
ಬೆಂಗಳೂರು: ಇಂಧನ ಇಲಾಖೆಯಿಂದ ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ನಡೆದಿದೆ ಎನ್ನಲಾದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ಬಿಜೆಪಿ ದೂರು ನೀಡಿದೆ.
ಶಾಸಕರಾದ ಅಶ್ವತ್ಥ್ ನಾರಾಯಣ್, ಎಸ್.ಆರ್.ವಿಶ್ವನಾಥ್, ಧೀರಜ್ ಮುನಿರಾಜು ನೇತೃತ್ವದ ನಿಯೋಗದಿಂದ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ, ದೂರು ಸಲ್ಲಿಸಿದ್ದಾರೆ.
ದೂರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥ್ ನಾರಾಯಣ್ ಅವರು, ಭ್ರಷ್ಟಾಚಾರದ ಕುರಿತು ಲೋಕಾಯುಕ್ತರಿಗೂ ಸವಿಸ್ತಾರವಾಗಿ ತಿಳಿಸಿದ್ದೇವೆ. ನೇರವಾಗಿ ಲೋಕಾಯುಕ್ತ ಎಸ್ಪಿಗೆ ದೂರು ನೀಡಿದ್ದೇವೆ. ಕ್ರಮ ವಹಿಸಿ ತಾರ್ಕಿಕ ಅಂತ್ಯ ಕೊಡಬೇಕೆಂದು ಮನವಿ ಮಾಡಲಾಗಿದೆ. ಈ ದೂರಿನೊಂದಿಗೆ ಯುದ್ಧ ಪ್ರಾರಂಭವಾಗಿದೆ ಎಂದು ಹೇಳಿದರು.
ಸಚಿವ ಕೆ.ಜೆ.ಜಾರ್ಜ್ ಅವರು 9 ಸುಳ್ಳು ಹೇಳಿದ್ದಾರೆ. ಇದನ್ನು ಪತ್ರಿಕಾಗೋಷ್ಠಿಯಲ್ಲೂ ತಿಳಿಸಿದ್ದೇವೆ. ಬೇನಾಮಿ, ದುರ್ಬಳಕೆ ನಡೆದಿರುವುದು, ಗ್ರಾಹಕರಿಗೆ ಕಡ್ಡಾಯ ಮಾಡಲು ಅವಕಾಶ ಇಲ್ಲದಿದ್ದರೂ ಮಾಡುತ್ತಿದ್ದಾರೆ.
ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಬೆಸ್ಕಾಂ ಎಂ.ಡಿ. ಮಹಂತೇಶ್, ತಾಂತ್ರಿಕ ನಿರ್ದೇಶಕರಾದ ರಮೇಶ್, ಬಾಲಾಜಿ ಮತ್ತಿತರರ ವಿರುದ್ಧ ದೂರು ಕೊಟ್ಟಿದ್ದೇವೆ. ಅಧಿಕಾರ ದುರ್ಬಳಕೆ ಮಾಡಿ ರಾಜಶ್ರೀ ಎಂಬ ಪ್ಲಂಬರ್ ತಯಾರಿಕೆ ಮಾಡುವ ವ್ಯಕ್ತಿಗೆ ಗುತ್ತಿಗೆ ಕೊಡಲು ಎಲ್ಲ ಕಾನೂನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.
ಸ್ಮಾರ್ಟ್ ಮೀಟರನ್ನು ಗ್ರಾಹಕರಿಗೆ ಕಡ್ಡಾಯ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಆದರೂ ಕಡ್ಡಾಯ ಮಾಡಿದ್ದಾರೆ. ಇದಿಷ್ಟೇ ಅಲ್ಲ; ಬ್ಲ್ಯಾಕ್ ಲಿಸ್ಟ್ ಆದ ಕಂಪನಿ ಜೊತೆ ಒಡಂಬಡಿಕೆ ಮಾಡಿಕೊಂಡಿದ್ದಾರೆ ಎಂದು ದೂರಿದರು.
Advertisement