
ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ ಘಟನೆಯನ್ನು ರಾಜ್ಯ ಸರ್ಕಾರ ಖಂಡಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದೆ.
ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಯಾವ ಇಲಾಖೆಯೂ ಇಂತಹ ನಿರ್ದೇಶನ ಕೊಟ್ಟಿಲ್ಲ. ಘಟನೆಗೆ ಕಾರಣರಾದವರ ವಿರುದ್ದ ಕ್ರಮ ಆಗಬೇಕು. ಪರೀಕ್ಷೆಯಿಂದ ವಂಚಿತರಾದವರಿಗೆ ಮರುಪರೀಕ್ಷೆ ಕೊಡುವ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.
ಪ್ರಕರಣದ ಕುರಿತು ನಿಖರ ಮಾಹಿತಿ ಪಡೆಯುತ್ತೇನೆ. ಜನಿವಾರ ತೆಗೆಯುವ ನಿಯಮ ಇಲ್ಲ. ಜಾತಿ ಧರ್ಮಗಳಿಗೆ ಗೌರವ ಕೊಡಬೇಕಾಗುತ್ತದೆ. ಘಟನೆಗೆ ಕಾರಣರಾದವರ ವಿರುದ್ದ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಅವರು ಪ್ರತಿಕ್ರಿಯೆ ನೀಡಿ, ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆಗಿದ್ದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆಂದು ಹೇಳಿದ್ದಾರೆ.
ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ. ಘಟನೆ ಸಂಬಂಧ ಅಧಿಕಾರಿಗಳ ಬಳಿ ವರದಿ ಪಡೆದು, ಮುಂದೆ ಏನು ಮಾಡಬಹುದು ಎಂದು ಯೋಚಿಸುತ್ತೇನೆ. ಆ ರೀತಿ ಆಗಿದ್ದು ಸತ್ಯವೇ ಆದರೆ ಇನ್ನೊಮ್ಮೆ ಪರಿಶೀಲನೆ ಮಾಡುತ್ತೇನೆ. ಆಯ್ದ ವಿಚಾರ ಎತ್ತಿಕೊಂಡು ರಾಜಕೀಯ ಲಾಭ ಮಾಡುವುದಲ್ಲ. ಯಾವುದೇ ಸಮುದಾಯವನ್ನು ನೋವಿಸುವ ಉದ್ದೇಶ ನಮ್ಮದಲ್ಲ ಎಂದು ತಿಳಿಸಿದ್ದಾರೆ.
ಪಿಯುಸಿ ಪರೀಕ್ಷೆ ಬೆನ್ನಲ್ಲೇ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿದ್ದು, ಕೊನೆಯ ದಿನವಾದ ಗುರುವಾರ ಶಿವಮೊಗ್ಗ ಮತ್ತು ಬೀದರ್ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ ವೇಳೆ ಜನಿವಾರ ತೆಗೆದುಹಾಕುವಂತೆ ಅಧಿಕಾರಿಗಳು ಸೂಚನೆ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಬೀದರ್ನ ಸಾಯಿ ಸ್ಫೂರ್ತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ಜನಿವಾರ ತೆಗೆಯಲು ಒಪ್ಪದೇ ಗಣಿತ ಪರೀಕ್ಷೆಯಿಂದ ಹೊರಗುಳಿದಿದ್ದಾನೆ. ಇದರಿಂದ ಆತನ ಎಂಜಿನಿಯರಿಂಗ್ ಭವಿಷ್ಯ ಅತಂತ್ರಗೊಂಡಿದೆ.
ಬೀದರ್ನ ವಿದ್ಯಾರ್ಥಿ ಕಳೆದ ಬುಧವಾರ ಜನಿವಾರ ಧರಿಸಿ ಬೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ ಬರೆದಿದ್ದ. ಗುರುವಾರ ಗಣಿತ ಪರೀಕ್ಷೆಗೆ ಬಂದಾಗ ಜನಿವಾರ ನೋಡಿದ ಪರೀಕ್ಷಾ ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜನರಿವಾರ ತೆಗೆಯಲ್ಲ, ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಬೇಡಿಕೊಂಡಿದ್ದಾನೆ. ಕೊನೆಗೆ ಪರೀಕ್ಷೆಯಿಂದಲೇ ಆತ ದೂರ ಉಳಿದಿದ್ದಾನೆ ಎಂದು ವರದಿಗಳು ತಿಳಿಸಿವೆ.
ಇದೇ ರೀತಿ ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕತ್ತರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ. ವಿದ್ಯಾರ್ಥಿ ಜನಿವಾರ ತೆಗೆಯಲ್ಲ ಎಂದಿದ್ದಕ್ಕೆ ಪರೀಕ್ಷಾ ಸಿಬ್ಬಂದಿ ಅದನ್ನು ಕತ್ತರಿಸಿರುವ ಆರೋಪ ಕೇಳಿಬಂದಿದೆ.
ಎರಡೂ ಪ್ರಕರಣದ ಬಗ್ಗೆ ರಾಜ್ಯ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಬೇಷರತ್ ಕ್ಷಮೆಯಾಚಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದೆ.
ಶೋಕಾಸ್ ನೋಟಿಸ್ ಜಾರಿ
ಇನ್ನು ಪ್ರಕರಣದ ಕುರಿತು ಮಾತನಾಡಿದ ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, 'ಘಟನೆಯ ಬಗ್ಗೆ ತಿಳಿದ ನಂತರ, ಕೇಂದ್ರದ ಪರೀಕ್ಷಕ ಚಂದ್ರಶೇಖರ್ ಬಿರಾದಾರ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದರು. ಅಂತೆಯೇ ಅಭ್ಯರ್ಥಿ ಸುಚಿವ್ರತ್ಗೆ ವಿಶೇಷ ಪರೀಕ್ಷೆ ನಡೆಸುವ ಅವಕಾಶವಿದೆಯೇ ಎಂದು ಕೇಳಿದಾಗ, ಕೆಆರ್ಎ ಮತ್ತು ಸರ್ಕಾರವು ಆ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಸ್ಪಷ್ಟಪಡಿಸಿದರು.
ಘಟನೆಯ ಹಿಂದಿನ ದಿನ, ಅಂದರೆ ಏಪ್ರಿಲ್ 16 ರಂದು, ಅಧಿಕಾರಿಗಳು ಸುಚಿವ್ರತ್ಗೆ ಬುಧವಾರ ಜನಿವಾರ ಧರಿಸಿ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪತ್ರಿಕೆಗಳನ್ನು ಬರೆಯಲು ಅವಕಾಶ ನೀಡಿದ್ದರು, ಆದರೆ ಗುರುವಾರ ಬೆಳಿಗ್ಗೆ ಗಣಿತ ಪತ್ರಿಕೆ ಬರೆಯಲು ಅವರು ಅವಕಾಶ ನೀಡಲಿಲ್ಲ. ಅಭ್ಯರ್ಥಿಯು ಈ ಕುರಿತು ಪೋಷಕರನ್ನು ಸಂಪರ್ಕಿಸಿದಾಗ ಅವರು ಜನಿವಾರ ತೆಗೆಯದಂತೆ ಸೂಚಿಸಿದರು. ಆದಾಗ್ಯೂ, ಗುರುವಾರ ಜನಿವಾರ ಧರಿಸಿ ಕೊನೆಯ ಪತ್ರಿಕೆ ಜೀವಶಾಸ್ತ್ರಕ್ಕೆ ಅಭ್ಯರ್ಥಿಗೆ ಅವಕಾಶ ನೀಡಲಾಯಿತು.
Advertisement