ರಾಜ್ಯದಲ್ಲಿರುವ ಪಾಕಿಸ್ತಾನದ ಪ್ರಜೆಗಳನ್ನು ಪತ್ತೆ ಹಚ್ಚಲು ಸಂಬಂಧಪಟ್ಟ ರಾಜ್ಯದ ಎಲ್ಲಾ ಎಸ್ ಪಿಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಪಾಕ್ ಪ್ರಜೆಗಳನ್ನು ಗುರುತಿಸಿ ಅವರನ್ನು ಪಾಕಿಸ್ತಾನಕ್ಕೆ ರವಾನಿಸಬೇಕೆಂದು ನಿನ್ನೆಯಷ್ಟೇ ಸೂಚನೆ ಬಂದಿದೆ. ಅದರ ಪ್ರಕಾರ ಪಾಕ್ ಪ್ರಜೆಗಳನ್ನು ಪತ್ತೆ ಹಚ್ಚಲಾಗುವುದು. ದೀರ್ಘ ಕಾಲದ ವೀಸಾ ಹೊಂದಿರುವ ಪಾಕ್ ಪ್ರಜೆಗಳಿಗೆ ಕೇಂದ್ರ ಸರ್ಕಾರವೇ ವಿನಾಯಿತಿ ನೀಡಿದೆ ಎಂದು ಪ್ರಶ್ನೆಯೊಂದಕ್ಕೆ ಪರಮೇಶ್ವರ್ ಉತ್ತರಿಸಿದ್ದಾರೆ.
ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಬೇಕಿತ್ತು. ಕೇಂದ್ರ ಸರ್ಕಾರದವರನ್ನು ನಂಬಿ ಪ್ರವಾಸಿಗರು ಹೋಗಿದ್ದರು ಈಗ ಯಾವುದೇ ಕ್ರಮಗಳನ್ನು ಕೇಂದ್ರ ಕೈಗೊಂಡರೂ, ಪ್ರಾಣ ಕಳೆದುಕೊಂಡ 26 ಜನ ಮತ್ತೆ ಬದುಕಿ ಬರಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ. ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ. ಕಾಶ್ಮೀರ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದಿದ್ದಾರೆ.
ಮತ್ತೊಂದು ಎಟಿಎಂ ಲೂಟಿ ಮಾಡಲು ಯೋಜಿಸುತ್ತಿದ್ದ ಇಬ್ಬರು ಡಕಾಯಿತರನ್ನು ಬಂಧಿಸಲು ಪ್ರಯತ್ನಿಸಿದ ಪೊಲೀಸ್ ತಂಡದ ಮೇಲೆ ದಾಳಿ ಮಾಡಿದ್ದು, ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ಗಾಯಗೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದ ರಿಂಗ್ ರಸ್ತೆಯ SBI ಎಟಿಎಂ ಧ್ವಂಸಗೊಳಿಸಿ ದರೋಡೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಸಬರ್ಬನ್ ಠಾಣೆಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಶನಿವಾರ ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಡಾ.ಶರಣಪ್ಪ, ಸುಳಿವಿನ ಆಧಾರದ ಮೇಲೆ ಕಲಬುರಗಿ ಹೊರವಲಯದ ಬೇಲೂರು ಕ್ರಾಸ್ ಕೈಗಾರಿಕಾ ಪ್ರದೇಶದ ಪೂಜಾರಿ ಚೌಕ್ ಬಳಿ ಏಪ್ರಿಲ್ 9 ರಂದು ಎಸ್ಬಿಐ ಎಟಿಎಂ ಲೂಟಿ ಮಾಡಿದ ಆರೋಪಿಗಳನ್ನು ಪೊಲೀಸ್ ತಂಡ ಪತ್ತೆ ಮಾಡಿದೆ.
ಮೊದಲ ಬಾರಿಗೆ ನೂತನ ಸಂಸತ್ ಭವನದ ಆವರಣದಲ್ಲಿ ಜಗದ್ಗುರು ಬಸವೇಶ್ವರರ ಜಯಂತಿಯನ್ನು ಆಚರಿಸಲಾಗುತ್ತಿದೆ. ಶುಕ್ರವಾರ ನಗರದ ಪ್ರೆಸ್ಕ್ಲನಬ್ನ ಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಈ ಸಂಬಂಧ ಮಾಹಿತಿ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಲೋಕಸಭಾ ಸ್ಪೀಕರ್ ಓಂಪ್ರಕಾಶ್ ಬಿರ್ಲಾ, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಪ್ರತಿವರ್ಷ ಕರ್ನಾಟಕದಲ್ಲಿ ನಡೆದಂತೆ ಇನ್ನು ಮುಂದೆ ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಬಸವ ಜಯಂತಿ ನಡೆಯುತ್ತದೆ. ಇದಕ್ಕಾಗಿ ನಾನು ಪ್ರಧಾನಿ ಮೋದಿ ಹಾಗೂ ಲೋಕಸಭೆಯ ಸ್ಪೀಕರ್ ಓಂಪ್ರಕಾಶ್ ಬಿರ್ಲಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆಂದು ತಿಳಿಸಿದರು.
ಚಿನ್ನ, ನಗದು ಮತ್ತು ಬ್ಯಾಂಕ್ ಠೇವಣಿಗಳ ಮೇಲೆ ಹೆಚ್ಚಿನ ಆದಾಯ ನೀಡುವ ಭರವಸೆ ನೀಡಿ ಜನರನ್ನು ವಂಚಿಸಿದ ಆರೋಪದ ಮೇಲೆ ಬಂಧಿತರಾಗಿರುವ ಐಶ್ವರ್ಯಾ ಗೌಡ ಅವರನ್ನು ಹೆಚ್ಚಿನ ವಿಚಾರಣೆಗಾಗಿ 14 ದಿನ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಐಶ್ವರ್ಯಾ ಗೌಡ(33) ಅವರನ್ನು ಏಪ್ರಿಲ್ 24 ರಂದು ವಶಕ್ಕೆ ತೆಗೆದುಕೊಳ್ಳಲಾಯಿತು ಮತ್ತು ಪಿಎಂಎಲ್ಎ ವಿಶೇಷ ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 24-25 ರಂದು ಕರ್ನಾಟಕದ 14 ಸ್ಥಳಗಳಲ್ಲಿ ಇಡಿ ಶೋಧ ನಡೆಸಿತ್ತು. ದಾಳಿ ವೇಳೆ ಆರೋಪಿ ಐಶ್ವರ್ಯಾ ಗೌಡ ಅವರ ಮನೆಯಲ್ಲಿ ಸುಮಾರು 2.25 ಕೋಟಿ ರೂ. ನಗದು ದೊರೆತಿದ್ದು, ಈ ಬಗ್ಗೆ ಪ್ರಶ್ನಿಸಿದಕ್ಕೆ ಸೂಕ್ತ ಸಮಜಾಯಿಷಿ ನೀಡದ ಕಾರಣ ಅವರನ್ನು ಬಂಧಿಸಲಾಗಿದೆ.
Advertisement