News headlines 21-04-2025 | ಮಾಜಿ ಡಿಜಿಪಿ ಓಂ ಪ್ರಕಾಶ್ ಬರ್ಬರ ಕೊಲೆ: ಪತ್ನಿ, ಪುತ್ರಿ ಬಂಧನ; ಮಾಂಸದ ಮಾರುಕಟ್ಟೆಯಾದ ಕೃಷ್ಣದೇವರಾಯನ ಸಮಾಧಿ: ಯತ್ನಾಳ್ ಆಕ್ರೋಶ; ಬೆಂಗಳೂರಿನಲ್ಲಿ ವಿಂಗ್ ಕಮಾಂಡ್ ಮೇಲೆ ಬೈಕ್ ಸವಾರರಿಂದ ಹಲ್ಲೆ?

News headlines 21-04-2025 | ಮಾಜಿ ಡಿಜಿಪಿ ಓಂ ಪ್ರಕಾಶ್ ಬರ್ಬರ ಕೊಲೆ: ಪತ್ನಿ, ಪುತ್ರಿ ಬಂಧನ; ಮಾಂಸದ ಮಾರುಕಟ್ಟೆಯಾದ ಕೃಷ್ಣದೇವರಾಯನ ಸಮಾಧಿ: ಯತ್ನಾಳ್ ಆಕ್ರೋಶ; ಬೆಂಗಳೂರಿನಲ್ಲಿ ವಿಂಗ್ ಕಮಾಂಡ್ ಮೇಲೆ ಬೈಕ್ ಸವಾರರಿಂದ ಹಲ್ಲೆ?

1. ಮಾಜಿ ಡಿಜಿಪಿ ಓಂ ಪ್ರಕಾಶ್ ಬರ್ಬರ ಕೊಲೆ; ಪತ್ನಿ, ಪುತ್ರಿ ಬಂಧನ

ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮತ್ತು ಪುತ್ರಿಯ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಓಂ ಪ್ರಕಾಶ್‌ ಅವರ ಪುತ್ರ ಕಾರ್ತಿಕೇಶ್‌ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ, ಸಹೋದರಿ ಕೃತಿ ವಿರುದ್ಧ ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 103(ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ ದಾಖಲಾದ ಬೆನ್ನಲ್ಲೇ ಪತ್ನಿ ಪಲ್ಲವಿ ಮತ್ತು ಕೃತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ವಾರದಿಂದ ತಾಯಿ ಪಲ್ಲವಿಯನ್ನು ತಂದೆಯನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ದೂರಿನಲ್ಲಿ ಓಂ ಪ್ರಕಾಶ್ ಪುತ್ರ ತಿಳಿಸಿದ್ದಾರೆ. ಈಮಧ್ಯೆ, ಪೊಲೀಸ್ ಗೌರವಗಳೊಂದಿಗೆ ನಿವೃತ್ತ ಪೊಲೀಸ್ ಮಹಾನಿರ್ದೆಶಕ ಓಂ ಪ್ರಕಾಶ್ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ನಡೆಯಿತು.

2. BJP ಶಾಸಕರ ಅಮಾನತು ಹಿಂಪಡೆಯಲು ಮತ್ತೆ UT Khader ಗೆ Ashok ನೇತೃತ್ವದ ತಂಡ ಮನವಿ

ವಿಧಾನಸಭೆಯಿಂದ 18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಬಿಜೆಪಿ ಶಾಸಕರ ನಿಯೋಗ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಮತ್ತೊಮ್ಮೆ ಮನವಿ ಮಾಡಿದೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ ಶಾಸಕರ ನಿಯೋಗ ಇಂದು ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ವಿಧಾನಸಭಾಧ್ಯಕ್ಷರ ಕಚೇರಿಗೆ ತೆರಳಿ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿ ಅಮಾನತು ವಾಪಸ್ ಪಡೆಯುವಂತೆ ಮನವಿ ಮಾಡಿತು. ಬಿಜೆಪಿ ಶಾಸಕರನ್ನು ಅಮಾನತ್ತು ಮಾಡಿ ಒಂದು ತಿಂಗಳಾಗಿದೆ. ಬಿಜೆಪಿ ಶಾಸಕರ್ಯಾರು ವಿಧಾನಸಭೆಯ ಸಮಿತಿಗಳ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಹಾಗಾಗಿ ಕೂಡಲೇ ಇವರುಗಳ ಅಮಾನತು ಆದೇಶವನ್ನು ವಾಪಸ್ ಪಡೆಯಿರಿ ಎಂದು ಸಭಾಧ್ಯಕ್ಷರಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಮನವಿ ಮಾಡಿದರು. ನಮ್ಮ ಮನವಿಗೆ ಖಾದರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸರ್ಕಾರದ ಜತೆ ಚರ್ಚೆ ಮಾಡಿ ಈ ಬಗ್ಗೆ ತೀರ್ಮಾನ ಮಾಡುವುದಾಗಿಯೂ ಹೇಳಿದ್ದಾರೆ ಎಂದು ವಿಪಕ್ಷ ನಾಯಕ ಅಶೋಕ್ ಹೇಳಿದ್ದಾರೆ.

3. ಮಾಂಸದ ಮಾರುಕಟ್ಟೆಯಾದ ಕೃಷ್ಣದೇವರಾಯನ ಸಮಾಧಿ: ಯತ್ನಾಳ್ ಆಕ್ರೋಶ

ವಿಜಯನಗರದ ಅರಸ ಕೃಷ್ಣದೇವರಾಯ ಸಮಾಧಿ ಜಾಗವನ್ನು ಮಾಂಸದ ಮಾರುಕಟ್ಟೆಯಾಗಿ ಪರಿವರ್ತಿಸಲಾಗಿರುವುದಕ್ಕೆ ಆಕ್ರೋಶ ಭುಗಿಲೆದ್ದಿದೆ. ಈ ಘಟನೆಯನ್ನು ಬೆಳಕಿಗೆ ತಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕನ್ನಡ ನಾಡಿನ ಹೆಮ್ಮೆಯ ಅರಸರಾದ ಕೃಷ್ಣದೇವರಾಯರಿಗೆ ಮಾಡಿದ ಅವಮಾನ ಎಂದು ಅಸಮಾಧಾನ ಹೊರಹಾಕಿದ್ದಾರೆ. ಸಾವಿರಾರು ಹಿಂದೂಗಳನ್ನು ಅಮಾನವೀಯಗಿ ಕೊಂದ ಔರಂಗಜೇಬನ ಸಮಾಧಿಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ ತೆರಿಗೆದಾರರ ಹಣದಿಂದ ಸಂರಕ್ಷಣೆ ಮಾಡುತ್ತಿದೆ. ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ, ಕಲೆ,ಸಾಹಿತ್ಯ ರಂಗಗಳ ಪೋಷಕ ಶ್ರೀ ಕೃಷ್ಣದೇವರಾಯರ ಸಮಾಧಿಗೆ ಏಕೆ ಈ ರೀತಿಯಾದ ದಿವ್ಯ ನಿರ್ಲಕ್ಷ್ಯ? ಎಂದು ಪ್ರಶ್ನಿಸಿದ್ದಾರೆ. ಇದು ಕನ್ನಡಿಗರಿಗಷ್ಟೇ ಅಲ್ಲ ರಾಷ್ಟ್ರಕ್ಕೆ ಮಾಡಿದ ಅವಮಾನ, ಮಾಂಸವನ್ನು ಮಾರುತ್ತ ಸ್ಥಳದ ಪಾವಿತ್ರ್ಯತೆಯನ್ನು ಹಾಳು ಮಾಡುತ್ತಿರುವ ಇಂತವರನ್ನು ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಲು ಸೂಚಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಲಿ ಎಂದು ಆಗ್ರಹಿಸಿದ್ದಾರೆ.

4. ಬೆಂಗಳೂರಿನಲ್ಲಿ ವಿಂಗ್ ಕಮಾಂಡ್ ಮೇಲೆ ದ್ವಿಚಕ್ರವಾಹನ ಸವಾರರಿಂದ ಹಲ್ಲೆ?

ಕಾರು ಅಡ್ಡಗಟ್ಟಿ ವಿಂಗ್‌ ಕಮಾಂಡರ್‌ ಮೇಲೆ ಬೈಕ್‌ ಸವಾರರು ಹಲ್ಲೆ ಮಾಡಿದ ಘಟನೆ ಸಿವಿ ರಾಮನ್‌ ನಗರದಲ್ಲಿ ನಡೆದಿದೆ. ವಿಂಗ್‌ ಕಮಾಂಡರ್‌ ಶಿಲಾದಿತ್ಯ ಬೋಸ್‌ ಕೋಲ್ಕತ್ತಾಗೆ ಹೋಗಲೆಂದು ಸೋಮವಾರ ಏರ್‌ಪೋರ್ಟ್‌ಗೆ ಹೋಗುತ್ತಿದ್ದು, ಅವರ ಪತ್ನಿ ಕಾರು ಚಲಾಯಿಸುತ್ತಿದ್ದರು. ಈ ವೇಳೆ ಹಿಂಬಂದಿಯಿಂದ ಬಂದ ಬೈಕ್‌ ಟಚ್‌ ಆಗಿದೆ. ಬೈಕ್‌ ಸವಾರರು ಕಾರನ್ನು ತಡೆದು, ಕಾರಿನ ಕೀ ತಗೊಂಡು ವಿಂಗ್‌ ಕಮಾಂಡರ್‌ ಮೇಲೆ ಹಲ್ಲೆ ಮಾಡಿದ್ದಾರೆ. ಈ ಕುರಿತು ಬೈಯಪ್ಪನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

5. 2025–26ನೇ ಸಾಲಿನ ಪ್ರವೇಶ ಶುಲ್ಕ, ಕೋಟಾ ವಿವರ ಘೋಷಿಸಿ: ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

2025-26ನೇ ಶೈಕ್ಷಣಿಕ ವರ್ಷಕ್ಕೆ ರಾಜ್ಯದ ಎಲ್ಲಾ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಶುಲ್ಕ, ಕೋಟಾ ವಿವರಗಳನ್ನು ಘೋಷಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಎಲ್ಲಾ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ಪ್ರವೇಶ ಪ್ರಕ್ರಿಯೆಯ ಕುರಿತು ಅಧಿಸೂಚನೆಯನ್ನು ಹೊರಡಿಸಬೇಕಾಗುತ್ತದೆ. ಘೋಷಿತ ಮೊತ್ತವನ್ನು ಮೀರಿದ ಯಾವುದೇ ಶುಲ್ಕವನ್ನು ಸಂಗ್ರಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಪೋಷಕರು ಮತ್ತು ಸಾರ್ವಜನಿಕರಿಂದ ಬರುವ ದೂರುಗಳನ್ನು ತ್ವರಿತವಾಗಿ ಪರಿಶೀಲಿಸಿ ಪರಿಹರಿಸಬೇಕು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com