
ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಸಿಸಿಬಿಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಡಿಸಿದ್ದಾರೆ.
ಪ್ರಕರಣದ ತನಿಖೆ ನಡೆಸುವಂತೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಎಸಿಪಿಗೆ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
ಓಂ ಪ್ರಕಾಶ್ ಕೊಲೆ ಹಿಂದೆ ಹಲವು ಕಾರಣಗಳು ಕೇಳಿಬರುತ್ತಿವೆ. ಅವರ ಪತ್ನಿ ಪಲ್ಲವಿ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರಿಂದ ಭ್ರಮೆಯಲ್ಲಿ ಪತಿಯನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಇನ್ನು ಆಸ್ತಿ ಕಲಹದಿಂದ ಓಂ ಪ್ರಕಾಶ್ ಅವರು ಕೊಲೆಯಾದಾರಾ ಎಂಬ ಅನುಮಾನವೂ ವ್ಯಕ್ತವಾಗಿದೆ. ಹತ್ಯೆಗೆ ನಿಖರ ಕಾರಣ ಹಾಗೂ ಆಳವಾದ ತನಿಖೆ ನಡೆಸಲು ಪ್ರಕರಣವನ್ನ ಸಿಸಿಬಿಗೆ ವರ್ಗಾಯಿಸಲಾಗಿದೆ.
68 ವರ್ಷದ ನಿವೃತ್ತ ಐಪಿಎಸ್ ಅಧಿಕಾರಿಯನ್ನು ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.
Advertisement