಲ್ಲಿ ವಿಚಾರಣೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸುವ ಅಧಿಕಾರವನ್ನು ಇದು ಹೊಂದಿತ್ತು.

ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತರು ಸ್ಥಳೀಯ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲು ಮಾಡುತ್ತಿಲ್ಲವೆಂದು ಆರೋಪಿಸಿ ಡಿಸಿಆರ್‌ಇ ಘಟಕದ ಬಾಗಿಲು ತಟ್ಟುತ್ತಿದ್ದರು. ಆದರೆ, ಪೊಲೀಸ್‌ ಠಾಣೆ ಮಾನ್ಯತೆಯಿಲ್ಲದೇ ಕಾನೂನು ಪ್ರಕ್ರಿಯೆ ಕಾರ್ಯಗತ ಮಾಡುವುದು ಡಿಸಿಆರ್‌ಇ ಘಟಕಕ್ಕೆ ಅಸಾಧ್ಯವಾಗಿತ್ತು. ಅಧಿಕಾರಿಗಳು ಕೇವಲ ವಿಚಾರಣೆ ನಡೆಸಿ, ಕ್ರಮ ಜರುಗಿಸುವಂತೆ ಸ್ಥಳೀಯ ಠಾಣೆಗೆ ಶಿಫಾರಸು ಮಾಡಿ, ನೊಂದವರನ್ನು ಮತ್ತೆ ಸ್ಥಳೀಯ ಠಾಣೆಗಳಿಗೇ ಕಳುಹಿಸುತ್ತಿದ್ದರು.

ಸ್ಥಳೀಯ ಠಾಣೆಗಳಲ್ಲಿ ಇರುವ ಇತರ ಕೆಲಸಗಳ ಒತ್ತಡದಿಂದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾತಿ ಪ್ರಕ್ರಿಯೆ, ತನಿಖೆ, ದೋಷಾರೋಪ ಪಟ್ಟಿ ಸಲ್ಲಿಸುವುದು ವಿಳಂಬ ಆಗುತ್ತಿತ್ತು. ತನಿಖಾಧಿಕಾರಿಗಳು, ತನಿಖೆಯನ್ನು 60 ದಿನಗಳಲ್ಲಿ ಪೂರ್ಣಗೊಳಿಸಿ ಕೋರ್ಟ್‌ಗೆ ಆರೋಪ ಪಟ್ಟಿ ಸಲ್ಲಿಸಬೇಕಿತ್ತು. ಅದೂ ಸಾಧ್ಯವಾಗುತ್ತಿರಲಿಲ್ಲ.

ಹೀಗಾಗಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು, ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಮಾಡಲು, ಅನ್ಯಾಯಕ್ಕೆ ಒಳಗಾದವರಿಗೆ ತ್ವರಿತವಾಗಿ ನ್ಯಾಯ ಕಲ್ಪಿಸಲು ಬೆಂಗಳೂರಿನಲ್ಲಿ ಎರಡು, ಪ್ರತಿ ಜಿಲ್ಲೆಗೆ ಒಂದರಂತೆ ಒಟ್ಟು 33 ವಿಶೇಷ ಪೊಲೀಸ್‌ ಠಾಣೆ ಸ್ಥಾಪಿಸಲು ಆದೇಶಿಸಿತ್ತು. ಈ ಠಾಣೆಗಳ ಕಾರ್ಯಾಚರಣೆ ಇಂದಿನಿಂದ ಆರಂಭವಾಗುತ್ತಿದೆ. ಬೆಂಗಳೂರಿನಲ್ಲಿ ಪೂರ್ವ ಮತ್ತು ಪಶ್ಚಿಮ ಎರಡೂ ಭಾಗಗಳಲ್ಲಿ DCRE ಠಾಣೆಗಳಿವೆ.

Directorate of Civil Rights Enforcement)
ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆಗೆ ಕ್ರಮ: ಡಿಸಿಆರ್‌ಇ 33 ಘಟಕಗಳ ‘ವಿಶೇಷ ಪೊಲೀಸ್‌ ಠಾಣೆ’ಗಳೆಂದು ಘೋಷಿಸಲು ಸರ್ಕಾರ ನಿರ್ಧಾರ!

ಏಪ್ರಿಲ್ 14 ರಿಂದ DCRE ಅಧಿಕಾರಿಗಳು ಎಲ್ಲಾ ದೌರ್ಜನ್ಯ ಪ್ರಕರಣಗಳ ತನಿಖೆಗೆ ಹೆಚ್ಚುವರಿ ಅಧಿಕಾರಗಳೊಂದಿಗೆ ಕಾರ್ಯನಿರ್ವಹಿಸುತ್ತಾರೆ ಎಂದು DCREಯಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಹಿಂದೆ, DCRE SC/ST ಸಮುದಾಯಗಳನ್ನು ಒಳಗೊಂಡ ನಕಲಿ ಜಾತಿ ಪ್ರಮಾಣಪತ್ರಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಮಾತ್ರ ಪರಿಶೀಲಿಸುತ್ತಿತ್ತು. ಈಗ, ರಾಜ್ಯದಲ್ಲಿ ಎಲ್ಲಿಯಾದರೂ ದೌರ್ಜನ್ಯ ಪ್ರಕರಣ ದಾಖಲಾದರೆ, ಸ್ಥಳೀಯ ಪೊಲೀಸರು ಬೆಂಗಳೂರಿನಲ್ಲಿರುವ DCRE ಪ್ರಧಾನ ಕಚೇರಿ ಮತ್ತು ಆಯಾ ಜಿಲ್ಲಾ DCRE ಘಟಕ ಎರಡಕ್ಕೂ ಮಾಹಿತಿ ನೀಡುತ್ತಾರೆ. ಸ್ಥಳೀಯ ಪೊಲೀಸರೂ ಕೂಡ ಪ್ರಕರಣಗಳ ತನಿಖೆ ನಡೆಸಬಹುದು ಎಂದು ತಿಳಿಸಿದ್ದಾರೆ.

DCRE ತನಿಖೆಯನ್ನು ಪೂರ್ಣಗೊಳಿಸಬೇಕು ಮತ್ತು ವಿಶೇಷ ನ್ಯಾಯಾಲಯಕ್ಕೆ 60 ದಿನಗಳಲ್ಲಿ ಆರೋಪಪಟ್ಟಿಯನ್ನು ಸಲ್ಲಿಸಬೇಕು. ಸರ್ಕಾರಿ ಆದೇಶವು ಈ ಮೊದಲು ದಾಖಲಾಗಿರುವ ಪ್ರಕರಣಗಳಿಗೆ ಅನ್ವಯಿಸದ ಕಾರಣ ಏಪ್ರಿಲ್ 14 ರಿಂದ ದಾಖಲಾಗಿರುವ ಪ್ರಕರಣಗಳನ್ನು DCRE ಅಧಿಕಾರಿಗಳು ತನಿಖೆ ಮಾಡುತ್ತಾರೆ. ಇಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಬೇಡ್ಕರ್ ಜಯಂತಿ ಆಚರಣೆಯ ಸಂದರ್ಭದಲ್ಲಿ ವಿಧಾನಸೌಧದಲ್ಲಿ DCRE ಪೊಲೀಸ್ ಠಾಣೆಗಳನ್ನು ಪ್ರಾರಂಭಿಸುವುದಾಗಿ ಅಧಿಕೃತವಾಗಿ ಘೋಷಿಸಲಿದ್ದಾರೆಂದು ಹೇಳಿದ್ದಾರೆ.

ಡಿಸಿಆರ್‌ಇ ಪ್ರಸ್ತುತ ಸೀಮಿತ ಸಿಬ್ಬಂದಿಯನ್ನು ಹೊಂದಿದ್ದರೂ, ಮಂಜೂರಾದ ಬಲಕ್ಕೆ ಅನುಗುಣವಾಗಿ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಘಟಕವನ್ನು ಬಲಪಡಿಸುವ ನಿರೀಕ್ಷೆಯಿದೆ. ಪ್ರಕರಣಗಳ ಸಂಖ್ಯೆಯನ್ನು ಆಧರಿಸಿ, ಹೆಚ್ಚುವರಿ ಸಿಬ್ಬಂದಿಯನ್ನು ಮಂಜೂರು ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ಹಿಂದೆ ಆದೇಶ ಹೊರಡಿಸಿದ್ದ ರಾಜ್ಯಸರ್ಕಾರ, ದೌರ್ಜನ್ಯ ಪ್ರಕರಣಗಳನ್ನು ನೋಂದಾಯಿಸುವ, ತನಿಖೆ ಮಾಡುವ, ಹಸ್ತಾಂತರಿಸುವ ಅಥವಾ ವಹಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಯಾವುದೇ ಅಧಿಕಾರಿಯು ಉದ್ದೇಶಪೂರ್ವಕ ನಿರ್ಲಕ್ಷ್ಯ ವಹಿಸಿದರೆ, 1989 ರ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 4 ರ ಅಡಿಯಲ್ಲಿ ನಿಬಂಧನೆಗಳನ್ನು ಅನ್ವಯಿಸಲಾಗುತ್ತದೆ. ಆರೋಪಿಗಳನ್ನು ಬಂಧಿಸಲು, ಕಸ್ಟಡಿ ನೀಡಲು ಅಥವಾ ತನಿಖೆಯ ಯಾವುದೇ ಭಾಗದಲ್ಲಿ ಸಹಾಯ ಮಾಡಲು ಡಿಸಿಆರ್‌ಇ ಪೊಲೀಸ್ ಅಧಿಕಾರಿಗಳಿಗೆ ಅಗತ್ಯವಿರುವಾಗ ನ್ಯಾಯವ್ಯಾಪ್ತಿಯ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಆಯುಕ್ತರು ಭದ್ರತೆಯನ್ನು ಒದಗಿಸಬೇಕು ಅಥವಾ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಅಂತಹ ಪ್ರಕರಣಗಳಿಂದ ಉಂಟಾಗುವ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯು ನ್ಯಾಯವ್ಯಾಪ್ತಿಯ ಪೊಲೀಸರ ಜವಾಬ್ದಾರಿಯಾಗಿ ಉಳಿಯುತ್ತದೆ ಎಂದು ತಿಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com