ಹಿಂದೂ ಧರ್ಮ ನಮ್ಮ ಆಸ್ತಿ ಎಂದವರಿಂದಲೇ ಪರಶುರಾಮನ ಕೊಲೆ; ಕರಾವಳಿಯಲ್ಲಿ ಕಾಂಗ್ರೆಸ್ ಗೆ 10 ಸ್ಥಾನ: ಡಿ.ಕೆ ಶಿವಕುಮಾರ್

ಪರಶುರಾಮನ ಪ್ರತಿಮೆ ನೋಡಿ, ಇಂತಹ ಕೊಲೆ ನೋಡಿ ಅಲ್ಲಿನ ಜನ ಅವರಿಗೆ ಮತ ಹಾಕಿದ್ದಾರಲ್ಲ ಎಂದು ಅಚ್ಚರಿಯಾಯಿತು.
DK Shivakumar seeks blessings at Dharmasthala Sri Manjunatha Swamy Temple in Dakshina Kannada
ಧರ್ಮಸ್ಥಳ ಮಂಜುನಾಥಸ್ವಾಮಿ ದರ್ಶನ ಪಡೆದ ಡಿ.ಕೆ ಶಿವಕುಮಾರ್
Updated on

ಬೆಳ್ತಂಗಡಿ: ಜನರ ಆತ್ಮಸಾಕ್ಷಿ ಮತಗಳಿಂದ 2028ರ ಚುನಾವಣೆಯಲ್ಲಿ ದ.ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ 10 ಕ್ಷೇತ್ರಗಳನ್ನು ಗೆಲ್ಲಲಿದೆ. ಆ ಮೂಲಕ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ" ಎಂದು ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ವರ್ಷವನ್ನು ಸಂಘಟನೆ ವರ್ಷವೆಂದು ಘೋಷಣೆ ಮಾಡಿದ್ದಾರೆ. ಜೈ ಬಾಪು, ಜೈ ಭೀಮ್ ಹಾಗೂ ಜೈ ಸಂವಿಧಾನ ಸಮಾವೇಶ ಮಾಡಿ, ಗಾಂಧೀಜಿ, ಅಂಬೇಡ್ಕರ್ ತತ್ವ ಸಿದ್ಧಾಂತ ಹಾಗೂ ಸಂವಿಧಾನ ರಕ್ಷಣೆಗೆ ಕರೆ ನೀಡಿದ್ದಾರೆ. ಇವುಗಳನ್ನು ನಾವು ಉಳಿಸಿ, ಬೆಳೆಸಿಕೊಂಡು ಹೋಗಬೇಕು ಎಂದರು.

ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಸುವ ಸಲುವಾಗಿ ಅಗತ್ಯ ರೂಪುರೇಷೆ ರೂಪಿಸಲು ನಾನು ಹಾಗೂ ಹೆಚ್.ಕೆ ಪಾಟೀಲ್ ಅವರು ಸಭೆ ಮಾಡಲಿದ್ದೇವೆ. ಬಸವಣ್ಣ, ಪೈಗಂಬರ್ ಸೇರಿದಂತೆ ಹಿಂದೂಗಳು, ಕ್ರೈಸ್ತರು, ಜೈನರು ಸೇರಿದಂತೆ ಎಲ್ಲರ ರಕ್ಷಣೆ ಮಾಡುತ್ತೇವೆ" ಎಂದು ತಿಳಿಸಿದರು.

ಕಾರ್ಕಳದಲ್ಲಿ ಹಿಂದೂ ಧರ್ಮದ ಹೆಸರಿನಲ್ಲಿ ಜನರ ಮತ ಪಡೆಯುತ್ತಿದ್ದಾರೆ. ಆದರೆ ಅವರಿಂದಲೇ ಅಲ್ಲಿ ಪರಶುರಾಮನ ಕೊಲೆಯಾಗಿದೆ. ಪರಶುರಾಮನ ಪ್ರತಿಮೆ ನೋಡಿ, ಇಂತಹ ಕೊಲೆ ನೋಡಿ ಅಲ್ಲಿನ ಜನ ಅವರಿಗೆ ಮತ ಹಾಕಿದ್ದಾರಲ್ಲ ಎಂದು ಅಚ್ಚರಿಯಾಯಿತು. ಆ ಪ್ರತಿಮೆಯನ್ನು ಅವರು ಹಾಗೆಯೇ ಇಟ್ಟುಕೊಂಡಿರಲಿ. ಅದು ಅವರ ಸಾಕ್ಷಿಗುಡ್ಡೆ ಎಂದು ಹರಿಹಾಯ್ದರು.

ಕೇಂದ್ರ ಬಿಜೆಪಿ ನಾಯಕರು ಸಂಸತ್ತಿನಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದರು. ಎಲ್ಲಾ ಧರ್ಮಗಳನ್ನು ಒಟ್ಟಾಗಿ ಸೇರಿಸಿಕೊಂಡು ಕೆಲಸ ಮಾಡುವುದೇ ಕಾಂಗ್ರೆಸ್ ಸಿದ್ಧಾಂತ. ಇಂದು ಕ್ರೈಸ್ತ ಬಾಂಧವರ ಈಸ್ಟರ್ ಹಬ್ಬ. ಈ ಸಂದರ್ಭದಲ್ಲಿ ಅವರಿಗೆ ಶುಭ ಕೋರುತ್ತೇನೆ. ಸಮರ್ಪಣೆ, ಸಂಕಲ್ಪ, ಸಂಘರ್ಷ ಈ ಮೂರು ಅಂಶಗಳನ್ನು ಕಾಂಗ್ರೆಸ್ ಪಕ್ಷ ನಿಮ್ಮ ಮುಂದೆ ಇಟ್ಟಿದೆ.

DK Shivakumar seeks blessings at Dharmasthala Sri Manjunatha Swamy Temple in Dakshina Kannada
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಗಾಂಧಿ ಕುಟುಂಬಕ್ಕೆ ಯಾವುದೇ ರೀತಿಯಲ್ಲೂ ಲಾಭವಾಗಿಲ್ಲ- ಡಿ.ಕೆ ಶಿವಕುಮಾರ್

ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಈ ಜವಾಬ್ದಾರಿ ತೆಗೆದುಕೊಳ್ಳುತ್ತಿದ್ದು, ಎಲ್ಲರಿಗೂ ಅಭಿನಂದಿಸುತ್ತೇನೆ. ಇಲ್ಲಿ ಪ್ರತಿ ಬೂತ್ ನಲ್ಲಿ ಇಬ್ಬರು ಡಿಜಿಟಲ್ ಯೂಥ್ ನೇಮಕ ಮಾಡಲಾಗಿದೆ. ನಿಮ್ಮೆಲ್ಲರಿಗೂ ಅಭಿನಂದನೆಗಳು ಎಂದರು.

ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗಗಳು ಅಧಿಕಾರಕ್ಕೆ ಬಂದಂತೆ. ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುದಾಗ ಬಿಜೆಪಿ ನಾಯಕರು ಇದು ಸಾಧ್ಯವೇ ಎಂದು ಪ್ರಶ್ನಿಸಿದರು. ನಾನು ಹಾಗೂ ಸಿದ್ದರಾಮಯ್ಯ ಅವರು ಪ್ರಿಯಾಂಕ ಗಾಂಧಿ ಅವರ ಸಮ್ಮುಖದಲ್ಲಿ ಗ್ಯಾರಂಟಿ ಚೆಕ್ ಗೆ ಸಹಿ ಹಾಕಿದೆವು. ನಮ್ಮ ಸರ್ಕಾರ ಬಂದ ನಂತರ 1.21 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪಿದೆ. 200 ಯೂನಿಟ್ ವರೆಗೂ ಉಚಿತ ವಿದ್ಯುತ್, 10 ಕೆ.ಜಿ ಅಕ್ಕಿ, ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ಸಿಗುತ್ತಿದೆ" ಎಂದು ಹೇಳಿದರು.

ಬಿಜೆಪಿಯವರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಬಿಜೆಪಿಯವರು ನಮಗೆ ನೆರವಾಗಲಿಲ್ಲ, ಕಾಂಗ್ರೆಸ್ ಸರ್ಕಾರ ನೆರವಾಗಿದೆ ಎಂದು ಬಿಜೆಪಿಗೆ ಮತ ಹಾಕಿದ ಮಹಿಳೆಯರು ಭಾವಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿಯಲ್ಲಿ ನಾನು ಸಮೀಕ್ಷೆ ಮಾಡಿಸಿದ್ದು, ಮುಂದಿನ ಚುನಾವಣೆಯಲ್ಲಿ ಈ ಜಿಲ್ಲೆಗಳಿಂದ ಕನಿಷ್ಠ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದರು.

ಬೆಳ್ತಂಗಡಿ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಸಮೀಕ್ಷೆ ವರದಿ ಹೇಳುತ್ತಿದೆ. ಹೀಗಾಗಿ ನೀವು ಈಗಿನಿಂದಲೇ ಜನರ ಹೃದಯ ಗೆಲ್ಲಬೇಕು. ಬಿಜೆಪಿಗೆ ಮತ ಹಾಕಬೇಕು ಎಂದು ಯಾರೂ ಹಠ ಮಾಡಿ ಕೂತಿಲ್ಲ. ಎಲ್ಲರೂ ಪರಿವರ್ತನೆ ಆಗುತ್ತಾರೆ. ಕಳೆದ ವರ್ಷ ನಡೆದ ಉಪಚುನಾವಣೆಯಲ್ಲಿ ಚನ್ನಪಟ್ಟಣ ಹಾಗೂ ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿದರು. ಬಿಜೆಪಿ ಹಾಗೂ ದಳದ ಭದ್ರಕೋಟೆ ಒಡೆದು 136 ಇದ್ದ ನಮ್ಮ ಸಂಖ್ಯಾಬಲ 138 ಆಗಿದೆ. ಇಬ್ಬರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ ನಮ್ಮ ಬಲ 140 ಆಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆ ತೆಗೆಯಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಅಸಾಧ್ಯ. ಸಿದ್ದರಾಮಯ್ಯ ಅವರ ನೇತೃತ್ವದ ನಿಮ್ಮ ಸರ್ಕಾರ ಈ ಯೋಜನೆಗಳಿಗೆ 52 ಸಾವಿರ ಕೋಟಿ ಬಜೆಟ್ ನಲ್ಲಿ ಘೋಷಿಸಿದೆ. ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿಗಳು ಸೇರಿ ಕೈ ಗಟ್ಟಿಯಾಯಿತು. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ನಾವು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದೇವೆ" ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com