
ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ವರದಿಯಲ್ಲಿ ಗೊಂದಲ ಸೃಷ್ಟಿಯಾಗಿದ್ದು, ಮತ್ತೊಮ್ಮೆ ಸಮೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಒತ್ತಾಯಿಸಿದ್ದಾರೆ.
ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (SES-2025) ವರದಿಯನ್ನು ಪಾರದರ್ಶಕವಾಗಿ ಮಾಡಲಾಗಿಲ್ಲ. ಆದರೂ ರಾಜ್ಯ ಸರ್ಕಾರ ಈ ವರದಿಯ ಮೂಲಕ ಜನರ ಭಾವನೆಗಳೊಂದಿಗೆ ಆಟವಾಡುತ್ತಿದೆ ಎಂದು ಕಿಡಿಕಾರಿದರು.
ಹಿಂದುಳಿದ ವರ್ಗಗಳ ಆಯೋಗದ ಆಗಿನ ಅಧ್ಯಕ್ಷ ಎಚ್. ಕಾಂತರಾಜು ವರದಿಗೆ ಸಹಿ ಹಾಕದಿದ್ದರೂ, ಪ್ರಸ್ತುತ ವರದಿಯು ಕಾಂತರಾಜು ಆಯೋಗದ ವರದಿಯಂತೆಯೇ ಇದೆ. ಹೀಗಾಗಿ ಹೊಸ ಸಮೀಕ್ಷೆಯ ಅವಶ್ಯಕತೆಯಿದ್ದು, ಸಿದ್ದರಾಮಯ್ಯ ಅವರು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕೆಂದು ಆಗ್ರಹಿಸಿದರು.
ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕುರಿತ ಪ್ರಶ್ನೆಗೆ ಉತ್ತರಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿಯೂ ಮೂರು ಟರ್ಮಿನಲ್ಗಳಿರುವ ಒಂದು ವಿಮಾನ ನಿಲ್ದಾಣವಿದೆ. ಎಲ್ಲಾ ಟರ್ಮಿನಲ್ಗಳು ಒಂದೇ ಸ್ಥಳದಲ್ಲಿದ್ದರೆ, ಪ್ರಯಾಣಿಕರಿಗೆ ಸಹಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಏತನ್ಮಧ್ಯೆ, ಯಶವಂತಪುರ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲಾಗುತ್ತಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಒಂದು ಸೇರಿದಂತೆ ಬೆಂಗಳೂರಿನಲ್ಲಿ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ರೈಲ್ವೆ ಟರ್ಮಿನಲ್ಗಳ ಅಗತ್ಯವಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಲಿದೆ. ತೆಲಂಗಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಇತರ ರಾಜ್ಯಗಳ ವಿಮಾನ ನಿಲ್ದಾಣಗಳ ಬಳಿ ಟರ್ಮಿನಲ್ಗಳನ್ನು ನಿರ್ಮಿಸಿದ್ದೇವೆ. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚುತ್ತಿದ್ದು, ಜೆ.ಎಚ್. ಪಟೇಲ್ ಮುಖ್ಯಮಂತ್ರಿಯಾಗಿದ್ದಾಗ, ನಾವು ಮೆಟ್ರೋವನ್ನು ಪ್ರಾರಂಭಿಸಿದ್ದೆವು. ಇಂದು ಬೆಂಗಳೂರಿನಲ್ಲಿ ಲಕ್ಷಾಂತರ ಜನರು ಸೇವೆಯನ್ನು ಬಳಸುತ್ತಿದ್ದಾರೆಂದು ತಿಳಿಸಿದರು.
Advertisement