ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯನ್ನು ವಿಸ್ತರಿಸುವುದು ಹಾಗೂ ಬೆಂಗಳೂರಿಗೆ ಸಂಬಂಧಿಸಿದಂತೆ ಗರಿಷ್ಠ ಏಳು ನಗರ ಪಾಲಿಕೆಗಳನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿರುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಸೇರಿ ಹಲವು ಮಸೂದೆಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ನೀಡಿದ್ದಾರೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ ಅನುಮೋದನೆ ಸಿಕ್ಕಿರುವುದರಿಂದ ಬಿಬಿಎಂಪಿ ಚುನಾವಣೆಗಳು ಮತ್ತೆ ವಿಳಂಬವಾಗುವ ಸಾಧ್ಯತೆ ಇದೆ. ಅಲ್ಲದೆ, ಮಂಡ್ಯ ತಾಲೂಕಿನ ವಿ.ಸಿ ಫಾರ್ಮ್ ನಲ್ಲಿ ನೂತನ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದಾರೆ. ಕಳೆದ ಮಾರ್ಚ್ ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸುವ ಕುರಿತು ಉಭಯ ಸದನಗಳಲ್ಲಿ ವಿಧೇಯಕವನ್ನು ಅಂಗೀಕರಿಸಿ ರಾಜ್ಯಪಾಲರ ಸಹಮತಿಗೆ ಕಳುಹಿಸಲಾಗಿತ್ತು.
ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತಕ್ಕ ಶಿಕ್ಷೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ರಾಜ್ಯಗಳಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರು ಪಾಕಿಸ್ತಾನಕ್ಕೆ ಶೀಘ್ರ ಮರಳುವಂತೆ ಸೂಚನೆ ನೀಡಿದೆ. ಈ ಬಗ್ಗೆ ಎಲ್ಲಾ ಮುಖ್ಯಮಂತ್ರಿಗಳಿಗೆ ಗೃಹ ಸಚಿವ ಅಮಿತ್ ಶಾ ಸಂದೇಶ ರವಾನಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, 'ಇಲ್ಲಿ ಅಕ್ರಮವಾಗಿ ನೆಲೆಸಿರುವವರ ಮೇಲೆ ನಿಗಾ ಇಡಬೇಕು, ಅಕ್ರಮ ನಿವಾಸಿಗಳನ್ನು ಗುರುತಿಸಿ ಗಡೀಪಾರು ಮಾಡಬೇಕು ಎಂದು ಹೇಳಿದ್ದಾರೆ. ಯಾವುದೇ ಸ್ಲೀಪರ್ ಸೆಲ್ಗಳನ್ನು (ಗುಪ್ತ ಭಯೋತ್ಪಾದಕ ಗುಂಪುಗಳು) ಪತ್ತೆಹಚ್ಚಿದರೆ, ರಾಷ್ಟ್ರೀಯ ಭದ್ರತೆಯನ್ನು ಖಾತರಿಪಡಿಸುವ ಸಲುವಾಗಿ ನಾವು ಆ ಮಾಹಿತಿಯನ್ನು ಕೇಂದ್ರ ಸರ್ಕಾರದೊಂದಿಗೆ ತಕ್ಷಣವೇ ಹಂಚಿಕೊಳ್ಳುತ್ತೇವೆ' ಎಂದು ಹೇಳಿದ್ದಾರೆ.
ಪಹಲ್ಗಾಮ್ನಲ್ಲಿ ಮುಸ್ಲಿಮರೇ ಬಹಳಷ್ಟು ಜನರನ್ನು ಕಾಪಾಡಿದ್ದಾರೆ. ಧರ್ಮದ ಹೆಸರು ಕೇಳಿ ಯಾರನ್ನೂ ಅಲ್ಲಿ ಕೊಂದಿಲ್ಲ. ಸುಮ್ಮನೆ ಮುಸ್ಲಿಮರು, ಮುಸ್ಲಿಮರು ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಘಟನೆ ನಡೆದ ದಿನ ಅಲ್ಲಿ ಸೇನೆ ಮತ್ತು ಪೊಲೀಸ್ ಯಾಕೆ ಇರಲಿಲ್ಲ. ಇದರ ಹಿಂದೆ ಬೇರೆ ಏನೋ ಉದ್ದೇಶವಿದೆ. ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ ಶುರುವಾಗಿದೆ, ಈ ರೀತಿ ಮಾಡಿ ಜನರನ್ನು ಮೂರ್ಖರನ್ನಾಗಿಸುವುದು ಬಿಜೆಪಿಯವರ ಕೆಲಸ ಎಂದು ಲಕ್ಷ್ಮಣ್ ಆರೋಪಿಸಿದ್ದಾರೆ.
ಇಸ್ರೋದ ಮಾಜಿ ಅಧ್ಯಕ್ಷ, ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ ಕಸ್ತೂರಿರಂಗನ್ ಇಂದು ಬೆಂಗಳೂರಿನಲ್ಲಿ ನಿಧನರಾದರು. ಕಸ್ತೂರಿ ರಂಗನ್ ಅವರಿಗೆ 84 ವರ್ಷ ವಯಸ್ಸಾಗಿತ್ತು. ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (RRI) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು' ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಸ್ತೂರಿರಂಗನ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಬಾಹ್ಯಾಕಾಶ ಕ್ಷೇತ್ರದಲ್ಲಿನ ಅತ್ಯುತ್ತಮ ಕೊಡುಗೆಗಳಿಗಾಗಿ ಕಸ್ತೂರಿರಂಗನ್ ಅವರಿಗೆ ಎಂಜಿನಿಯರಿಂಗ್ನಲ್ಲಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ, ಏರೋಸ್ಪೇಸ್ನಲ್ಲಿ ಡಾ. ವಿಕ್ರಮ್ ಸಾರಾಭಾಯ್ ಪ್ರೇರಿತ್ ಪ್ರಶಸ್ತಿ, ಖಗೋಳಶಾಸ್ತ್ರದಲ್ಲಿ ಎಂಪಿ ಬಿರ್ಲಾ ಸ್ಮಾರಕ ಪ್ರಶಸ್ತಿ, ಅನ್ವಯಿಕ ವಿಜ್ಞಾನದಲ್ಲಿ ಎಂಎಂ ಚುಗನಿ ಸ್ಮಾರಕ ಪ್ರಶಸ್ತಿ, ವಿಜ್ಞಾನದಲ್ಲಿ ಎಚ್ಕೆ ಫಿರೋದಿಯಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ.
ಮಾಜಿ ಸಚಿವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ರಾತ್ರಿಯಿಡೀ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಮನೆ ಮೇಲೆ ಈ ದಾಳಿ ನಡೆದಿದೆ. ಚಿನ್ನ ಹಾಗೂ ಕೆಲ ವ್ಯವಹಾರದಲ್ಲಿ ಐಶ್ವರ್ಯಾ ಗೌಡ ಹಾಗೂ ಶಿಲ್ಪಾ ಗೌಡ ಎಂಬುವವರು ವಂಚನೆ ಮಾಡಿದ್ದರು ಎಂಬ ಆರೋಪ ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ತನಿಖೆ ವೇಳೆ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಸಿರುವುದು ಪತ್ತೆಯಾಗಿತ್ತು. ಚಿನ್ನ ವಂಚನೆ ಪ್ರಕರಣದಲ್ಲಿ ಕೋಟ್ಯಾಂತರ ರೂಪಾಯಿ ಬೇನಾಮಿ ವ್ಯವಹಾರ ನಡೆಸಿದ್ದಾರೆ ಎಂದು ಪೊಲೀಸರು ಇಡಿಗೆ ಮಾಹಿತಿ ನೀಡಿದ್ದರು. ಪಕ್ಷ ಯಾವುದೇ ಇರಲಿ ಓರ್ವ ಮನುಷ್ಯನಿಗೆ ಕಿರುಕುಳ ಕೊಡುವುದಕ್ಕೂ ಒಂದು ಮಿತಿಯಿರಬೇಕು ಎಂದು ವಿನಯ್ ಕುಲಕರ್ಣಿ ಆಕ್ರೋಶ ಹೊರಹಾಕಿದ್ದಾರೆ.
Advertisement