
ಬೆಂಗಳೂರು: ಜಾತಿ ಗಣತಿ ವರದಿ ರಾಜ್ಯದಲ್ಲಿ ಭಾರೀ ಚರ್ಚೆ ಹಾಗೂ ವಿರೋಧಕ್ಕೆ ಕಾರಣವಾಗಿದೆ. ಸರ್ಕಾರದ ಸಚಿವ ಸಂಪುಟದಲ್ಲೇ ವರದಿಗೆ ಇದಕ್ಕೆ ಅಪಸ್ವರ ವ್ಯಕ್ತವಾಗಿದೆ. ಸಂಪುಟದಲ್ಲಿರುವ ಒಕ್ಕಲಿಗ, ಲಿಂಗಾಯತ ನಾಯಕರು ವರದಿ ಮರುಪರಿಶೀಲಿಸಬೇಕೆಂದು ಆಗ್ರಹಿಸಿದ್ದಾರೆ. ಹೀಗಾಗಿ ವಿಪಕ್ಷಗಳು ಇದನ್ನೇ ತಮ್ಮ ಅಸ್ತ್ರವಾಗಿಸಿಕೊಂಡು ಸರ್ಕಾರದ ಕಾಲೆಳೆಯುವ ಪ್ರತ್ನ ಮಾಡುತ್ತಿದೆ. ಈ ಎಲ್ಲಾ ಬೆಳವಣಿಗೆ ನಡುವಲ್ಲೇ ವರದಿಯು ಇದೀಗ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದೆ.
ಎರಡು ಬಾರಿ ಮುಂದೂಡಲ್ಪಟ್ಟಿದ್ದ ವರದಿಯನ್ನು ಅಂತಿಮವಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಲಾಗಿದ್ದು, ವರದಿಗೆ ಸ್ವಪಕ್ಷದ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.
ಸಂಪುಟದಲ್ಲಿ ವರದಿ ಮಂಡನೆ ಮಾಡುವುದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿದ್ದು, ರಾಹುಲ್ ಗ್ರೀನ್ ಸಿಗ್ನಲ್ ಕೊಟ್ಟ ಬಳಿಕವೇ ಈ ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಹೀಗಾಗಿ ಇದೀಗ ಸಂಪುಟ ಸಭೆಯಲ್ಲಿ ನಡೆದ ಬೆಳವಣಿಗೆಗಳ ಕುರಿತು ರಾಹುಲ್ ಗಾಂಧಿಯವರಿಗೆ ಮಾಹಿತಿ ನೀಡಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಕೆಲ ಸಚಿವರು ವರದಿಗೆ ವಿರೋಧ ವ್ಯಕ್ತಪಡಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ದೂರು ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ಹೀಗಾಗಿ ಇದನ್ನು ತಡೆಯಲು ಮುಖ್ಯಮಂತ್ರಿಗಳು ಸಚಿವ ಅಭಿಪ್ರಾಯಗಳನ್ನು ಕಾಗದದ ಮೇಲೆ ಸಂಗ್ರಹಿಸಿ ಹೈಕಮಾಂಡ್'ಗೆ ಕಳುಹಿಸಲು ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ಸಚಿವರುಗಳು ಜಾತಿ ಗಣತಿಗೆ ಆಕ್ಷೇಪಿಸಿ ಸಂಪುಟದಲ್ಲಿ ಧ್ವನಿ ಎತ್ತಿದ್ದರು. ಹಿಂದುಳಿದ, ಅಲ್ಪಸಂಖ್ಯಾತ, ದಲಿತ ಸಮಾಜದಿಂದ ಬಂದಿರುವ ಸಚಿವರುಗಳು ವರದಿ ಪರ ವಹಿಸಿದ್ದರು. ತಟಸ್ಥ ನಿಲುವು ತಳೆದವರೂ ಇದ್ದರು. ಈ ಎಲ್ಲ ಅಂಶಗಳ ಬಗ್ಗೆಯೂ ಹೈಕಮಾಂಡ್ಗೆ ವಿಸ್ತೃತವಾದ ಮಾಹಿತಿ ನೀಡಲಿದ್ದಾರೆಂದು ತಿಳಿದುಬಂದಿದೆ.
ಲಿಂಗಾಯತರು ಮತ್ತು ವೀರಶೈವರಿಗೆ ಪ್ರತ್ಯೇಕ ಸ್ಥಾನಮಾನ ನೀಡುವ ಸಿದ್ದರಾಮಯ್ಯ ಅವರ ಪ್ರಸ್ತಾವನೆಯಿಂದಾಗಿ 2018 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸುವ ವಿಷಯವನ್ನು ಸಚಿವರು ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿದ್ದು, ಈ ವೇಳೆ ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು ವಿಚಾರ ಪ್ರಸ್ತಾಪಿಸಿದ್ದ ಎಂಬಿ.ಪಾಟೀಲ್ ಅವರು ಗೆಲುವು ಸಾಧಿಸಿದ್ದಾರೆಂದು ವಾದಿಸಿದರು ಎನ್ನಲಾಗಿದೆ.
ಜಾತಿ ಗಣತಿ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲೇ ಪ್ರಸ್ತಾಪಿಸಲಾಗಿದೆ. ಹಾಗಾಗಿ ನುಡಿದಂತೆ ನಡೆದುಕೊಳ್ಳಬೇಕು. ಸಾಮಾಜಿಕ ನ್ಯಾಯ ಪರಿಪಾಲನೆಗೆ ಕೊಟ್ಟಿರುವ ಈ ಭರವಸೆ ಈಡೇರಿಸದಿದ್ದರೆ ತಪ್ಪಾಗುತ್ತದೆ,’’ ಎಂದು ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಯವರು ಕಿವಿಮಾತು ಹೇಳಿದರು ಎಂದು ವರದಿಯಾಗಿದೆ.
ಸಂಪುಟ ಸಭೆಯಲ್ಲಿ ಚರ್ಚೆಯ ಬೆನ್ನಲ್ಲೇ ಸಿದ್ದರಾಮಯ್ಯ ಅವರು, ರಾಜ್ಯದ 20-30 ಕ್ಷೇತ್ರಗಳನ್ನು ಹೊರತುಪಡಿಸಿ, ಉಳಿದ ಸ್ಥಾನಗಳು ಅಹಿಂದ ಮತಗಳಿಂದ ನಿರ್ಧರಿಸಲ್ಪಡುತ್ತವೆ ಎಂಬುದನ್ನು ಸಾಬೀತುಪಡಿಸಲು ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಜಾತಿ ಜನಗಣತಿ ವರದಿ ಪಡೆಯಲು ಮುಂದಾಗಿದ್ದಾರೆಂದು ಮೂಲಗಳು ತಿಳಿಸಿವೆ.
ವರದಿ ಬಳಿಕ 2018 ರಲ್ಲಿ ಕಾಂಗ್ರೆಸ್ ಸೋಲಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನದ ವಿಷಯವೇ ಕಾರಣ ಎಂಬ ಗ್ರಹಿಕೆಯನ್ನೂ ಹೋಗಲಾಡಿಸಲು ಮುಂದಾಗಿದ್ದಾರೆಂದು ಎಂದು ಮೂಲಗಳು ತಿಳಿಸಿವೆ.
Advertisement