
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಮೂವರು ನಿವಾಸಿಗಳು ಸಾವಿಗೀಡಾಗಿದ್ದಾರೆ. ನಾಗರಿಕ ವಿಮಾನಯಾನ ಸಚಿವರೊಂದಿಗೆ ಚರ್ಚಿಸಿದ ನಂತರ ಕರ್ನಾಟಕಕ್ಕೆ ಹೆಚ್ಚುವರಿ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬುಧವಾರ ಹೇಳಿದ್ದಾರೆ.
'ನಿನ್ನೆ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕರ್ನಾಟಕದ ಮೂವರು ಸಾವಿಗೀಡಾಗಿದ್ದಾರೆ. ನಿನ್ನೆ ನಾನು ನಾಗರಿಕ ವಿಮಾನಯಾನ ಸಚಿವರೊಂದಿಗೆ ಮಾತನಾಡಿದ್ದೇನೆ ಮತ್ತು ಕರ್ನಾಟಕಕ್ಕೆ ಹೆಚ್ಚುವರಿ ವಿಮಾನವನ್ನು ಒದಗಿಸಲಾಗಿದೆ. ಇದು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮಕ್ಕೆ ಹಾನಿ ಮಾಡುವ ಭಯೋತ್ಪಾದಕ ದಾಳಿಯಾಗಿದ್ದು, ಅಗತ್ಯವಿರುವ ಯಾವುದೇ ಮುನ್ನೆಚ್ಚರಿಕೆಗಳನ್ನು ಸರ್ಕಾರ ತೆಗೆದುಕೊಳ್ಳುತ್ತದೆ' ಎಂದು ಹೇಳಿದರು.
ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ ಪಟ್ಟಣದಿಂದ ಐದು ಕಿಲೋಮೀಟರ್ ದೂರದಲ್ಲಿರುವ ಬೈಸರನ್ ಕಣಿವೆಯಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 26 ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದು, ಮೂರು ಡಜನ್ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಉದ್ದವಾದ, ಹಚ್ಚ ಹಸಿರಿನ ಹುಲ್ಲುಗಾವಲಿನಿಂದಾಗಿ ಬೈಸರನ್ ಕಣಿವೆಯನ್ನು 'ಮಿನಿ ಸ್ವಿಟ್ಜರ್ಲೆಂಡ್' ಎಂದು ಕರೆಯಾಗುತ್ತದೆ.
ಕಳೆದ ಇಪ್ಪತ್ತು ವರ್ಷಗಳಲ್ಲಿ ಈ ಪ್ರದೇಶದಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಭೀಕರ ದಾಳಿ ಎನ್ನಲಾಗಿರುವ ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಸ್ಥಳಕ್ಕೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡವು ಬುಧವಾರ ಮುಂಜಾನೆ ಭೇಟಿ ನೀಡಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ತನಿಖೆ ನಡೆಸುತ್ತಿದೆ.
Advertisement