
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಸೂರು ಪ್ರಾದೇಶಿಕ ವಿಭಾಗದಲ್ಲಿ 3,647 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.
ಇಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ನಾಲ್ಕು ಪ್ರದೇಶಗಳಲ್ಲಿ ಸಚಿವ ಸಂಪುಟ ಸಭೆಗಳನ್ನು ನಡೆಸಲು ಸಂಪುಟ ಸಭೆ ನಿರ್ಧರಿಸಿದೆ ಎಂದು ಹೇಳಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಸಂಪುಟ ಸಭೆ ಖಂಡಿಸಿದೆ ಮತ್ತು ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದೆ ಎಂದು ಸಿಎಂ ತಿಳಿಸಿದರು.
ಸಭೆಯಲ್ಲಿ 78 ವಿಷಯಗಳ ಕುರಿತು ಚರ್ಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
"ಇಂದು, ನಾನು ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಿದ್ದೆ. ಕರ್ನಾಟಕದ ನಾಲ್ಕು ಪ್ರದೇಶಗಳಲ್ಲಿ ಸಚಿವ ಸಂಪುಟ ಸಭೆಗಳನ್ನು ನಡೆಸಲು ನಾವು ನಿರ್ಧರಿಸಿದ್ದೇವೆ. ಇದಕ್ಕೂ ಮೊದಲು, ಕಲಬುರಗಿ ಪ್ರದೇಶದಲ್ಲಿ ಸಭೆ ನಡೆದಿತ್ತು; ಇಂದು, ಮೈಸೂರು ಪ್ರದೇಶದಲ್ಲಿ ನಡೆದಿದ್ದು, ಮುಂಬರುವ ಸಭೆಗಳು ಬೆಳಗಾವಿ ಮತ್ತು ಬಿಜಾಪುರದಲ್ಲಿ ಹಾಗೂ ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಮತ್ತು ಆಯಾ ಪ್ರದೇಶಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.
ಇಂದು ನಡೆದ ಸಭೆಯಲ್ಲಿ 1,787 ಕೋಟಿ ರೂ.ಗಳ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಆರೋಗ್ಯ ಕ್ಷೇತ್ರದ ಸುಧಾರಣೆಗೆ 228 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು, ಕೊಳ್ಳೇಗಾಲದಲ್ಲಿರುವ ಸರ್ಕಾರಿ ಜಿಲ್ಲಾ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸಲು 475 ಕೋಟಿ ವೆಚ್ಚಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಅಷ್ಟೇ ಅಲ್ಲದೆ ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ ಹಾಗೂ ಮೈಸೂರು ತಾಲ್ಲೂಕಿನ ಇಲವಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲು ಜಾಗ ಒದಗಿಸಲು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
"ಪ್ರವಾಸೋದ್ಯಮಕ್ಕೆ 300 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಹನೂರಿನಲ್ಲಿ ತಾಲೂಕು ಕಟ್ಟಡ ಮತ್ತು 50 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಿಸಲಾಗುವುದು. ಚಾಮರಾಜನಗರ ಜಿಲ್ಲೆಯ ಚಿಕ್ಕಲೂರು, ಕೊಳ್ಳೇಗಾಲದಲ್ಲಿ, ಮಾಂಟೇಶ್ವರಿ, ರಾಚಪ್ಪಾಜಿ ಮತ್ತು ಸಿದ್ದಪ್ಪಾಜಿ ಪ್ರಾಧಿಕಾರಗಳ ಸ್ಥಾಪನೆಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೈಸೂರಿನ ಇಲವಾಲದಲ್ಲಿ ಕ್ರಿಕೆಟ್ ಕ್ರೀಡಾಂಗಣಕ್ಕಾಗಿ ಸ್ಥಳ ಹಂಚಿಕೆ ಮಾಡಲಾಗುವುದು" ಎಂದು ಸಿಎಂ ಹೇಳಿದರು.
Advertisement