
ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿ ಘಟನೆ ಬಳಿಕ ಕೇಂದ್ರ ಸರ್ಕಾರ ಕೈಗೊಂಡ ಕ್ರಮವನ್ನು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಶ್ಲಾಘಿಸಿದ್ದು, ಆದಷ್ಟು ಬೇಗ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ವಶಕ್ಕೆ ಪಡೆದು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿ ಎಂದು ಒತ್ತಾಯಿಸಿದ್ದಾರೆ.
ಅಥಣಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 26 ಅಮಾಯಕ ಪ್ರವಾಸಿಗರು ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಅವರ ದುಃಖಿತ ಕುಟುಂಬಗಳಿಗೆ ಶಕ್ತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ಯಾರೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ನಾವು ಭಾರತೀಯ ಪ್ರಜೆಗಳಾಗಿ ಒಟ್ಟಾಗಿದ್ದೇವೆ. ಉಗ್ರಗಾಮಿಗಳನ್ನು ನಿಗ್ರಹ ಮಾಡಲು ಕೇಂದ್ರ ಸರಕಾರ ಮೊದಲು ಪಿಒಕೆಯನ್ನು ವಶಪಡಿಸಿಕೊಳ್ಳಬೇಕು ಎಂದು ಹೇಳಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮ ಬಹಳ ದೊಡ್ಡದಾಗಿ ಬೆಳೆಯುತ್ತಿದೆ. ಅಲ್ಲಿರುವ ಸಾರ್ವಜನಿಕರು ನೆಮ್ಮದಿಯಿಂದ ಜೀವನ ಕಟ್ಟಿಕೊಂಡು ಬದುಕು ಸಾಗಿಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಎಂದರೆ ಅದು ಭೂಲೋಕದ ಸ್ವರ್ಗ ಎಂದು ಪ್ರಖ್ಯಾತಿಯನ್ನು ಪಡೆದಿದೆ. ನಾನು ಕೂಡ ಕಳೆದ ಆರು ತಿಂಗಳ ಹಿಂದೆ ಭೇಟಿ ನೀಡಿದ್ದೆ. ಈ ಘಟನೆಯಿಂದಾಗಿ ಅಲ್ಲಿನ ಪ್ರವಾಸೋದ್ಯಮ ಕುಗ್ಗಿದೆ. ಈ ಉಗ್ರಗಾಮಿಗಳ ನಿರ್ಮೂಲನೆಗೆ ನಾವು ಎಲ್ಲರೂ ಒಗ್ಗಟ್ಟಾಗಿ ಬೆಂಬಲವನ್ನು ನೀಡುತ್ತೇವೆ. ಈಗಾಗಲೇ ಕೇಂದ್ರ ಸರಕಾರ ಪಾಕಿಸ್ತಾನ ವಿರುದ್ಧ ರಾಜತಾಂತ್ರಿಕ ನಿರ್ಣಯಗಳನ್ನು ಕೈಗೊಂಡಿದೆ. ಉಗ್ರರ ದಾಳಿ ಬಳಿಕ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮ ಶ್ಲಾಘನೀಯವಾಗಿದ್ದು, ಇದಕ್ಕೆ ನನ್ನ ಬೆಂಬಲವಿದೆ ಎಂದು ತಿಳಿಸಿದ್ದಾರೆ.
Advertisement